ಡಿಸೆಂಬರ್ ನಲ್ಲಿ ದಾವಣಗೆರೆಯಲ್ಲಿ ಮೂರನೇ ವಿಶ್ವ ಕನ್ನಡ ಸಮ್ಮೇಳನ
ಬೆಂಗಳೂರು, ಜುಲೈ 18 : ವರ್ಷಾಂತ್ಯದೊಳಗೆ ದಾವಣಗೆರೆಯಲ್ಲಿ ಮೂರನೇ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ನಾಡಿನ ಗಣ್ಯರು, ಹಿರಿಯ ಸಾಹಿತಿಗಳು ಹಾಗೂ ಕಲಾವಿದರ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಹೊರಹೊಮ್ಮಿತು.
ರಾಜ್ಯದಲ್ಲಿನ ಬರ ಪರಿಸ್ಥಿತಿಗೂ ಹಾಗೂ ವಿಶ್ವ ಕನ್ನಡ ಸಮ್ಮೇಳನ ಆಯೋಜನೆಗೂ ಅನಗತ್ಯವಾಗಿ ಸಂಬಂಧ ಕಲ್ಪಿಸಬಾರದು ಎಂಬುದು ಬಹುತೇಕರ ಅನಿಸಿಕೆಯಾಗಿತ್ತು. ಅಲ್ಲದೆ, ಕನ್ನಡದ ತಿಂಗಳು ಎಂದೇ ಗುರುತಿಸುವ ನವೆಂಬರ್ ನಲ್ಲೇ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಬೇಕು ಎಂದು ಹಲವರು ಸಲಹೆ ನೀಡಿದರು.

ಸಭೆಯ ಅಂತ್ಯದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸೆಂಬರ್ ಮೊದಲನೇ ಅಥವಾ ಎರಡನೇ ವಾರದಲ್ಲಿ ದಾವಣಗೆರೆಯಲ್ಲಿ ಮೂರನೇ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದು ಪ್ರಕಟಿಸಿದರು.
ವಾರದೊಳಗೆ ಸಾಂಸ್ಕೃತಿಕ ನೀತಿ ಜಾರಿ - ಅಕಾಡೆಮಿಗಳಿಗೆ ನೇಮಕ
ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸುವ ಮುನ್ನ, ರಾಜ್ಯದ ಸಾಂಸ್ಕೃತಿಕ ನೀತಿಯನ್ನು ಜಾರಿಗೊಳಿಸಬೇಕು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇರುವ ಅಧ್ಯಕ್ಷ ಹಾಗೂ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಬೇಕು ಎಂದು ಸಾಹಿತಿ ಕೆ. ವೈ. ನಾರಾಯಣ ಸ್ವಾಮಿ ಸಲಹೆ ನೀಡಿದರು.
ಅದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ, ಇನ್ನು ವಾರದೊಳಗೆ ಸಾಂಸ್ಕೃತಿಕ ನೀತಿಯನ್ನು ಜಾರಿಗೊಳಿಸಲಾಗುವುದು. ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇರುವ ಅಧ್ಯಕ್ಷ ಹಾಗೂ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.












Click it and Unblock the Notifications