ಲಾಟಿನ್ ಹಿಡಿದು ಪ್ರತಿಭಟಿಸುತ್ತಿದ್ದ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ
ಬೆಂಗಳೂರು, ಜೂನ್ 11 : ಹಗಲು ಹೊತ್ತಿನಲ್ಲಿ ಲ್ಯಾಟೀನ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ವಿದ್ಯುತ್ ದರ ಎರಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ ಹಮ್ಮಿಕೊಂಡಿದ್ದರು.
ಮಂಗಳವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಚೇರಿ ಮುಂದೆ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸುತ್ತಿದ್ದರು. ತಮ್ಮ ಬೆಂಬಲಿಗರ ಜೊತೆ ಲಾಟೀನ್ ಹಿಡಿದು, ನಿಗಮದ ಕಚೇರಿ ಮುಂದೆ ಮಲಗಿ ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ಅವರನ್ನು ವಶಕ್ಕೆ ಪಡೆಯಲಾಯಿತು.
ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಅವೈಜ್ಞಾನಿಕವಾಗಿದೆ ಎಂದು ಘೋಷಣೆಗಳನ್ನು ಕೂಗುತ್ತಾ ಲಾಟೀನ್ ಹಿಡಿದು ಪ್ರತಿಭಟನೆ ನಡೆಸಲಾಯಿತು. ಕನ್ನಡ ಒಕ್ಕೂಟದ ವಿವಿಧ ಮುಖಂಡರು ಸಹ ಪಾಲ್ಗೊಂಡಿದ್ದರು.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮೇ 30ರಂದು ರಾಜ್ಯದಲ್ಲಿ ವಿದ್ಯುತ್ ದರವನ್ನು ಹೆಚ್ಚಳ ಮಾಡಿತ್ತು. 5 ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದಲ್ಲಿವೆ ಎಂದು ಹೇಳಿದ್ದ ಆಯೋಗ ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿತ್ತು.

ಜನಸಾಮಾನ್ಯರಿಗೆ ಹೊರೆ
ವಿದ್ಯುತ್ ದರ ಏರಿಕೆಯಿಂದಾಗಿ ಜನ ಸಾಮಾನ್ಯದ ಬೆನ್ನು ಮೂಳೆ ಮುರಿದಿದೆ. ವ್ಯಾಪಾರಸ್ಥರಿಗೆ ಹೊಡೆತ ಬಿದ್ದಿದೆ. ವಿದ್ಯುತ್ ದರ ಏರಿಕೆ ಅವೈಜ್ಞಾನಿಕ ಎಂದು ವಾಟಾಳ್ ನಾಗರಾಜ್ ಆರೋಪಿಸಿದರು. ತಮಗೆ ಇಚ್ಛೆ ಬಂದಷ್ಟು ಏಕಾಏಕಿ ವಿದ್ಯುತ್ ದರ ಏರಿಸಿರುವುದನ್ನು ಖಂಡಿಸಿದರು.

ವಾಟಾಳ್ ಪೊಲೀಸರ ವಶಕ್ಕೆ
ವಿದ್ಯುತ್ ದರ ಏರಿಕೆ ಕಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಸಮೀಪದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಾರ್ಯಾಲಯದ ಮುಂದೆ ಲಾಟೀನ್ ಹಿಡಿದು ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ವಿದ್ಯುತ್ ದರ ಹೆಚ್ಚಳ
ಕರ್ನಾಟಕದಲ್ಲಿ ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಇಂಧನಗಳ ಬೆಲೆ ಏರಿಕೆ ಆಗಿರುವುದರಿಂದ ದರ ಏರಿಕೆ ಅನಿವಾರ್ಯವಾಗಿದೆ ಎಂದು ಕೆಇಆರ್ಸಿ ದರ ಹೆಚ್ಚಳ ಮಾಡಿರುವುದನ್ನು ಸಮರ್ಥಿಸಿಕೊಂಡಿದೆ.

ನಷ್ಟದ ನೆಪ ಹೇಳಿದ ಕೆಇಆರ್ಸಿ
2017-18ನೇ ಸಾಲಿನಲ್ಲಿ 2192.33 ಕೋಟಿ ನಷ್ಟವಾಗಿದೆ ಎಂದು ಹೇಳಿರುವ ಕೆಇಆರ್ಸಿ ರಾಜ್ಯದ 5 ವಿದ್ಯುತ್ ಸರಬರಾಜು ಕಂಪನಿಗಳಿಗೆ ಅನ್ವಯವಾಗುವಂತೆ ದರ ಏರಿಕೆ ಮಾಡಿದೆ. ವಾಟಾಳ್ ನಾಗರಾಜ್ ಅವರು ಇದನ್ನು ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದರು.












Click it and Unblock the Notifications