ಕಾವಲ್ ಭೈರಸಂದ್ರದಲ್ಲಿ ಗಲಭೆ; ಗೃಹ ಸಚಿವರ ಎಚ್ಚರಿಕೆ
ಬೆಂಗಳೂರು, ಆಗಸ್ಟ್ 11 : ಬೆಂಗಳೂರು ನಗರದ ಕಾವಲ್ ಭೈರಸಂದ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ವಾಹನಗಳನ್ನು ಜಖಂಗೊಳಿಸಲಾಗಿದೆ.
ಮಂಗಳವಾರ ರಾತ್ರಿ ಏಕಾಏಕಿ ಕಾವಲ್ ಭೈರಸಂದ್ರದಲ್ಲಿ ಗಲಭೆ ನಡೆದಿದೆ. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಕಾವಲ್ ಭೈರಸಂದ್ರದಲ್ಲಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರ ಮೇಲೆ ಕಲ್ಲು, ಬಾಟಲಿಗಳನ್ನು ತೂರಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಗೃಹ ಸಚಿವರ ಎಚ್ಚರಿಕೆ : ಕಾವಲ್ ಭೈರಸಂದ್ರದಲ್ಲಿ ನಡೆಯುತ್ತಿರುವ ಗಲಭೆ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. "ಈಗ ನಡೆಯುತ್ತಿರುವ ಗಲಭೆ, ಬೆಂಕಿ ಹಚ್ಚುವುದು ಕಾನೂನು ಬಾಹಿರವಾದ ಕೃತ್ಯ. ಯಾವುದೇ ವಿಚಾರ ಇದ್ದರೂ ಕಾನೂನಿನ ಮೂಲಕ ಪರಿಹಾರ ಕಂಡುಕೊಳ್ಳಬೇಕು" ಎಂದು ಹೇಳಿದ್ದಾರೆ.
"ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಉಗ್ರ ಕ್ರಮವನ್ನು ಜರುಗಿಸಲಾಗುತ್ತದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಬೇಕು ಎಂದು ಸೂಚನೆ ಕೊಟ್ಟಿದ್ದೇನೆ. ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕಳಿಸಲಾಗುತ್ತಿದೆ" ಎಂದು ಗೃಹ ಸಚಿವರು ತಿಳಿಸಿದರು.
"ಕೆಎಸ್ಆರ್ಪಿ ಪಡೆಯನ್ನು ಸ್ಥಳಕ್ಕೆ ಕಳಿಸಲಾಗುತ್ತಿದೆ. ಪರಿಸ್ಥಿತಿಯನ್ನು ಸುಧಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ನಗರದ ಇತರ ಪ್ರದೇಶದಲ್ಲಿ ಯಾರೂ ಸಹ ಉದ್ವೇಗಕ್ಕೆ ಒಳಗಾರಬಾರದು ಪೊಲೀಸರು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ" ಎಂದರು.
ಗೃಹ ಸಚಿವರ ವಿಡಿಯೋ












Click it and Unblock the Notifications