ಮಾನ್ಪಡೆ ಸಾವಿಗೆ ನಾವು ಕಾರಣರಾಗಿದ್ದರೆ, ಒಂದೂ ಕಾಲು ಲಕ್ಷ ಜನ ಸತ್ತರಲ್ಲ ಅದಕ್ಕೆ ಯಾರು ಹೊಣೆ?
ಬೆಂಗಳೂರು, ಅ 27: ತಾನು ಮುಖ್ಯಮಂತ್ರಿಯಾಗಿದ್ದಾಗ, ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಏರಿಸಿದ್ದರು ಎನ್ನುವ ಬಿಜೆಪಿ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮತ್ತೆ, ಬಿಜೆಪಿ ಮುಖಂಡರ ವಿರುದ್ದ ತಿರುಗಿ ಬಿದ್ದಿದ್ದಾರೆ.
ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಪಕ್ಷದ ರೋಡ್ ಶೋ ಕಾರ್ಯಕ್ರಮವನ್ನು ಡೊಳ್ಳು ಬಡಿಯುವ ಮೂಲಕ ಆರಂಭಿಸಿದ ಸಿದ್ದರಾಮಯ್ಯ, "ಮಾರುತಿ ಮಾನ್ಪಡೆ ಅವರ ಸಾವಿಗೆ ನಾನು ಮತ್ತು ಡಿ.ಕೆ.ಶಿವಕುಮಾರ್ ಕಾರಣ ಎಂಬ ಬಾಲಿಷ ಹೇಳಿಕೆಯನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ನೀಡಿದ್ದಾರೆ".
"ಹಾಗಿದ್ದರೆ ದೇಶದಲ್ಲಿ ಒಂದು ಕಾಲು ಲಕ್ಷ ಜನ ಕೊರೊನಾಕ್ಕೆ ಬಲಿಯಾಗಿದ್ದಾರಲ್ಲಾ ಅದಕ್ಕೆ ಯಾರು ಹೊಣೆ ಎಂದು ಹೇಳುವಿರಾ" ಎಂದು ಸಿದ್ದರಾಮಯ್ಯ, ಸಚಿವ ಸದಾನಂದ ಗೌಡರನ್ನು ಪ್ರಶ್ನಿಸಿದ್ದಾರೆ.

"ಕೊರೊನಾ ವಿರುದ್ಧ ಹೋರಾಡಬೇಕಾಗಿದ್ದ ಕೇಂದ್ರ ಸರ್ಕಾರ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಜನವಿರೋಧಿ ಕಾನೂನುಗಳನ್ನು ಜಾರಿಗೆ ತಂದದ್ದೇ ಮಾನ್ಪಡೆಯವರೂ ಸೇರಿದಂತೆ ಅನೇಕ ಹೋರಾಟಗಾರರ ಸಾವಿಗೆ ಕಾರಣ" ಎಂದು ಸಿದ್ದರಾಮಯ್ಯ ಆರೋಪಿಸಿದರು.
"ಮುನಿರತ್ನ ತನಗೆ ಅನುದಾನ ನೀಡಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತೊರೆದದ್ದು ಎಂದು ಸುಳ್ಳು ಹೇಳುತ್ತಿದ್ದಾರೆ. ನನ್ನ ಅಧಿಕಾರಾವಧಿಯಲ್ಲಿ ಆರ್.ಆರ್ ನಗರ ಕ್ಷೇತ್ರಕ್ಕೆ ರೂ.2,000 ಕೋಟಿಗೂ ಅಧಿಕ ಅನುದಾನ ನೀಡಿದ್ದೆ, ಇಂದು ಕ್ಷೇತ್ರದಲ್ಲಿ ಏನಾದರೂ ಅಭಿವೃದ್ಧಿ ಕಾರ್ಯಗಳಾಗಿದ್ದರೆ ಅದಕ್ಕೆ ನಮ್ಮ ಸರ್ಕಾರ ಕಾರಣ" ಎಂದು ಸಿದ್ದರಾಮಯ್ಯ ಹೇಳಿದರು.
"ಕೆ.ಆರ್ ಪೇಟೆಯಲ್ಲಿ ಹಣ ಹಂಚಿ ಗೆದ್ದಂತೆ ಶಿರಾ ಮತ್ತು ಆರ್.ಆರ್ ನಗರದಲ್ಲೂ ಹಣ ಹಂಚಿ ಸುಲಭದಲ್ಲಿ ಗೆಲ್ಲಬಹುದು ಎಂಬುದು ಬಿಜೆಪಿಯವರ ಲೆಕ್ಕಾಚಾರ. ಆದರೆ ಇಲ್ಲಿನ ಜನ ಹಣದ ಆಮಿಷಕ್ಕೆ ಒಳಗಾಗದೆ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸವಿದೆ"ಎಂದು ಸಿದ್ದರಾಮಯ್ಯ ಹೇಳಿದರು.












Click it and Unblock the Notifications