ಬೆಂಗಳೂರು: ರಸ್ತೆಗುಂಡಿಯಿಂದ ಅಪಘಾತ, ಮಹಿಳೆ ಸಾವು: ತನಿಖೆಗೆ ಸಿಎಂ ಆದೇಶ
ಬೆಂಗಳೂರು, ಅಕ್ಟೋಬರ್ 18: ರಸ್ತೆಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬೈಕ್ ಸವಾರರು ರಸ್ತೆಗೆ ಬಿದ್ದಿದ್ದು, ಕೆಎಸ್ಆರ್ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಹಿಳೆ ಚಿಕಿತ್ಸೆ ಫಲಿಸದೇ ಮಂಗಳವಾರ ನಿಧನರಾಗಿದ್ದಾರೆ. ರಸ್ತೆಗುಂಡಿಯಿಂದ ಅಪಘಾತ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರ ಜತೆ ಚರ್ಚಿಸಿದ್ದು, ಸೂಕ್ತ ತನಿಖೆಗೆ ನಡೆಸಿ ಸಮಗ್ರ ವರದಿ ಮಾಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಸೋಮವಾರ ಬೆಳಗ್ಗೆ ರಾಜಾಜಿನಗರದ ಸುಜಾತ ಚಿತ್ರಮಂದಿರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 50 ವರ್ಷದ ಉಮಾದೇವಿ ಅವರು ಗಂಭೀರವಾಗಿ ಗಾಯಗೊಂಡು ಇಎಸ್ಐ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ. ಈ ಘಟನೆಗೆ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ, ರಸ್ತೆಗುಂಡಿಗಳನ್ನು ಮುಚ್ಚದಿರುವುದೇ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ನವೆಂಬರ್ನಲ್ಲಿ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಪ್ರಕರಣ ಕುರಿತು ಮಂಗಳವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಘಟನೆಯಿಂದ ತೀವ್ರವಾಗಿ ಗಾಯಗೊಂಡು ಮಹಿಳೆಯು ನಿಧನರಾಗಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ಪೊಲೀಸರಿಗೆ ತ್ವರಿತವಾಗಿ ಪ್ರಕರಣ ತನಿಖೆ ನಡೆಸಿ ಮೊದಲು ವರದಿ ನೀಡಿ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಿದ್ದೇವೆ.
ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಮುಖ್ಯವಾಗಿ ಈ ರೀತಿಯ ಅಪಘಾತ ಘಟನೆಗಳಿಗೆ ಕಾರಣ ಏನೆಂದು ಎಂದು ಪಾಲಿಕೆ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು.
ಸೋಮವಾರ ಬೆಳಗ್ಗೆ ಸುಜಾತ ಬಳಿ, ಮಧ್ಯಾಹ್ನ ಕಾರ್ಪೋರೇಷನ್ ಸರ್ಕಲ್ ಬಳಿ ಮತ್ತೊಬ್ಬ ಬೈಕ್ ಸವಾರರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ ಒಟ್ಟು 11 ಜೀವಗಳು ರಸ್ತೆಗುಂಡಿ ಸಮಸ್ಯೆಯಿಂದಾಗಿ ಬಲಿಯಾಗಿವೆ ಎಂದು ತಿಳಿದು ಬಂದಿದೆ.