ಟಿಎ, ಡಿಎ ಬಿಲ್ ಪಡೆಯಲು ಅಧಿವೇಶನಕ್ಕೆ ಹೋಗ್ಬೇಕಾ?: ಮಾಜಿ ಸಿಎಂ ಎಚ್ಡಿಕೆ
ಬೆಂಗಳೂರು, ಡಿಸೆಂಬರ್ 20: "ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನಕ್ಕೆ ಹೋಗಿ ಏನು ಮಾಡಲಿ. ಇಲ್ಲಿಯವರೆಗೆ ಐದು ದಿನ ಕಲಾಪ ನಡೆದಿದೆ. ಟಿಎ, ಡಿಎ ಬಿಲ್ ಕ್ಲೈಮ್ ಮಾಡಿಕೊಳ್ಳಲು ಹೋಗಬೇಕು ಅಷ್ಟೇ," ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಈ ಐದು ದಿನಗಳ ಕಲಾಪ ಅದೆಷ್ಟು ಮೌಲ್ಯಾಧಾರಿತವಾಗಿತ್ತು? ಒಂದು ದಿನ ಭೈರತಿ ಬಸವರಾಜ್ ಪ್ರಕರಣ ಇಟ್ಟುಕೊಂಡು ಸದನದ ಬಾವಿಗೆ ಇಳಿದರು. ಇನ್ನೊಂದು ದಿನ ಸಂಡೂರು ತಹಶೀಲ್ದಾರ ವಿಷಯ ಇಟ್ಟುಕೊಂಡು ಒಂದು ದಿನದ ಕಲಾಪವನ್ನು ವ್ಯರ್ಥ ಮಾಡಿದರು. ಇನ್ನೊಂದು ದಿನ ಮಾಜಿ ಸ್ಪೀಕರ್ ಹೇಳಿಕೆಗೆ ಕಲಾಪ ಬಲಿ ಆಯಿತು. ಕಲಾಪದಲ್ಲಿ ಏನು ಚರ್ಚೆ ಆಯಿತು? ಇದನ್ನೆಲ್ಲ ಕೇಳಲು, ನೋಡಲು ಹೋಗಬೇಕಿತ್ತ ನಾನು?," ಎಂದು ಎಚ್ಡಿಕೆ ಪ್ರಶ್ನಿಸಿದರು.

ಸಿಎಂ ಬೊಮ್ಮಾಯಿ ಪರ ಬ್ಯಾಟ್ ಬೀಸಿದ ಕುಮಾರಸ್ವಾಮಿ
"ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ನಾಲ್ಕು ಚುನಾವಣೆಗಳನ್ನು ಸತತವಾಗಿ ಗೆದ್ದಿದ್ದು, ಜನ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಭಾವನೆಗಳು ಸಹಜ. ಹೃದಯ ಇದ್ದವರಿಗೆ ಮಾತ್ರ ಅವರ ಭಾವನೆ ಅರ್ಥವಾಗುತ್ತದೆ," ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಿಎಂ ಪರ ಬ್ಯಾಟ್ ಬೀಸಿದರು.
"ಬಸವರಾಜ ಬೊಮ್ಮಾಯಿಯವರು ತಮ್ಮ ತವರು ಕ್ಷೇತ್ರದಲ್ಲಿ ತಮ್ಮ ಅಧಿಕಾರದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿರುವ ಬಗ್ಗೆ ನಾನು ವ್ಯಾಖ್ಯಾನ ಮಾಡಲು ಹೋಗುವುದಿಲ್ಲ. ಆ ಸ್ಥಾನಕ್ಕೆ ಅವರು ಬರಬೇಕಾದರೆ ಆ ಕ್ಷೇತ್ರದ ಜನರೇ ಕಾರಣ. ಹೀಗಾಗಿ ಸಿಎಂ ಅವರು ಭಾವನಾತ್ಮಕವಾಗಿ ಮಾತನಾಡಿರಬಹುದು. ಅದರಲ್ಲಿ ತಪ್ಪೇನಿಲ್ಲ. ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಅಂತ ಬೊಮ್ಮಾಯಿ ಆ ರೀತಿ ಮಾತನಾಡಿದ್ದಾರೆ ಎನ್ನುವುದನ್ನು ನಾನು ಒಪ್ಪಲು ತಯಾರಿಲ್ಲ".
"ಬೊಮ್ಮಾಯಿಯವರ ಮಾತುಗಳು ತಾಯಿ ಹೃದಯ ಇರುವವರಿಗೆ ಮಾತ್ರ ಅರ್ಥವಾಗುತ್ತವೆ. ಬೇರೆಯವರಿಗೆ ಅದು ಅರ್ಥ ಆಗಲ್ಲ. ನನ್ನ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ನಾನು ಅನೇಕ ಸಲ ಹೇಳಿದ್ದೇನೆ, ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರದ ಜನ ಅಂತ. ಅವರ ಬಗ್ಗೆ ಹೇಳುವಾಗ ನಾನೂ ಭಾವುಕನಾಗಿದ್ದೇನೆ. ಇದು ಮನುಷ್ಯ ಸಹಜ ಗುಣ," ಎಂದು ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಗಲಾಟೆ ಮಾಡಿದ ಸಂಘಟನೆಗಳನ್ನು ನಿಷೇಧಿಸಿ
"ಮಧ್ಯರಾತ್ರಿಯಲ್ಲಿ ಬಂದು ಕನ್ನಡಿಗರ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಮಾಡಿರುವ, ವಾಹನಗಳ ಮೇಲೆ ಕಲ್ಲು ಹೊಡೆದು ಬೆಂಕಿ ಇಟ್ಟಿರುವ ನಾಡದ್ರೋಹಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕು, ಘಟನೆಯಲ್ಲಿ ಭಾಗಿಯಾಗಿರುವ ಸಂಘಟನೆಗಳನ್ನು ನಿಷೇಧ ಮಾಡಬೇಕು," ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
"ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಹಾಳು ಮಾಡಿರುವುದು ಹೇಡಿತನ. ಭಾಷಾ ಸಾಮರಸ್ಯ ಹಾಳು ಮಾಡುವ ಇಂಥ ಕಿಡಿಗೇಡಿಗಳನ್ನು ಸುಮ್ಮನೆ ಬಿಡಬಾರದು. ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪ ಮಾಡಿರುವುದು ಹೇಯ ಕೃತ್ಯ. ಇದು ವಿಕೃತವಲ್ಲದೇ ಮತ್ತೇನು ಅಲ್ಲ. ಈ ಮೂಲಕ ಕಿಡಿಗೇಡಿಗಳು ಕನ್ನಡಿಗರಿಗೆ ಮಾತ್ರವಲ್ಲ ಮರಾಠಿಗರಿಗೆ ಕೂಡ ದ್ರೋಹ ಎಸಗಿದ್ದಾರೆ," ಎಂದು ಕಿಡಿಕಾರಿದರು.

