ಕೆರೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವು ಮಾಡುತ್ತೇವೆ: ಪುಟ್ಟರಾಜು
ಬೆಂಗಳೂರು, ಜುಲೈ 03: ರಾಜ್ಯಾದ್ಯಂತ ಒತ್ತುವರಿಯಾಗಿರುವ ಕೆರೆಗಳನ್ನು ಮುಲಾಜಿಲ್ಲದೆ ತೆರವು ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ವಿಧಾನಪರಿಷತ್ನಲ್ಲಿ ಇಂದು ಹೇಳಿದರು.
ಸದನದಲ್ಲಿ ಜೆಡಿಎಸ್ನ ಕೆ.ಟಿ.ಶ್ರೀಕಂಠೇಗೌಡ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಸಚಿವ ಪುಟ್ಟರಾಜು ಅವರು, ರಾಜ್ಯದ ಪಂಚಾಯಿತಿಯಿಂದ ಮಹಾನಗರ ಪಾಲಿಕೆವರೆಗೆ 29,636 ಕೆರೆಗಳಿದ್ದು ಇವುಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಕೆರೆಗಳ ರಕ್ಷಣೆಗೆಂದೇ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ವಿಶೇಷ ಅಧಿಕಾರಿಗಳನ್ನು ನೇಮಿಸಿದ್ದು, ಕೆರೆ ಒತ್ತುವರಿ ಆಗಿರುವ ಪ್ರದೇಶವನ್ನು ಮುಲಾಜಿಲ್ಲದೆ ತೆರವು ಮಾಡಿರೆಂದು ಸೂಚನೆಯನ್ನು ಈಗಾಗಲೇ ನೀಡಲಾಗಿದೆ ಎಂದು ಅವರು ಹೇಳಿದರು.

ನಮ್ಮ ಇಲಾಖೆಯಲ್ಲಿ ಹಣದ ಕೊರತೆ ಇಲ್ಲ ಎಂದ ಸಚಿವರು, ರೈತ ಸಂಜೀವಿನಿ ಯೋಜನೆ ಸದುಪಯೋಗಪಡಿಸಿಕೊಂಡು, ಹೂಳೆತ್ತುವ ಕಾಮಗಾರಿ ಮಾಡಿಸಿ ರೈತರು ತಮ್ಮ ಜಮೀನಿಗೆ ಫಲವತ್ತಾದ ಮಣ್ಣು ಪಡೆಯಬಹುದು ಇದಕ್ಕೆ ಇಲಾಖೆ ಅನುದಾನ ನೀಡುತ್ತದೆ ಎಂದರು.
ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಕರಣದ 28 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ನಮ್ಮ ಸರ್ಕಾರ ಭ್ರಷ್ಟಾಚಾರಿಗಳನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದರು.












Click it and Unblock the Notifications