ಹವಾಮಾನ ವರದಿ: ಬೆಂಗಳೂರಲ್ಲಿ ಮತ್ತೆರೆಡು ದಿನ ಮಳೆ
ಬೆಂಗಳೂರು, ಆಗಸ್ಟ್ 6: ಬೆಂಗಳೂರಲ್ಲಿ ಇನ್ನೆರೆಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಲ್ಲಿ ಇನ್ನು ಎರಡು ದಿನ ಭಾರಿ ಮಳೆಯಾಗಲಿದೆ, ಕೇಂದ್ರ ಭಾಗದಲ್ಲಿ ಗರಿಷ್ಠ 25.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಕೆಐಎಎಲ್ನಲ್ಲಿ ಗರಿಷ್ಠ 27.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.2 ಡಿಗ್ರಿ ಸೆಲ್ಸಿಯಸ್, ಎಚ್ಎಎಲ್ನಲ್ಲಿ ಗರಿಷ್ಠ 26.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಮಹಾಮಳೆಗೆ ಮುಳುಗಿ ಹೊಳೆಯಂತಾಗಿದೆ ಬೆಳಗಾವಿ- ಕೊಲ್ಹಾಪುರ ರಾಷ್ಟ್ರೀಯ ಹೆದ್ದಾರಿ 4
ಬೆಳಗಾವಿ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಶೃಂಗೇರಿಯಲ್ಲಿ ಕೂಡ ಮಳೆ ಸುರಿಯುತ್ತಿದ್ದು, ಧಾರವಾಡ, ಬೆಳಗಾವಿಯಲ್ಲಿ ಸುರಿಯುತ್ತಿರುವ ಮಳೆಗೆ ಸಾಕಪ್ಪಾ ಸಾಕು ಮಳೆ ಎನ್ನುವಂತಾಗಿದೆ.
ಖಾನಾಪುರದಲ್ಲಿ ಮಲಪ್ರಭಾ ನದಿ ರೌದ್ರಾವತಾರ ಪ್ರದರ್ಶಿಸುತ್ತಿದೆ.ಖಾನಾಪುರ, ಹಳಿಯಾಳ, ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಶಿವಾಜಿನಗರ, ಶಾಸ್ತ್ರಿನಗರ, ಸಮರ್ಥ ನಗರ, ಹುಲಬತ್ತಿ ಕಾಲೊನಿ, ವಡಗಾವಿ ನಗರದ ಹಲವು ಮನೆಗಳಿಗೆ ನೀರು ನುಗ್ಗಿದೆ.
ಅರಬ್ಬೀ ಸಮುದ್ರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಮಳೆಯ ಮಾರುತಗಳು ಚಲಿಸುತ್ತಿದ್ದು ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಹಾಗೂ ಗುಜರಾತ್ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದಲ್ಲಿ ಭರ್ಜರಿ ಮಳೆ ಪರಿಣಾಮ ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿರುವ ನೀರು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಸಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಉಲ್ಬಣಿಸುವ ಸಾಧ್ಯತೆಗಳಿವೆ.
ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಚಂಡೀಗಢ ಹಾಗೂ ಈಶಾನ್ಯ ಭಾರತದ ರಾಜ್ಯಗಳಲ್ಲೂ ಮುಂದಿನ ಒಂದೆರಡು ದಿನದಲ್ಲಿ ಕುಂಭದ್ರೋಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದೂ ಇಲಾಖೆ ಎಚ್ಚರಿಸಿದೆ.
ಮೀನುಗಾರರಿಗೆ ಸೂಚನೆ: ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏದ್ದೇಳುವ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ಒಡಿಶಾ ಹಾಗೂ ಅಂಡಮಾನ್ ನಿಕೋಬಾರ್ ದ್ವೀಪದ ಮೀನುಗಾರರಿಗೆ ಸೂಚನೆ ನೀಡಲಾಗಿದೆ.