ದೆಹಲಿಯಲ್ಲಿ ವರಿಷ್ಠರ ಜೊತೆ ಯಡಿಯೂರಪ್ಪ ಏನೆಲ್ಲ ಚರ್ಚೆ ಮಾಡ್ತಿದ್ದಾರೆ?
ನವದೆಹಲಿ, ಜನವರಿ 10: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ಇಂಡಿಗೋ ವಿಮಾನ ಏರುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ದೆಹಲಿಯಲ್ಲಿ ವರಿಷ್ಠರ ಜೊತೆ ಯಾವೆಲ್ಲ ವಿಷಯಗಳನ್ನು ಚರ್ಚಿಸಲಾಗುತ್ತದೆ ಎಂಬುದನ್ನು ತಿಳಿಸಿದರು.
"ವರಿಷ್ಠರು ಅನುಮತಿ ಕೊಟ್ಟರೆ ವಿಸ್ತರಣೆಯಾಗುತ್ತದೆ. ಸಹಜವಾಗಿ ಯಾರು ಮಂತ್ರಿ ಆಗಬೇಕೋ ಅವರು ಆಗುತ್ತಾರೆ" ಎಂದು ಯಡಿಯೂರಪ್ಪ ಕೆಲ ದಿನಗಳ ಹಿಂದೆ ಹೇಳಿದ್ದರು. ಬಹುತೇಕ ಸಂಕ್ರಾಂತಿ ಹಬ್ಬದ ನಂತರ ಸಚಿವ ಸಂಪುಟ ವಿಸ್ತರಣೆ ಮುಹೂರ್ತ ನಿಗದಿ ಎಂಬುದು ಈಗ ಖಚಿತವಾಗುತ್ತಿದೆ.
ಚುನಾವಣೆಗೆ ಸಿದ್ಧತೆ: ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗೆ ಅಭ್ಯರ್ಥಿಗಳಾ ಆಯ್ಕೆ, ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪ್ರದರ್ಶನದ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಲಾಗುತ್ತದೆ. ಜೊತೆಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೂಡಾ ಚರ್ಚೆಯಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.

ಕರ್ನಾಟಕದಲ್ಲಿ ಸಿಎಂ ಬದಲಾಗಲಿದ್ದಾರೆ ಎನ್ನುವ ಗಾಳಿಸುದ್ದಿ ಬಗ್ಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿ, ಯಡಿಯೂರಪ್ಪ ಅವರೇ ಮುಂದಿನ ಎರಡೂವರೆ ವರ್ಷ ಸಿಎಂ, ಅವರು ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಇತ್ತೀಚೆಗೆ ಹೇಳಿದ್ದರು. ಇದಾದ ಬಳಿಕ ಸಚಿವ ಸಂಪುಟ ಸೇರಲು ಬಯಸಿರುವ ಶಾಸಕರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.
ಈ ಹಿಂದೆ ಮಾತು ಕೊಟ್ಟಂತೆ, ಎಂ.ಟಿ.ಬಿ ನಾಗರಾಜ್, ಆರ್.ಶಂಕರ್ ಮತ್ತು ಮುನಿರತ್ನ ಜೊತೆಗೆ ಅರವಿಂದ ಲಿಂಬಾವಳಿ ಮತ್ತು ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡಲು ಯಡಿಯೂರಪ್ಪ ಮುಂದಾಗಿದ್ದಾರೆ ಎಂಬ ಸುದ್ದಿಯಿದೆ. ಯಾವುದಕ್ಕೂ ಹೈಕಮಾಂಡ್ ನೀಡುವ ಅಂತಿಮ ಪಟ್ಟಿಯಲ್ಲಿ ಯಾರ ಹೆಸರಿತ್ತೋ ಕಾದು ನೋಡಬೇಕಿದೆ.












Click it and Unblock the Notifications