ಸದ್ಯದಲ್ಲೇ ಮೋದಿ ಭೇಟಿಯಾಗುತ್ತೇನೆ : ಸಿದ್ದರಾಮಯ್ಯ
ಬೆಂಗಳೂರು, ಮೇ 26 : "ಪ್ರಧಾನ ಮಂತ್ರಿ ಪ್ರಮಾಣ ವಚನ ಸಮಾರಂಭಕ್ಕೆ ಗೈರು ಹಾಜರಾಗಿರುವುದರಲ್ಲಿ ಯಾವುದೇ ರಾಜಕೀಯವಿಲ್ಲ, ಸದ್ಯದಲ್ಲೇ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತೇನೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನ ಮಂತ್ರಿ ಪದಗ್ರಹಣ ಸಮಾರಂಭಕ್ಕೆ ಬರುವಂತೆ ಆಹ್ವಾನ ಬಂದಿತ್ತು. ಆದರೆ, ನಿಗದಿತ ಕಾರ್ಯಕ್ರಮಗಳು ಇದ್ದ ಕಾರಣ ಭಾಗವಹಿಸಲು ಸಾಧ್ಯವಾಗಿಲ್ಲ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದರು.

ನರೇಂದ್ರ ಮೋದಿ ಅವರಿಗೆ ವೈಯಕ್ತಿಕವಾಗಿ ಪತ್ರ ಬರೆದು ಶುಭಾಶಯ ಕೋರಿದ್ದೇನೆ. ನಿಮ್ಮಿಂದ ದೇಶಕ್ಕೆ ಉತ್ತಮ ಆಡಳಿತ ಸಿಗಲಿ ಎಂದು ಹಾರೈಸಿದ್ದೇನೆ. ಅನಿವಾರ್ಯ ಕಾರಣಗಳಿಂದಾಗಿ ಸಮಾರಂಭಕ್ಕೆ ಹೋಗಲಾಗುತ್ತಿಲ್ಲ. ಇದರಲ್ಲಿ ರಾಜಕೀಯವನ್ನು ಎಳೆದು ತೆರಬೇಡಿ ಎಂದು ಸಿಎಂ ಹೇಳಿದರು. [ಮೋದಿ ಸಂಪುಟದಲ್ಲಿ ರಾಜ್ಯದ ಮೂವರು ಸಚಿವರು]
ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಂಬಂಧ ಉತ್ತಮವಾಗಿರುತ್ತದೆ. ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ, ರಾಜ್ಯದಲ್ಲಿನ ಬಿಜೆಪಿ ಸರ್ಕಾರಕ್ಕೆ ಸಹಕಾರ ನೀಡಲಿಲ್ಲವೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. [ಟ್ವಿಟರ್ ನಲ್ಲಿ ಮೋದಿ ಪದಗ್ರಹಣ ಸಂಭ್ರಮ]
ಸದ್ಯದಲ್ಲೇ ದೆಹಲಿಗೆ ತೆರಳಲಿದ್ದೇನೆ. ಆ ಸಮಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಸರ್ಕಾರದ ಪರವಾಗಿ ಪ್ರಧಾನಮಂತ್ರಿ ಪದಗ್ರಹಣ ಸಮಾರಂಭಕ್ಕೆ ಯಾವ ಪ್ರತಿನಿಧಿಯೂ ಇಂದು ಭಾಗವಹಿಸುತ್ತಿಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದರು.
ಸಿಎಂ ಕಾರ್ಯಕ್ರಮಗಳೇನು : ಬೆಂಗಳೂರಿನಲ್ಲಿ ಸಿಎನ್ಆರ್ ರಾವ್ ಅಂಡರ್ ಪಾಸ್ ಉದ್ಘಾಟನೆ, ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಧಾನ ಸಮಾರಂಭ ಸೇರಿದಂತೆ ವಿವಿಧ ಕಾರ್ಯಕ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಬ್ಯುಸಿಯಾಗಿದ್ದಾರೆ. ಆದ್ದರಿಂದ ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ದೂರ ಉಳಿದಿದ್ದಾರೆ.












Click it and Unblock the Notifications