ಬೆಂಗಳೂರಿನಲ್ಲಿ ಬೀದಿಬದಿ ವ್ಯಾಪಾರಿಗಳ ತೆರವಿನ ನಂತರ ವಾಹನಗಳ ಮೇಲೆ ಕಣ್ಣಿಟ್ಟ ಪಾಲಿಕೆ! ನಾಳೆಯಿಂದಲೇ ಪ್ರಾರಂಭ
ಬೆಂಗಳೂರಿನಲ್ಲಿ ಮತ್ತೊಂದು ಕಾರ್ಯಾಚರಣೆಗೆ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ಬೀದಿಬದಿ ಒತ್ತುವರಿ ತೆರವು ಕಾರ್ಯಾಚರಣೆಯ ನಂತರ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ (ಬೆಂಗಳೂರಿನಾದ್ಯಂತ) ಮತ್ತೊಂದು ಕಾರ್ಯಾಚರಣೆ ಪ್ರಾರಂಭವಾಗುತ್ತಿದೆ. ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿ ಬಿಟ್ಟಿರುವ ವಾಹನಗಳ ತೆರವು ಹಾಗೂ ಹರಾಜು ಪ್ರಕ್ರಿಯೆ ನಡೆಸುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ನಗರ ಪಾಲಿಕೆಗಳಲ್ಲಿ ಜಿಬಿಎ(GBA) ಕಾಯ್ದೆ 2024, ಸೆಕ್ಷನ್ 324ರ ಅನ್ವಯ ಜುಲೈ 10 ರಿಂದ ಅನಾಥ ವಾಹನಗಳ ತೆರವು ಕಾರ್ಯವನ್ನು ಆರಂಭಿಸಲಾಗುತ್ತಿದೆ. 10ನೇ ಜುಲೈ 2026 ರಿಂದ ಅನ್ವಯವಾಗುವಂತೆ, ರಸ್ತೆಗಳು, ತೆರೆದ ಪ್ರದೇಶಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಲವಾರು ದಿನಗಳಿಂದ ಅನಾಥವಾಗಿ ಬಿಡಲಾದ ವಾಹನಗಳನ್ನು ಗುರುತಿಸಿ 5 ನಗರ ಪಾಲಿಕೆಗಳು ಹಾಗೂ ಸಂಚಾರ ಪೊಲೀಸ್ ಅಧಿಕಾರಿಗಳು ಅವುಗಳ ವಿರುದ್ಧ ಜಂಟಿ ಕಾರ್ಯಾಚರಣೆಯ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.

1. ನೋಟಿಸ್ ಅವಧಿ: ಗುರುತಿಸಲಾದ ಅನಾಥ ವಾಹನಗಳಿಗೆ 7 ದಿನಗಳ ಕಾಲಾವಕಾಶ ನೀಡಿ ಅಧಿಕೃತ ಸ್ಟಿಕ್ಕರ್ ಮಾದರಿಯ ನೋಟಿಸ್ ಅಂಟಿಸಲಾಗುವುದು. ನೋಟಿಸ್ ಅಂಟಿಸಿದ ವಾಹನಗಳ ಚಕ್ರಕ್ಕೆ ವೀಲ್ ಕ್ಲಾಂಪ್ ಅಳವಡಿಸಲಾಗುವುದು.
2. ವಾಹನ ಜಪ್ತಿ(Towing): ನೋಟಿಸ್ ನೀಡಿದ 7 ದಿನಗಳ ಒಳಗಾಗಿ ವಾಹನಗಳ ಮಾಲೀಕರು ವಾಹನಗಳನ್ನು ತೆರವುಗೊಳಿಸದಿದ್ದರೆ, ಅಂತಹ ವಾಹನಗಳನ್ನು ಎಳೆದುಕೊಂಡು ಹೋಗಿ(Tow) ಜಪ್ತಿ ಮಾಡಲಾಗುವುದು.
3. ಬಹಿರಂಗ ಹರಾಜು: ಜಪ್ತಿ ಮಾಡಲಾದ ಎಲ್ಲಾ ವಾಹನಗಳನ್ನು ನಿಯಮಾನುಸಾರ ಬಹಿರಂಗ ಹರಾಜು ಮಾಡಲಾಗುವುದು.
ಸಾರ್ವಜನಿಕರಿಗೆ ಸೂಚನೆ: ಈ ಪ್ರಕಟಣೆಯ ಮೂಲಕ ಸಾರ್ವಜನಿಕರಲ್ಲಿ ವಿನಂತಿಸುವುದೇನೆಂದರೆ, ನೀವು ರಸ್ತೆಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ನಿಮ್ಮ ಯಾವುದೇ ವಾಹನಗಳನ್ನು ಬಿಟ್ಟಿದ್ದರೆ, ಈ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ, ಸದರಿ ವಾಹನಗಳನ್ನು ನಿಮ್ಮ ಸ್ವಂತ ಜಾಗಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ವಾಹನಗಳನ್ನು ಜಪ್ತಿ ಮಾಡಿ ಹರಾಜು ಹಾಕಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ ಶೇ.49.02ರಷ್ಟು ನಮೂನೆ ಅರ್ಜಿ ವಿಲೇವಾರಿ
ಇನ್ನು ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ನಮೂನೆ ಅರ್ಜಿಗಳ ವಿತರಣೆಯನ್ನು ತ್ವರಿತಗೊಳಿಸಿ, ಡಿಜಿಟಲೀಕರಣ ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಪರ ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಇದುವರೆಗೆ ಶೇ.49ರಷ್ಟು ನಮೂನೆ ಅರ್ಜಿಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳ ವಿತರಣೆಯನ್ನು ಮತ್ತಷ್ಟು ವೇಗಗೊಳಿಸಿ, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಮೂನೆ ಅರ್ಜಿಗಳ ವಿತರಣೆ ಹಾಗೂ ಡಿಜಿಟಲೀಕರಣ ಕಾರ್ಯವು ಸಮರ್ಪಕವಾಗಿ ಮತ್ತು ತ್ವರಿತವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮತದಾರ ನೋಂದಣಾಧಿಕಾರಿಗಳು ನಿರಂತರ ಮೇಲ್ವಿಚಾರಣೆ ವಹಿಸಬೇಕು ಎಂದಿದ್ದಾರೆ.












Click it and Unblock the Notifications