ತಪ್ಪದೇ ಮತದಾನ ಮಾಡಿ; ಜನರನ್ನು ಸೆಳೆಯಿತು ಕ್ಯಾಂಡಲ್ ಲೈಟ್ ಮಾರ್ಚ್
ಬೆಂಗಳೂರು, ಏಪ್ರಿಲ್ 07; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಚುನಾವಣಾ ಫಲಿತಾಂಶ ಮೇ 13ರಂದು ಪ್ರಕಟವಾಗಲಿದೆ. ಈ ಬಾರಿಯ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡಲು ಚುನಾವಣಾ ಆಯೋಗ ಅಭಿಯಾನವನ್ನು ಕೈಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೇವನಹಳ್ಳಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ದೇವನಹಳ್ಳಿಯ ವೇಣುಗೋಪಾಲಸ್ವಾಮಿ ದೇವಾಅಲಯದಿಂದ ಹೊಸ ಬಸ್ನಿಲ್ದಾಣದವರೆಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಕ್ಯಾಂಡಲ್ ಲೈಟ್ ಜಾಥಾ ನಡೆಯಿತು. ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಲತಾ ಮೊಂಬತ್ತಿ ಬೆಳಗುವ ಮೂಲಕ ಜಾಥಾಗೆ ಚಾಲನೆ ನೀಡಿದರು.

ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡುವಂತೆ ಜಿಲ್ಲಾಧಿಕಾರಿಯವರು ಈ ಸಂದರ್ಭದಲ್ಲಿ ತಿಳಿಸಿದರು. ಮತದಾನದ ಪ್ರತಿಜ್ಞಾ ವಿಧಿಯನ್ನು ಈ ಸಂದರ್ಭದಲ್ಲಿ ಎಲ್ಲರೂ ಸ್ವೀಕರಿಸಿದರು. ಕಳೆದ ಬಾರಿಯ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಕ್ಷೇತ್ರಗಳನ್ನು ಜಿಲ್ಲಾಮಟ್ಟದಲ್ಲಿ ಗುರುತಿಸಲಾಗಿದೆ. ಈ ಬಾರಿ ಮತದಾನ ಪ್ರಮಾಣ ಹೆಚ್ಚಳ ಮಾಡಲು ಅನೇಕ ಕಾರ್ಯಕ್ರಮ ರೂಪಿಸಲಾಗಿದೆ.
ಚುನಾವಣಾ ವೇಳಾಪಟ್ಟಿ ಘೋಷಣೆಗೂ ಮೊದಲೇ ಹಲವು ಜಾಗಗಳಲ್ಲಿ ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆ ಮಾಡಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ, ಮಾಹಿತಿ ನೀಡಲಾಗಿದೆ. ಇವಿಎಂ ಹಾಗೂ ವಿವಿಪ್ಯಾಟ್ ಕಾರ್ಯ ವಿಧಾನ, ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಲಾಗಿದೆ.
ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಪ್ರದೇಶಗಳನ್ನು ಗುರುತಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಚುನಾವಣೆಯ ಕುರಿತು ಚಿತ್ರಕಲಾ ಸ್ಪರ್ಧೆ ಪ್ರಬಂಧ ಸ್ಪರ್ಧೆ, ವಿವಿಧ ಸರ್ಕಾರಿ ಇಲಾಖೆಯ ಸಿಬ್ಬಂದಿಗಳಿಂದ ಬೈಕ್ ಜಾಥಾ, ಕ್ಯಾಂಡಲ್ ಲೈಟ್ ಮಾರ್ಚ್, ಲಿಂಗತ್ವ ಅಲ್ಪ ಸಂಖ್ಯಾತರಿಗೆ ಹಾಗೂ ವಿಶೇಷ ಚೇತನರ ಬೈಕ್ ಜಾಥಾ ಮೂಲಕ ಮತದಾನ ಮಾಡುವಂತೆ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ತಾಲೂಕುಗಳಲ್ಲಿ ಆಯೋಜನೆ; ಜಿಲ್ಲೆಯ ಹೊಸಕೋಟೆ ತಾಲೂಕು ಸ್ವೀಪ್ ಸಮಿತಿ ಹಾಗೂ ಹೊಸಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ವತಿಯಿಂದ ಹೊಸಕೋಟೆ ನಗರ ವ್ಯಾಪ್ತಿಯಲ್ಲಿಯೂ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರು ಮತದಾನದ ಕುರಿತ ಸ್ಲೋಗನ್ಗಳನ್ನು ಕೂಗುವ ಮೂಲಕ ನಗರದ ಕಾಲೇಜು ರಸ್ತೆ, ವಿವೇಕಾನಂದ ರಸ್ತೆ ಹಾಗೂ ಗಂಗಮ್ಮನ ಗುಡಿ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಮತದಾನದ ಅರಿವು ಮೂಡಿಸಿದರು ಹಾಗೂ ವಿವೇಕಾನಂದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದರು.
ಚುನಾವಣೆಯ ಹಿನ್ನಲೆಯಲ್ಲಿ ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ನಲ್ಲಿ ವಾಹನಗಳ ತಪಾಸಣೆಗೆ ಚೆಕ್ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ಜಿಲ್ಲಾ ಚುನಾವಣಾಧಿಕಾರಿ ಆರ್. ಲತಾ ಚೆಕ್ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು. ಚುನಾವಣೆಗಾಗಿ ಜಿಲ್ಲಾಡಳಿತ 26 ಚೆಕ್ಪೋಸ್ಟ್, 45 ಫ್ಲೈಯಿಂಗ್ ಸ್ಕ್ವ್ಯಾಡ್ ತಂಡಗಳನ್ನು ರಚನೆ ಮಾಡಿದೆ.
ಚುನಾವಣಾ ಆಯೋಗವು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ. ಮತದಾರರಲ್ಲಿ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಮಾಹಿತಿಗಳನ್ನು ನೀಡುತ್ತಿದ್ದಾರೆ.
1,137 ಮತಗಟ್ಟೆ; ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 8,67,909 ಮತದಾರರಿದ್ದಾರೆ. ಇವರಲ್ಲಿ 4,31,163 ಪುರುಷ, 4,36,625 ಮಹಿಳಾ ಮತದಾರರು ಮತ್ತು ತೃತೀಯ ಲಿಂಗಿಗಳು 121, ಅಂಗವಿಕಲರು 12,481 ಹಾಗೂ 80 ವರ್ಷ ಮೇಲ್ಪಟ್ಟವರು 20,324. ಜಿಲ್ಲೆಯಲ್ಲಿ 1,137 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ವಿಧಾನಸಭಾ ಕ್ಷೇತ್ರಗಳಿವೆ.












Click it and Unblock the Notifications