ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಪುನರುಚ್ಚರಿಸಿದ ಯತ್ನಾಳ್
ಬೆಂಗಳೂರು, ಮಾರ್ಚ್ 2: ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುನರುಚ್ಚರಿಸಿದ್ದಾರೆ.
Recommended Video
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಕಾಂಗ್ರೆಸ್ ಮತ್ತು ದೊರೆಸ್ವಾಮಿಯಂಥಹ ನಕಲಿ ಸ್ವಾತಂತ್ರ್ಯ ಹೋರಾಟಗಾರರು ಭಾರತವನ್ನು ಪಾಕಿಸ್ತಾನದ ಭಾಗ ಮಾಡಲು ಹೊರಟಿದ್ದಾರೆ.
ದೊರೆಸ್ವಾಮಿ ಅವರನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರ , ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು.
ಸಿದ್ದರಾಮಯ್ಯ ಹೇಳಿಕೆಗೆ ಯತ್ನಾಳ್ ಆಕ್ರೋಶ
ನನ್ನನ್ನು ಸ್ಸಪೆಂಡ್ ಮಾಡಲು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಯಾವ ಆಧಾರದಲ್ಲಿ ನನ್ನನ್ನು ಸಸ್ಪೆಂಡ್ ಮಾಡುತ್ತಾರೆ. ಮೋದಿಯವರನ್ನು ಸಿದ್ದರಾಮಯ್ಯ ಕೊಲೆಗಡುಕ ಎಂದಿದ್ದರಲ್ಲವೆ, ಮೊದಲು ಸಿದ್ದರಾಮಯ್ಯ ಅವರನ್ನು ಸದನದಿಂದ ಸಸ್ಪೆಂಡ್ ಮಾಡಿ ಎಂದು ಹೇಳಿದರು.
ಯತ್ನಾಳ್ ಅವರನ್ನು ಕೂಡಲೇ ಅಮಾನತು ಮಾಡಬೇಕು
ಸ್ವಾತಂತ್ರ್ಯ ಹೋರಾಟಗಾರ ಎಚ್ಎಸ್ ದೊರೆಸ್ವಾಮಿಯ ಕುರಿತಾಗಿ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ದೇಶದ್ರೋಹಿ ಯತ್ನಾಳ್ ಅಮಾನತು ಮಾಡಿ : ಸಿದ್ದರಾಮಯ್ಯ
ಸಿದ್ದರಾಮಯ್ಯ ಸರಣಿ ಟ್ವೀಟ್
ಈ ಕುರಿತಾಗಿ ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು , "ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ಅಗೌರವ ತೋರಿದ್ದಾರೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದವರು ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು" ಎಂದು ಒತ್ತಾಯಿಸಿದ್ದಾರೆ.
ದೊರೆಸ್ವಾಮಿಯನ್ನು ಒಂದೇ ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ
ಸ್ವಾತಂತ್ರ್ಯಹೋರಾಟಗಾರ ದೊರೆಸ್ವಾಮಿಯವರನ್ನು ಒಂದು ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ. ಅವರು ಹಿಂದೆ ತುರ್ತುಪರಿಸ್ಥಿತಿಯ ಕಾಲದಲ್ಲಿ ಇಂದಿರಾಗಾಂಧಿ ವಿರುದ್ಧವೂ ಪ್ರತಿಭಟಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು.
ಬಿಜೆಪಿ ನಾಯಕರು ಯತ್ನಾಳ್ ಹೇಳಿಕೆ ಬೆಂಬಲಿಸಿದ್ದಾರೆ
ಬಿಜೆಪಿ ನಾಯಕರು, ಮಂತ್ರಿಗಳು ಯತ್ನಾಳ್ ಹೇಳಿಕೆಯನ್ನು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ. ಪಕ್ಷದ ಶಾಸಕನೊಬ್ಬ ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ? ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಲಿ.