ರಾಜೀನಾಮೆ ಕೊಟ್ಟಿರುವುದು ಹೌದು: ಶಾಸಕ ಆನಂದ್ ಸಿಂಗ್ ಸ್ಪಷ್ಟನೆ
ಬೆಂಗಳೂರು, ಜುಲೈ 1: ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದು ನಿಜ ಎಂದು ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಸ್ಪಷ್ಟಪಡಿಸಿದರು.
ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಲು ಮಧ್ಯಾಹ್ನ ತೆರಳಿದ ಅವರು ತಮ್ಮ ರಾಜೀನಾಮೆ ಕುರಿತ ಊಹಾಪೋಹಗಳಿಗೆ ತೆರೆ ಎಳೆದರು.
ರಾಜೀನಾಮೆ ನೀಡಿರುವುದು ನಿಜ. ರಾಜ್ಯಪಾಲರನ್ನು ಭೇಟಿ ಮಾಡಲು ಹೋಗುತ್ತಿದ್ದು, ಅವರ ಭೇಟಿಯ ಬಳಿಕ ಎಲ್ಲ ಮಾಹಿತಿ ನೀಡುವುದಾಗಿ ತಿಳಿಸಿದರು. ರಾಜ್ಯಪಾಲರನ್ನು ಭೇಟಿಯಾಗುತ್ತಿರುವ ಉದ್ದೇಶವನ್ನೂ ನಂತರ ವಿವರಿಸುವುದಾಗಿ ಹೇಳಿದರು.

ತಮಗೆ ಯಾರೂ ರಾಜೀನಾಮೆ ಪತ್ರ ನೀಡಿಲ್ಲ ಎಂಬ ಸ್ಪೀಕರ್ ರಮೇಶ್ ಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಆನಂದ್ ಸಿಂಗ್, ಅವರು ಕೊಟ್ಟಿಲ್ಲವೆಂದರೆ ಇನ್ನೊಂದು ಸಲ ರಾಜೀನಾಮೆ ಕೊಡುತ್ತೇನೆ ಎಂದರು.
ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ಮಾಡುವ ವಿಚಾರದಲ್ಲಿ ಆನಂದ್ ಸಿಂಗ್ ಅವರು ಮೈತ್ರಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದರು. ಭೂಮಿ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಅವರು ಗೃಹ ಸಚಿವಾಲಯಕ್ಕೆ ಪತ್ರವನ್ನೂ ಬರೆದಿದ್ದರು.
ಆದರೆ ಅದಕ್ಕೆ ಸರ್ಕಾರ ಸ್ಪಂದಿಸದ ಕಾರಣ ಸಿಟ್ಟಿಗೆದ್ದು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಶಾಸಕರು ರಾಜೀನಾಮೆ ಸಲ್ಲಿಸುವುದಾದರೆ ಖುದ್ದಾಗಿ ಸ್ಪೀಕರ್ ಅವರನ್ನು ಭೇಟಿ ಮಾಡಿ ಕಾರಣ ಸಹಿತ ರಾಜೀನಾಮೆ ಸಲ್ಲಿಸಬೇಕು. ಅದನ್ನು ಪರಾಮರ್ಶೆಗೆ ಒಳಪಡಿಸಿದ ಬಳಿಕವೇ ಸ್ಪೀಕರ್ ಅಂಗೀಕರಿಸುತ್ತಾರೆ. ಆದರೆ ಆನಂದ್ ಸಿಂಗ್ ಅವರು ಸ್ಪೀಕರ್ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅದನ್ನು ಪರಿಗಣಿಸುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.












Click it and Unblock the Notifications