VV Puram Food Street: ಭರದಿಂದ ಸಾಗಿದ ಫುಡ್ ಸ್ಟ್ರೀಟ್ ನವೀಕರಣ ಕಾರ್ಯ: ಗೋಡೆ ಕುಸಿತ ಪರಿಶೀಲನೆ
ಬೆಂಗಳೂರು, ಆಗಸ್ಟ್ 02: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ದಕ್ಷಿಣ ವಲಯ ವ್ಯಾಪ್ತಿಯ ವಿವಿಪುರಂ ವಾರ್ಡ್ ನಲ್ಲಿ ಬರುವ ಫುಡ್ ಸ್ಟ್ರೀಟ್ (ತಿಂಡಿ ಬೀದಿ) ಹಾಗೂ ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ಬರುವ ಗಂಗಾಧರೇಶ್ವರ ದೇವಸ್ಥಾನ ಗೋಡೆ ಕುಸಿದಿರುವ ಸ್ಥಳ ಕ್ಕೆ ಬಿಬಿಎಂಪಿ ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ ಭೇಟಿ ನೀಡಿ ಪರಿಶೀಲಿಸಿದರು. ಫುಡ್ ಸ್ಟ್ರೀಟ್ ಕಾಮಗಾರಿ ಪರಿಶೀಲಿಸಿ ಕೆಲಸ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿವಿ ಪುರಂನ ತಿಂಡಿ ಬೀದಿಯಲ್ಲಿ ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಒಗದಿಸುವ ನಿಟ್ಟಿನಲ್ಲಿ ಹಾಗೂ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಜ್ಜನ್ ರಾವ್ ವೃತ್ತ ಮತ್ತು ಮಿನರ್ವ ವೃತ್ತದ ನಡುವೆ ಇರುವ ಸುಮಾರು 200 ಮೀಟರ್ ಉದ್ದದ ರಸ್ತೆಯ ಅಭಿವೃದ್ಧಿಯ ಕಾರ್ಯ ನಡೆಯುತ್ತಿದೆ. ಈಗಾಗಲೇ ಒಳಚರಂಡಿ ಸಂಪರ್ಕ, ನೀರು ಸರಬರಾಜು ಸಂಪರ್ಕ, ಮಳೆ ನೀರುಗಾಲುವೆ ಸಂಪರ್ಕ, ಕೇಬಲ್ಗಳ ಲೈನ್ ಡಕ್ಟ್ ಹಾಗೂ ಕೇಬಲ್ ಚೇಂಬರ್ಗೆ ಸಂಬಂಧಿಸಿದ ಕಾಮಗಾರಿಯನ್ನು ಪೂರ್ಣಗೊಂಡಿದೆ.

ರಸ್ತೆಗೆ ಅನುಗುಣವಾಗಿ ಬೆಡ್ ಕಾಂಕ್ರಿಟ್ ಹಾಕಿ 5 ಮೀಟರ್ ಕಾಂಕ್ರೀಟ್ ರಸ್ತೆಯ ಕೆಲಸ ಮಾಡಲಾಗುತ್ತಿದೆ. ಎರಡೂ ಬದಿ 3 ಮೀಟರ್ ಪಾದಚಾರಿ ಮಾರ್ಗ, 25 ವಿದ್ಯುತ್ ದೀಪಗಳ ಅಳವಡಿಕೆ ಕೆಲಸ ಸೇರಿದಂತೆ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ಬಾಕಿ ಇರುವ ಕೆಲಸಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಂಕ್ರೀಟ್ ರಸ್ತೆಗೆ ಕೆಂಗಂದು ಬಣ್ಣ ಅಳವಡಿಕೆ
ಫುಡ್ ಸ್ಟ್ರೀಟ್ ನ 200 ಮೀಟರ್ ಉದ್ದದ ರಸ್ತೆಯಲ್ಲಿ ನಿರ್ಮಿಸುತ್ತಿರುವ 5 ಮೀಟರ್ ಅಗಲದ ಕಾಂಕ್ರೀಟ್ ರಸ್ತೆಯ ಮೆಲ್ಭಾಗಕ್ಕೆ 3 ಎಂಎಂನ ಕೆಂಗಂದು ಬಣ್ಣ ಹಾಕಲಾಗುತ್ತಿದೆ. ಶೇಕಡಾ 70 ರಷ್ಟು ಕಾಂಕ್ರೀಟ್ ರಸ್ತೆಯ ಕಾಮಗಾರಿ ಪೂರ್ಣಗೊಂಡಿದೆ. ಸಂಪೂರ್ಣ ಕಾಂಕ್ರೀಟ್ ರಸ್ತೆ ಪೂರ್ಣಗೊಂಡ ಬಳಿಕ ರಸ್ತೆಗೆ ಕೆಂಗಂದು ಬಣ್ಣದ ಪಾಲೀಶ್ ಮಾಡಲಾಗುತ್ತದೆ. ಇದರಿಂದ ರಸ್ತೆ ಆಕರ್ಷಕವಾಗಿ ಕಾಣಲಿದೆ.
