ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ:ಈ ಬಾರಿ ಬೇಸಿಗೆ ಬೆಳೆಗೆ ನೀರಿಲ್ಲ!
ಬೆಂಗಳೂರು, ಫೆಬ್ರವರಿ 04: ಪ್ರಸ್ತುತ ರಾಜ್ಯದ ಕೆಲವು ಜಲಾಶಯಗಳಲ್ಲಿ ಒಳಹರಿವು ಇಲ್ಲದ ಕಾರಣದಿಂದ ಈ ಬಾರಿ ಬೇಸಿಗೆ ಬೆಳೆಗೆ ರೈತರ ಜಮೀನಿಗೆ ನೀರು ಬಿಡದಂತೆ ಜಲಸಂಪನ್ಮೂಲ ಇಲಾಖೆ ಸೂಚನೆ ನೀಡಿದೆ.
ಹೌದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗಲಿದ್ದು, ಜಲಾಶಯಗಳಲ್ಲಿ ಇರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಬಳಸಬೇಕು. ಯಾವುದೇ ಕಾರಣಕ್ಕೂ ಬೇಸಿಗೆ ಬೆಳೆಗೆ ನೀರು ಬಿಡುಗಡೆ ಮಾಡಬಾರದು ಎಂದು ಜಲಸಂಪನ್ಮೂಲ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಪತ್ರದ ಮೂಲಕ ವಿವಿಧ ಜಲಾಶಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಳಗಾವಿ, ಕಲಬುರಗಿ, ಬೆಂಗಳೂರು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಕಾವೇರಿ ನಿರಾವರಿ ನಿಗಮ ನಿಯಮಿತ, ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಬೇಸಿಗೆ ಬೆಳೆಗೆ ರೈತರಿಗೆ ನೀರು ಬಿಡದಂತೆ ಸೂಚಿಸಲಾಗಿದೆ.

2018ರ ಡಿಸೆಂಬರ್ 16ರಂದು ಕಂದಾಯ ಸಚಿವರ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ಮಳೆ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಲಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಜಲಾಶಯದ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲು ನಿರ್ಣಯಿಸಲಾಗಿದೆ.
ಮುಂಬರುವ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗುವುದನ್ನು ತಪ್ಪಿಸಲು, ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ವ್ಯವಸ್ಥಿತವಾಗಿ ಆದ್ಯತೆಯ ಮೇರೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.












Click it and Unblock the Notifications