Voter Data Theft: ಬೆಂಗಳೂರು ನಗರ ಡಿಸಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
ಬೆಂಗಳೂರು, ಡಿಸೆಂಬರ್ 09: ಮತದಾರರ ದತ್ತಾಂಶ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ.
ಮತದಾರರ ದತ್ತಾಂಶ ಕಳ್ಳತನ ಪ್ರಕರಣಕ್ಕೆ ಸಂಬಂಧ ಪೊಲೀಸರು ಸರ್ಕಾರೇತರ ಸಂಸ್ಥೆ ಚಿಲುಮೆಗೆ ಮಾಲೀಕರು ಸೇರಿದಂತೆ 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಗೆ ಮೊದಲು ಸಮನ್ಸ್ ನೀಡಲಾಗಿತ್ತು. ಅದೇ ನಿರೀಕ್ಷೆಯಲ್ಲಿದ್ದ ಬೆಂಗಳೂರು ನಗರದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ನಿರೀಕ್ಷಣಾ ಜಾಮೀನು ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಸಮನ್ಸ್ ನೀಡಿದ್ದರು
ಕೆ. ಶ್ರೀನಿವಾಸ್ ಅವರ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 8ರಂದು ನ್ಯಾಯಾಲಯ ಕಾಯ್ದಿರಿಸಿತ್ತು. ಅದರಂತೆ ಗುರುವಾರ ವಿಚಾರಣ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರ ಮನವಿಯನ್ನು ತಿರಸ್ಕರಿಸಿದೆ. ಜಿಲ್ಲಾಧಿಕಾರಿಗಳು ಹೈಕೋರ್ಟ್ ಮೊರೆ ಹೋಗಬಹುದು ಎಂದು ಹಲಸೂರು ಗೇಟ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದರು.

ಡಿಸಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ನ್ಯಾಯಾಂಗ ಬಂಧನದಲ್ಲಿರುವ ನಾಲ್ವರು ಬಿಬಿಎಂಪಿ ಕಂದಾಯ ಅಧಿಕಾರಿಗಳು ಸಾಮಾನ್ಯ ಜಾಮೀನು ಪಡೆಯುವುದು ಕಷ್ಟಕರವಾಗಿದೆ. ಪ್ರಕರಣ ಸಂಬಂಧ ಬಿಬಿಎಂಪಿ ಅಧಿಕಾರಿಗಳಾದ ಎಸ್.ರಂಗಪ್ಪ, ಸೇರಿದಂತೆ ಕೆಲವು ಬಿಬಿಎಂಪಿ ಅಧಿಕಾರಿಗಳು ಅಮಾನತುಗೊಂಡಿದ್ದಾರೆ.
ಅಧಿಕಾರಿಗಳನ್ನೇ ಹೊಣೆ ಮಾಡಿದ್ದ ಪೊಲೀಸರು
ಹೆಚ್ಚುವರಿ ಚುನಾವಣಾ ನೋಂದಣಿ ಅಧಿಕಾರಿಗಳಾಗಿ ನೇಮಕಗೊಂಡಿದ್ದ ಶ್ರೀನಿವಾಸ್ ಮತ್ತು ರಂಗಪ್ಪ ಇಬ್ಬರನ್ನೂ ಮತದಾರ ದತ್ತಾಂಶ ಸಂಗ್ರಹ ಪ್ರಕರಣ ಹೊಣೆಗಾರರನ್ನಾಗಿ ಮಾಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳು ಚಿಲುಮೆ ಸಂಸ್ಥೆ ಸದಸ್ಯರಿಗೆ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಬೂತ್ ಮಟ್ಟದ ಸಮಿತಿಗಳ ನಕಲಿ ಕಾರ್ಡ್ಗಳು ನೀಡಿದ್ದರು. ಅವರು ಚಿಕ್ಕಪೇಟೆ, ಮಹದೇವಪುರ ಮತ್ತು ಶಿವಾಜಿನಗರದ ವ್ಯಾಪ್ತಿಯಲ್ಲಿ ಮತದಾರರ ಮಾಹಿತಿ ಸಂಗ್ರಹಿಸಿದ್ದರು.
ಬಳಿಕ ಬಿಬಿಎಂಪಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಹಲವರನ್ನು ಬಂಧಿಸಿ ನೋಟಿಸ್ ನೀಡಿದ್ದ ಪೊಲೀಸರು ತಮಗೂ ನೋಟಿಸ್ ನೀಡಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ನಿರೀಕ್ಷೆಯಲ್ಲಿದ್ದರು. ಇದೇ ಕಾರಣಕ್ಕೆ ಅವರು ನೀರಿಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅದು ತಿರಸ್ಕೃತಗೊಂಡಿದೆ.












Click it and Unblock the Notifications