ಗೋಡೆ ದುರಸ್ತಿಗೊಳಿಸಿ ಕೆಲಸ ತ್ವರಿತ ಪೂರ್ಣಕ್ಕೆ ಸೂಚನೆ
ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆಯ ಬಳಿ ಗಂಗಾಧರೇಶ್ವರ ದೇವಸ್ಥಾನ ಬಳಿ ಮಂಗಳವಾರ ಆ.1 ರಂದು ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಚರಣೆಯ ವೇಳೆ ದೇವಾವಲಯದ ಮೇಲ್ಭಾಗದ ಗೋಡೆ ಕುಸಿದು ಬಿದ್ದಿದೆ. ಪಾಲಿಕೆ ವತಿಯಿಂದ ಸದರಿ ಗೋಡೆಯ ದುರಸ್ಥಿ ಕಾರ್ಯ ನಡೆಯುತ್ತಿದೆ.

ಗೋಡೆ ಕುಸಿದಿರುವ ಸ್ಥಳಕ್ಕೆ ದಕ್ಷಿಣ ವಲಯ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಗಂಗಾಧರೇಶ್ವರ ದೇವಸ್ಥಾನವು ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರಲಿದೆ. ದೇವಾಲಯಕ್ಕೆ ಹೊಂದಿಕೊಂಡಿರುವ ಅಂಗಡಿಯ ಮೇಲ್ಭಾಗದ ಗೋಡೆಗೆ ಅಂಗಡಿಯ ನಾಮಫಲಕ ಹಾಗೂ ಶೀಟ್ ಅನ್ನು ಅಳವಡಿಸಲಾಗಿತ್ತು.
ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಜೆಸಿಬಿಯ ಮೂಲಕ ನಾಮಫಲಕ ಹಾಗೂ ಶೀಟ್ ಅನ್ನು ತೆರವುಗೊಳಿಸುವ ಸಮಯದಲ್ಲಿ ದೇವಾಲದ ಮೇಲ್ಭಾಗದ ಗೋಡೆ ತುಂಬಾ ಹಳೆಯದಾಗಿದ್ದ ಪರಿಣಾಮ ಗೋಡೆ ಕುಸಿದು ಬಿದ್ದಿದೆ. ಈ ಸಂಬಂಧ ಈಗಾಗಲೇ ಪಾಲಿಕೆ ವತಿಯಿಂದ ಗೋಡೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ವಿಚಾರಕ್ಕೆ ಪ್ರತಿಕ್ರಿಯಿಸಿ ಜಯರಾಮ್ ರಾಯಪುರ ಅವರು, ಪಾದಚಾರಿ ತೆರವು ಕಾರ್ಯಾಚರಣೆಯ ವೇಳೆ ಆಗಿರುವ ದುರಸ್ತಿ ಕಾರ್ಯವನ್ನು ಈ ವಾರಾಂತ್ಯದೊಳಗಾಗಿ ಪೂರ್ಣಗೊಳಿಸಬೇಕು. ಜೊತಗೆ ಪಾದಚಾರಿ ಮಾರ್ಗದ ತೆರವು ಕಾರ್ಯಾಚರಣೆ ಮಾಡುವ ವೇಳೆ ಮುಜರಾಯಿ ಇಲಾಖೆಯ ಸಹಯೋಗದೊಂದಿಗೆ ಒತ್ತುವರಿ ಮಾಡಿಕೊಂಡಿರುವುದನ್ನು ಗುರುತಿಸಿ ತೆರವುಗೊಳಿಸಲು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಈ ವೇಳೆ ವಲಯ ಮುಖ್ಯ ಅಭಿಯಂತರರಾದ ರಾಜೇಶ್, ಕಾರ್ಯಪಾಲಕ ಅಭಿಯಂತರರಾದ ಮಹಂತೇಶ್, ಯರಪ್ಪ ರೆಡ್ಡಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications