ವಿವಿ ಕುಲಪತಿಗಳಿಗೆ ಎಚ್ಚರಿಕೆ ಕೊಟ್ಟ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ
ಬೆಂಗಳೂರು, ಫೆಬ್ರವರಿ 7; ಯುಜಿಸಿ ಮಾನದಂಡಗಳ ಅನ್ವಯ ಕನಿಷ್ಠ ಮೂಲಸೌಲಭ್ಯಗಳಿಲ್ಲದ ಸಂಸ್ಥೆಗಳಿಗೆ ಕಾಲೇಜು ತೆರೆಯಲು ಶಿಫಾರಸು ಮಾಡಿದರೆ ವಿಶ್ವವಿದ್ಯಾಲಯದ ಉಪ ಕುಲಪತಿ ಹಾಗೂ ರಿಜಿಸ್ಟ್ರಾರ್ ಅವರನ್ನು ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಎಚ್ಚರಿಸಿದ್ದಾರೆ.
ರಾಜ್ಯದ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರಿಗೆ ಶುಕ್ರವಾರ ಸರ್ಕಾರದ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಮತ್ತು ಆಡಳಿತಾತ್ಮಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಕಾನೂನನ್ನು ಪ್ರಶ್ನಿಸುವ ಅಧಿಕಾರ ವಿದ್ಯಾರ್ಥಿಗಳಿಗೆ ಕೊಟ್ಟೋರ್ಯಾರು?: ಆಶ್ವತ್ಥ ನಾರಾಯಣ
"ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪ ಆಗಬಾರದು ಎಂಬ ಕಾರಣಕ್ಕೆ ವಿಶ್ವವಿದ್ಯಾಲಯಗಳಿಗೆ ಸ್ವಾಯತ್ತೆ ನೀಡಲಾಗುತ್ತದೆ. ಆದರೆ, ಕೊಟ್ಟಂತಹ ಅಧಿಕಾರ ಪ್ರಯೋಜನ ಆಗದಿದ್ದರೆ ಅದನ್ನು ವಾಪಸ್ ಪಡೆಯಬಹುದು. ವಿಶ್ವವಿದ್ಯಾಲಯಗಳಿಗೆ ನಮ್ಮ ಸರ್ಕಾರದಿಂದ ಹೆಚ್ಚಿನ ಸ್ವಾತಂತ್ರ್ಯ ಕೊಡಲಾಗಿದೆ. ಇಂಥ ಸ್ವಾತಂತ್ರ್ಯ ಮತ್ತು ಅಧಿಕಾರವನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು' ಎಂದು ಡಾ. ಅಶ್ವತ್ಥನಾರಾಯಣ ಖಡಕ್ ಸಂದೇಶ ನೀಡಿದ್ದಾರೆ.
ನೇಮಕದಲ್ಲಿ ಪಾರದರ್ಶಕತೆ
"ವಿಶ್ವವಿದ್ಯಾಲಯಗಳಲ್ಲಿ ಕೇವಲ ಲಿಖಿತ ಪರೀಕ್ಷೆ ಮೂಲಕ ನೇಮಕ ಆಗುತ್ತಿದೆ. ಪಾರದರ್ಶಕತೆ ಕಾಯ್ದುಕೊಳ್ಳುತ್ತಿದ್ದೇವೆ. ಯುಜಿಸಿ ಮಾನದಂಡದ ಪ್ರಕಾರ ಅರ್ಜಿದಾರರ ಅರ್ಜಿಯನ್ನು ಪರಿಶೀಲಿಸಿ, ಮೌಲ್ಯಮಾಪನ ನಡೆಸಿ, ವಿವಿ ಮಟ್ಟದಲ್ಲೇ ನೇಮಕ ಆಗುವುದು. ಪರೀಕ್ಷಾ ಪ್ರಾಧಿಕಾರದಿಂದ ಯಾವುದೇ ಪರೀಕ್ಷೆ ಅಥವಾ ಸಂದರ್ಶನ ನಡೆಸುವುದಿಲ್ಲ. ಅರ್ಜಿಗಳನ್ನು ವಿಶ್ಲೇಷಿಸಿ 1:3 ಅನುಪಾತದಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾಲಯಗಳಿಗೆ ಕಳುಹಿಸಿಕೊಡಲಾಗುತ್ತದೆ. ಅಲ್ಲಿಯೇ ಆಯ್ಕೆ ಪ್ರಕ್ರಿಯೆ ನಡೆಯುವುದು' ಎಂದು ಅವರು ಸ್ಪಷ್ಟಪಡಿಸಿದರು.
