ಕುಮಾರಸ್ವಾಮಿಗೆ ಧನ್ಯವಾದ ಹೇಳಿದ ಡಿ.ವೀರೇಂದ್ರ ಹೆಗ್ಗಡೆ
ಬೆಂಗಳೂರು, ಮೇ 29: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ತೀವ್ರ ನೀರಿನ ಅಭಾವವುಂಟಾಗಿದ್ದು, ಈ ಬವಣೆಗೆ ಪರಿಹಾರ ಒದಗಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಸ್ತಾಪಿಸಿದ್ದರು. ಮುಖ್ಯಮಂತ್ರಿಯವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚೆಯನ್ನೂ ನಡೆಸಿದ್ದರು.
ಇದೀಗ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್ ಸೆಲ್ವಮಣಿ, ಕರ್ನಾಟಕ ಜಲವಾಹಿನಿ ಮಂಡಳಿ ಮತ್ತು ಸಣ್ಣ ನೀರಾವರಿ ಯೋಜನೆಯ ಅಧಿಕಾರಿಗಳು ಧರ್ಮಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಿದ್ದು, ಈ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಕುಮಾರಸ್ವಾಮಿಯವರಿಗೆ ಧನ್ಯವಾದ ಹೇಳಿ ಪತ್ರ ಬರೆದಿದ್ದಾರೆ.
ಧರ್ಮಸ್ಥಳದಲ್ಲಿ ನೀರಿನ ಹರಿವನ್ನು ಹಿಡಿದಿಡಲು ಇನ್ನೊಂದು ಚೆಕ್ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ವೀರೇಂದ್ರ ಹೆಗ್ಗಡೆ ಅವರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವುದಾಗಿ ತಿಳಿದುಬಂದಿತ್ತು. ಇದೀಗ ಆ ಕಾರ್ಯಗಳು ಮುಗಿದಿದ್ದು, ಡಿ. ವೀರೇಂದ್ರ ಹೆಗ್ಗಡೆಯವರು ಧನ್ಯವಾದ ತಿಳಿಸಿದ್ದಾರೆ.

'ಧರ್ಮಸ್ಥಳದಲ್ಲಿ ನೀರಿನ ಅಭಾವ ಕಂಡುಬಂದ ತಕ್ಷಣ ನಿಮ್ಮ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್ ಸೆಲ್ವಮಣಿ, ಕರ್ನಾಟಕ ಜಲವಾಹಿನಿ ಮಂಡಳಿ ಮತ್ತು ಸಣ್ಣ ನೀರಾವರಿ ಯೋಜನೆಯ ಅಧಿಕಾರಿಗಳು ಧರ್ಮಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ಗಮನಿಸಿ ಮಾತನಾಡಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ನಮ್ಮ ಕೋರಿಕೆಯನ್ನು ಮನ್ನಿಸಿ, ಕುಡಿಯುವ ನೀರಿನ ಕೊರತೆಯ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ನೇತ್ರಾವತಿ ನದಿ ಮತ್ತು ನೆರಿಯ ನದಿಗೆ 2 ಕಿಂಡಿ ಅಣೆಕಟ್ಟು ನಿರ್ಮಿಸಲು 7 ಕೋಟಿ ರೂಪಾಯಿಯನ್ನು ಮಂಜೂರು ಮಾಡಲು ಅಧಿಕಾರಿಗಳಿಗೆ ಆದೇಶ ನೀಡಿರುವುದು ಸಂತೋಷವಾಗಿದೆ' ಎಂದು ಹೇಳಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ, ರಾಜ್ಯದ ಜನತೆ ಬೆಂಬಲವನ್ನೂ ಹೆಗ್ಗಡೆಯವರು ಸ್ಮರಿಸಿದ್ದಾರೆ. ಬೆಂಗಳೂರಿನಿಂದ ಅನೇಕ ಮಂದಿ ಧರ್ಮಸ್ಥಳಕ್ಕೆ ನೀರನ್ನು ತಂದು ಕೊಟ್ಟಿದ್ದಾರೆ. ಇದನ್ನು ಅನ್ನಪೂರ್ಣ ಛತ್ರದಲ್ಲಿ, ಅಡುಗೆಗೆ ಹಾಗೂ ಭಕ್ತಾದಿಗಳಿಗೆ ಕುಡಿಯಲು ಬಳಸಲಾಗಿದೆ. ನಿಮ್ಮ ಕಾಳಜಿಗೆ ನಮ್ಮ ಕ್ಷೇತ್ರದ ವತಿಯಿಂದ ಹಾಗೂ ಎಲ್ಲಾ ಭಕ್ತಾದಿಗಳ ಪರವಾಗಿ ಕೃತಜ್ಞತೆಗಳು ಎಂದಿದ್ದಾರೆ.












Click it and Unblock the Notifications