ಅಪಚಾರ ಮಾಡಿದ ಸಂಘಟನೆ ನಿಷೇಧ ಮಾಡಬೇಕು
"ಓರ್ವ ರಾಷ್ಟ್ರಪ್ರೇಮಿ, ಮಹಾನ್ ಯೋಧನಿಗೆ ಆಗಿರುವ ಈ ಅಪಚಾರದಿಂದ ಎಲ್ಲರೂ ತಲೆತಗ್ಗಿಸುವಂತೆ ಆಗಿದೆ. ಈ ಕೃತ್ಯದಲ್ಲಿ ಯಾವುದೇ ಸಂಘಟನೆಗಳು ಭಾಗಿಯಾಗಿದ್ದರೂ, ಅವುಗಳನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಹಾಗೂ ತಪ್ಪಿತಸ್ಥರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು," ಎಂದು ಕುಮಾರಸ್ವಾಮಿ ಆಗ್ರಹಿಸಿದರು.
"ಈ ಘಟನೆಯ ಹಿಂದೆ ಯಾರಿದ್ದಾರೆ ಎನ್ನುವುದನ್ನು ಹೊರಗೆಳೆದು, ಷಡ್ಯಂತ್ರ ನಡೆಸಿದ ಎಲ್ಲರಿಗೂ ತಕ್ಕ ಶಾಸ್ತಿ ಮಾಡಬೇಕು ಎನ್ನುವುದು ನನ್ನ ಒತ್ತಾಯ. ಎಂಇಎಸ್ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಮೃದು ಧೋರಣೆ ಅನುಸರಿಸುತ್ತಿವೆ ಎಂದು ಜನ ದೂರುತ್ತಿದ್ದಾರಲ್ಲ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, ಯಾರ ಮೇಲೆ ಯಾರಿಗೆ ಮೃದು ಧೋರಣೆ ಇದೆ ಎನ್ನುವುದಕ್ಕಿಂತ ನಮ್ಮ ನೆಲದಲ್ಲೇ ಇದ್ದು, ಇಲ್ಲಿನ ನೀರು, ಗಾಳಿ, ಅನ್ನ ಸೇವಿಸುತ್ತಾ ನಮ್ಮ ನಾಡಿನ ಬಗ್ಗೆ ದ್ರೋಹ ಚಿಂತನೆ ಮಾಡುವುದು ಘೋರ ಅಪರಾಧ. ಇದಕ್ಕೆ ಕ್ಷಮೆ ಇಲ್ಲ," ಎಂದು ಕಿಡಿಕಾರಿದರು.

ಮಹಾರಾಷ್ಟ್ರ ಸಿಎಂಗೆ ಎಚ್ಚರಿಸಿದ ಕುಮಾರಸ್ವಾಮಿ
"ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ನಾನು ಹೇಳುವುದು ಇಷ್ಟೇ, ಎರಡು ರಾಜ್ಯಗಳ ನಡುವೆ ದ್ವೇಷವನ್ನು ಬಿತ್ತಿ ಸಾಮರಸ್ಯ ಹಾಳು ಮಾಡುವಂಥ ವಿಚಿತ್ರ ಶಕ್ತಿಗಳಿಗೆ ಬೆಂಬಲ ಕೊಟ್ಟು, ನಿಮ್ಮ ರಾಜಕೀಯ ಶಕ್ತಿ ವೃದ್ಧಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ಪರಸ್ಪರ ಸಹೋದರ ಭಾವದಿಂದ ಕೆಲಸ ಮಾಡಬೇಕು. ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುವಂಥ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಸರ್ಕಾರವೇ ಕಾನೂನು ವ್ಯಾಪ್ತಿಯಲ್ಲಿ ಆಲೋಚನೆ ಮಾಡಿ ಕ್ರಮ ಕೈಗೊಳ್ಳಬೇಕು," ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದರು.












Click it and Unblock the Notifications