ಆನ್ಲೈನ್ ವ್ಯವಸ್ಥೆಗೆ ಒತ್ತು
"ಸಿಂಡಿಕೇಟ್ ಸಭೆ ವ್ಯವಸ್ಥಿತವಾಗಿ ರೂಪಿಸಬೇಕು. ಇಲ್ಲಿ ಮುಚ್ಚುಮರೆ ಬೇಡ. ಕುಲಪತಿಗಳ ಗೌರವ ಬಹಳ ಎತ್ತರದಲ್ಲಿದೆ. ಉತ್ತರದಾಯಿತ್ವ ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳುವ ಮೂಲಕ ಹುದ್ದೆಯ ಘನತೆಯನ್ನು ಹೆಚ್ಚಿಸಬೇಕು. ಎಲ್ಲ ವಿಶ್ವವಿದ್ಯಾಲಯಗಳನ್ನು ಒಂದೇ ವೇದಿಕೆಯಡಿ ತಂದು ಉತ್ತರದಾಯಿತ್ವ ಮತ್ತು ಪಾರದರ್ಶಕತೆ ತರಲು ತೀರ್ಮಾನಿಸಲಾಗಿದೆ. ಇದರಿಂದ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸಾಧ್ಯ. ನಮ್ಮ ರಾಜ್ಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇಂಥ ಸಂದರ್ಭದಲ್ಲೂ ಕಡತಗಳಲ್ಲಿ ಕಾರ್ಯ ನಿರ್ವಹಿಸುವುದು ಸರಿಯಲ್ಲ. ವಿಶ್ವವಿದ್ಯಾಲಯಗಳ ಎಲ್ಲ ಕೆಲಸ, ಶಿಫಾರಸುಗಳು ಆನ್ಲೈನ್ ಮೂಲಕವೇ ನಡೆಯಬೇಕು' ಎಂದು ಸಚಿವರು ತಾಕೀತು ಮಾಡಿದರು.
ಡಿಸಿಎಂ ಅಶ್ವತ್ಥನಾರಾಯಣ, ಮೈಸೂರು ಐಜಿಪಿಗೆ ಚುನಾವಣಾ ಆಯೋಗ ನೋಟಿಸ್
ಯುವ ಸಬಲೀಕರಣ ಕೇಂದ್ರ ಪ್ರಾರಂಭ
"ನಮ್ಮ ಸರ್ಕಾರ ಆರಂಭಿಸಿರುವ ಯುವ ಸಬಲೀಕರಣ ಕೇಂದ್ರದ ಮೂಲಕ ಪ್ರತಿ ಶಾಲೆಯಲ್ಲೂ ಒಬ್ಬ ಸಮಾಲೋಚಕರನ್ನು ನೇಮಿಸಿಕೊಳ್ಳಲಾಗುವುದು. ಪ್ರೌಢಶಾಲೆ ಮಟ್ಟದಲ್ಲೇ ಮುಂದಿನ ಓದು, ಕೌಶಲ ತರಬೇತಿ, ಶಿಕ್ಷಣ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು. ಇಂಟರ್ನ್ಶಿಪ್, ಅಪ್ರೆಂಟಿಸ್ಶಿಪ್, ಪ್ರಾಜೆಕ್ಟ್ ಹಾಗೂ ಮುಂದಿನ ವೃತ್ತಿ ಜೀವನದ ಬಗ್ಗೆಯೂ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಲಾಗುತ್ತಿದೆ. ಪದವಿ ಮುಗಿಸಿ ಕೆಲಸ ಹುಡುಕುವ ಬದಲು, ವಿದ್ಯಾರ್ಥಿ ದೆಸೆಯಲ್ಲಿ ಮುಂದಿನ ಉದ್ಯೋಗಕ್ಕೆ ಅಗತ್ಯ ಕೌಶಲ್ಯ ಕಲಿಯುಲು ಅವಕಾಶ ಕಲ್ಪಿಸಲಾಗಿದೆ' ಎಂದು ಮಾಹಿತಿ ನೀಡಿದರು.
ಸಮಾರಂಭದಲ್ಲಿ ಇದ್ದವರು
ಕಾರ್ಯಾಗಾರದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜ್ಕುಮಾರ್ ಖತ್ರಿ, ಉನ್ನತ ಶಿಕ್ಷಣ ಪರಿಷತ್ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎ. ಕೋರಿ ಮತ್ತಿತರರು ಉಪಸ್ಥಿತರಿದ್ದರು.