Darshan Bail: ರೇಣುಕಾಸ್ವಾಮಿ ಕೊಲೆಗೂ ದರ್ಶನ್ಗೂ ಸಂಬಂಧವೇ ಇಲ್ಲ!
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಕೊನೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿ 100 ದಿನ ಪೂರೈಸಿದ್ದು, ಜಾಮೀನಿಗೆ ಅರ್ಜಿ ಯಾವಾಗ ಸಲ್ಲಿಸುತ್ತಾರೆ ಎನ್ನುವ ಕುತೂಹಲ ಇತ್ತು. ಶನಿವಾರ ದರ್ಶನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆರೋಪ ಪಟ್ಟಿ ಸಲ್ಲಿಕೆ ಮಾಡಿದ 18 ದಿನಗಳ ಬಳಿಕ ನಟ ದರ್ಶನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಜಾಮೀನು ಅರ್ಜಿಯಲ್ಲಿ ದರ್ಶನ್ಗೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಯಾವುದೆ ಸಂಬಂಧವಿಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ಖಾಸಗಿ ವಾಹಿನಿಗಳು ವರದಿ ಮಾಡಿವೆ. ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ರ ಪಾತ್ರವೇ ಇಲ್ಲ, ಅವರನ್ನು ಸುಮ್ಮನೆ ಪ್ರಕರಣದಲ್ಲಿ ಸಿಕ್ಕಿಸಲಾಗಿದೆ ಎಂದು ಕೂಡ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.

ರೇಣುಕಾಸ್ವಾಮಿಯನ್ನು ಅಪಹರಣ ಮಾಡಲು ನಾನು ಸೂಚನೆ ಕೊಟ್ಟಿಲ್ಲ, ರೇಣುಕಾಸ್ವಾಮಿ ಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಎ10 ಆರೋಪಿ ವಿನಯ್ ಮತ್ತು ಎ3 ಆರೋಪಿ ಪವನ್ ಅವರ ಸೂಚನೆ ಮೇರೆಗೆ ರೇಣುಕಾಸ್ವಾಮಿಯನ್ನು ಅಪಹರಣ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಸೋಮವಾರ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎ2 ಆರೋಪಿ ನಟ ದರ್ಶನ್ಗೆ ಜಾಮೀನು ನೀಡುವಂತೆ ಕೋರಿ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ವಕೀಲ ಎಸ್. ಸುನಿಲ್ ಕುಮಾರ್ ಜಡ್ಜ್ ಜಯಶಂಕರ ಅವರಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಧೀಶರು, ಪ್ರಾಸಿಕ್ಯೂಷನ್ಗೆ ನೋಟಿಸ್ ಕೊಟ್ಟಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.
ಇನ್ನು ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸುವಾಗ ಎಚ್ಚರಿಕೆಯನ್ನು ವಹಿಸಿದ್ದಾರೆ. ಸೆಪ್ಟೆಂಬರ್ 4ರಂದು ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 3,991 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದರು. ಆರೋಪ ಪಟ್ಟಿಯನ್ನು ವಿವರವಾಗಿ ಪರಿಶೀಲನೆ ಮಾಡಿರುವ ವಕೀಲು, 18 ದಿನಗಳ ಬಳಿಕ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ.
ಒಂದು ವೇಳೆ ದರ್ಶನ್ ಪರ ವಕೀಲರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೇಲ್ನೋಟಕ್ಕೆ ದರ್ಶನ್ ಕೈವಾಡವಿಲ್ಲ ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾದರೆ ಜಾಮೀನು ಸಿಗುವ ಸಾಧ್ಯತೆ ಕೂಡ ಇದೆ. ಒಂದು ವೇಳೆ ನಟ ದರ್ಶನ್ಗೆ ಜಾಮೀನು ಸಿಕ್ಕರೆ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ರನ್ನು ಇಲ್ಲಿ ಐಷಾರಾಮಿ ಜೈಲು ಜೀವನ ಮಾಡುತ್ತಿರುವ ಫೋಟೊಗಳು ಹೊರಬಂದ ನಂತರ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಸದ್ಯ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದು, ಜಾಮೀನು ಪಡೆಯುವ ವಿಶ್ವಾಸದಲ್ಲಿದ್ದಾರೆ.












Click it and Unblock the Notifications