ಇನ್ಫೋಸಿಸ್ ಫೌಂಡೇಷನ್ನಿಂದ 50 ಕೋಟಿ ರೂ ವೆಚ್ಚದಲ್ಲಿ ಆಸ್ಪತ್ರೆ
ಬೆಂಗಳೂರು, ಅಕ್ಟೋಬರ್ 14: ''ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಷನ್ನ ಸುಧಾಮೂರ್ತಿ ಅವರು 50 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 350 ಹಾಸಿಗೆಗಳ ಆಸ್ಪತ್ರೆ ಕಟ್ಟಡವನ್ನು ನಿರ್ಮಿಸಿಕೊಡುತ್ತಿದ್ದಾರೆ'' ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಯದೇವ ಹೃದ್ರೋಗ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ
ಹೃದ್ರೋಗಕ್ಕೆ ಪರಿಣಾಮಕಾರಿ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಬೆಂಗಳೂರು, ಮೈಸೂರು ಮತ್ತು ಕಲಬುರಗಿಯ ಜಯದೇವ ಹೃದ್ರೋಗ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರಗಳ ಮೂಲ ಸೌಲಭ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ ಗುಣಮಟ್ಟದ ಚಿಕಿತ್ಸೆಗೆ ನೀಲಿನಕ್ಷೆ ಸಿದ್ಧಪಡಿಸಲಾಗಿದೆ ಎಂದು

ಗುಣಮಟ್ಟದ ಚಿಕಿತ್ಸೆ ನೀಡಲು ನೀಲಿನಕ್ಷೆ
ಈ ಕುರಿತು ಮಾಹಿತಿ ನೀಡಿದ ಸಚಿವ ಡಾ.ಕೆ.ಸುಧಾಕರ್, "ಹೃದ್ರೋಗಗಳಿಂದಾಗುವ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ, ಶೇ.25 ರಷ್ಟು ಸಾವು ಹೃದಯ ಸಂಬಂಧಿ ಕಾಯಿಲೆಗಳಿಂದ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಭಾಗಗಳ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ನೀಲಿನಕ್ಷೆ ಸಿದ್ಧಪಡಿಸಲಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ 700 ಹಾಸಿಗೆಗಳಿದ್ದು, ಅದನ್ನು 1 ಸಾವಿರಕ್ಕೆ ಹೆಚ್ಚಿಸಲಾಗುವುದು. ಈ ಮೂಲಕ ಒಂದೇ ಸೂರಿನ ಅಡಿಯಲ್ಲಿ ಒಂದು ಸಾವಿರ ಹಾಸಿಗೆಗಳಿರುವ ದೇಶದ ಏಕೈಕ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಸಂಸ್ಥೆ ಪಾತ್ರವಾಗಲಿದೆ'' ಎಂದು ವಿವರಿಸಿದರು.

ಇನ್ಫೋಸಿಸ್ ಫೌಂಡೇಷನ್ ಸಂಸ್ಥೆಗೆ ಧನ್ಯವಾವ
"ಈ ಮೊದಲು ಕೇವಲ ಕಟ್ಟಡವನ್ನು ಮಾತ್ರ ನಿರ್ಮಿಸಿಕೊಡುವುದಾಗಿ ತಿಳಿಸಿದ್ದ ಸುಧಾಮೂರ್ತಿ ಅವರು, ಅದಕ್ಕೆ ಬೇಕಾದ ಯಂತ್ರೋಪಕರಣ, ಒಳ ವಿನ್ಯಾಸ ಸಹಿತ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ಇನ್ಫೋಸಿಸ್ ಫೌಂಡೇಷನ್ ಸಂಸ್ಥೆಗೆ ಹಾಗೂ ಸುಧಾಮೂರ್ತಿ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ" ಎಂದು ಸಚಿವ ಸುಧಾಕರ್ ಹೇಳಿದರು.

ಜಯದೇವ ಆಸ್ಪತ್ರೆ ಹೃದ್ರೋಗಿಗಳಿಗೆ ಸಂಜೀವಿನಿ
"ಮೈಸೂರು ಜಯದೇವ ಆಸ್ಪತ್ರೆಯು ಹಳೇ ಮೈಸೂರು ಭಾಗದ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಹೃದ್ರೋಗಿಗಳಿಗೆ ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತಿದೆ. ಸದ್ಯ ಆಸ್ಪತ್ರೆ ಮೇಲೆ ಹೆಚ್ಚಿನ ಒತ್ತಡವಿರುವುದರಿಂದ 350 ಹಾಸಿಗೆಗಳ ಸಾಮರ್ಥ್ಯ ವನ್ನು 400 ಹಾಸಿಗೆಗಳಿಗೆ ಹೆಚ್ಚಿಸಲಾಗುತ್ತಿದೆ. ಹೆಚ್ಚುವರಿಯಾಗಿ ಮತ್ತೊಂದು ಶಸ್ತ್ರಚಿಕಿತ್ಸಾ ಘಟಕ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಮೆಡಿಕಲ್ ಕೌನ್ಸಿಲ್ನವರು ಸಂಸ್ಥೆಯ ಆವರಣದಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವಲ್ಪ ಜಾಗ ನೀಡುವಂತೆ ಮನವಿ ಮಾಡಿದ್ದರು. ಅದಕ್ಕೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ" ಎಂದು ವಿವರಿಸಿದರು.
Recommended Video

ಆಡಳಿತ ಮಂಡಳಿ ಸಭೆಯಲ್ಲಿ ಅಭಿನಂದನೆ
"ಜಯದೇವ ಹೃದ್ರೋಗ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ರಾಜ್ಯದ ಜನತೆಗೆ ನೀಡುತ್ತಿರುವ ಆರೋಗ್ಯ ಸೇವೆ ಮತ್ತು ಶೈಕ್ಷಣಿಕ ಚಟುವಟಿಕೆಗಳ ಗುಣಮಟ್ಟ ಹಾಗೂ ಜಾಗತಿಕ ಮಟ್ಟದಲ್ಲಿ ಸಾಧಿಸಿರುವ ಸಾಧನೆಯನ್ನು ಪರಿಗಣಿಸಿ, ರಾಜೀವ್ ಗಾಂಧಿ ಅರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಶಾಶ್ವತ ಸಂಯೋಜನೆ ಗೌರವ ನೀಡಿದೆ. ಇಂತಹ ಹೆಗ್ಗಳಿಕೆಗೆ ಪಾತ್ರವಾಗಿರುವ ಮೊದಲ ಸಂಸ್ಥೆ ಇದಾಗಿದೆ. ಈ ಶ್ರೇಯಕ್ಕೆ ಕಾರಣರಾದ ಸಂಸ್ಥೆಯ ಎಲ್ಲರಿಗೂ ಆಡಳಿತ ಮಂಡಳಿ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು" ಎಂದು ಸಚಿವರು ತಿಳಿಸಿದರು.












Click it and Unblock the Notifications