Beganluru Rape case: ಆಟೋದಲ್ಲಿ ಒಂಟಿಯಾಗಿರುವಾಗ ಹುಷಾರ್! ಬೆಂಗಳೂರಿನಲ್ಲಿ ಮಧ್ಯ ರಾತ್ರಿ ಯುವತಿ ಮೇಲೆ ಅತ್ಯಾಚಾರ
ಬೆಂಗಳೂರು ಆಗಸ್ಟ್ 18: ಕೋಲ್ಕತ್ತಾ ವೈದ್ಯೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇಡೀ ದೇಶದಾದ್ಯಂತ ವೈದ್ಯರು ಪ್ರತಿಭಟನೆಗೆ ಮುಂದಾಗಿರುವ ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಧ್ಯ ರಾತ್ರಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದೆ.
ಕೋಲ್ಕತ್ತಾದಲ್ಲಿ ವೈದ್ಯೆ ವಿದ್ಯಾರ್ಥಿ ಮೇಲೆ ಕಾಮುಕರು ಎರಗಿ ಅತ್ಯಾಚಾರವೆಸಗಿದ್ದು ಮಾತ್ರವಲ್ಲದೆ ಅಮಾನುಷವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಕಿಚ್ಚು ಹೆಚ್ಚಾಗಿದೆ. ಇದರ ನಡುವೆ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಸಿಲಿಕಾನ್ ಸಿಟಿ ಜನ ಆತಂಕಕ್ಕೆ ಒಳಗಾಗಿದ್ದಾರೆ.

ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕೋರಮಂಗಲದ ಪಬ್ನಿಂದ ಪಾನಮತ್ತಳಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ಹೋಗುತ್ತಿದ್ದಳು. ಈ ವೇಳೆ ಬ್ಯಾಲೆನ್ಸ್ ತಪ್ಪಿ ಅಪಘಾತ ಸಂಭವಿಸಿದೆ.
ಬಳಿಕ ಆಕೆ ತನ್ನ ದ್ವಿಚಕ್ರ ವಾಹನ ಅಲ್ಲೇ ಬಿಟ್ಟು ಆಟೋದಲ್ಲಿ ತೆರಳಿದ್ದಾಳೆ. ಈ ವೇಳೆ ಆಟೋ ಚಾಲಕ ಯುವತಿ ಸ್ಥಿತಿ ಕಂಡು ಆಕೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋದಲ್ಲಿ ಮನೆಗೆ ಬಿಡುವ ಬದಲಿಗೆ ಚಾಲಕ ಹಾಗೂ ಇನ್ನಿತರರು ಸೇರಿ ಬೊಮ್ಮನಹಳ್ಳಿ ಸಮೀಪದ ಗೋದಾಮು ಬಳಿ ಕರೆದುಕೊಂಡು ಹೋಗಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತನ್ನ ಸ್ನೇಹಿತೆಯ ಸಹಾಯದಿಂದ ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದಾಳೆ. ವೈದ್ಯರು ಪರೀಕ್ಷೆ ಮಾಡಿದಾಗ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ. ಆಸ್ಪತ್ರೆ ಸಿಬ್ಬಂದಿ ತಕ್ಷಣ ಹೆಬ್ಬಗೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನೆ ಸಂಬಂಧ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಯುವತಿ ಮೇಲೆ ಅತ್ಯಾಚಾರ ನಡೆದಿದ್ದು ನಿಜ. ಸಂತ್ರಸ್ತ ಯುವತಿಗೆ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಪ್ರೊಸೀಜರ್ನಲ್ಲಿ ಏನಿದೆಯೋ ಅದರಂತೆ ಪೊಲೀಸರು ಮಾಡ್ತಿದ್ದಾರೆ. ಮೆಡಿಕಲ್ ಟೆಸ್ಟ್ ಎಲ್ಲ ನಡೆಯುತ್ತಿದೆ ಎಂದರು.
ಇನ್ನೂ ಆಸ್ಪತ್ರೆಗೆ ಭೇಟಿ ನೀಡಿದ ಅಡಿಷನಲ್ ಕಮಿಷನರ್ ಯುವತಿಯ ಆರೋಗ್ಯ ವಿಚಾರಿಸಿದ್ದಾರೆ. ಖಾಸಗಿ ಆಸ್ಪತ್ರೆಯ ತುರ್ತುಚಿಕಿತ್ಸಾ ಘಟಕದಲ್ಲಿ ಸಂತ್ರಸ್ಥೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಯುವತಿ ಇರುವ ವಾರ್ಡ್ ಬಳಿ ಹೆಚ್ಚುವರಿ ಸೆಕ್ಯೂರಿಟಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಪಾನಮತ್ತ ಯುವತಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ. ಹೊರ ರಾಜ್ಯದವರಾಗಿದ್ದ ಸಂತ್ರಸ್ಥೆ ಬೆಂಗಳೂರಿನಲ್ಲಿ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡ್ತಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications