NEET ಅಕ್ರಮ: ಬೆಂಗಳೂರಲ್ಲಿ ಯುವ ಕಾಂಗ್ರೆಸ್ನಿಂದ ಸೈಕಲ್ ಜಾಥಾ, ಹೋರಾಟಕ್ಕೆ ಬಿಕೆ ಹರಿಪ್ರಸಾದ್ ಕರೆ
ಬೆಂಗಳೂರು: NEET ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆಯ ಹೊಣೆಗಾರಿಕೆ ಕೇಂದ್ರ ಸಚಿವರ ಹೊತ್ತು ರಾಜೀನಾಮೆ ನೀಡಬೇಕೆಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ) ವತಿಯಿಂದ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಯಿತು. ಇತ್ತೀಚೆಗೆ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಚಾಲನೆ ನೀಡಿದ್ದ 'ಛಾತ್ರೋನ್ ಕಿ ಗೂಂಜ್ (ವಿದ್ಯಾರ್ಥಿಗಳ ಧ್ವನಿ)' ಅಭಿಯಾನದಡಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಇಂದು ಭಾನುವಾರ ಬೆಳಗ್ಗೆ ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಿಂದ ಪ್ರಾರಂಭವಾದ ಜಾಥಾವು ಕೆ.ಆರ್.ಸರ್ಕಲ್ ಮುಖಾಂತರ ಗಾಂಧಿ ಪ್ರತಿಮೆವರೆಗೆ ಸಾಗಿತು. ಜಾಥಾದಲ್ಲಿ ಪಾಲ್ಗೊಂಡ ನೂರಾರು ವಿದ್ಯಾರ್ಥಿಗಳು, ಯುವಕರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸುವ ಫಲಕ (ಪ್ಲಕಾರ್ಡ್) ಹಿಡಿದು, ಜೀವನಕ್ಕಿಂತ ಜೀವ ದೊಡ್ಡದು, ಕನಸು ಸಾಯಬಾರದು - ವಿದ್ಯಾರ್ಥಿ ಸೋಲಬಾರದು ಎಂಬ ನಾನಾ ಘೋಷಣೆಗಳನ್ನು ಕೂಗುತ್ತಾ ಸೈಕಲ್ ತುಳಿಯುವ ಮೂಲಕ ಆತ್ಮಹತ್ಯೆ ಪರಿಹಾರವಲ್ಲ ಎಂಬ ಸಂದೇಶ ಸಾರಿದರು.

ಸದೃಢ ಭವಿಷ್ಯಕ್ಕಾಗಿ ಹೋರಾಟ, ಒತ್ತಾಯ ಅಗತ್ಯ
ಇದೇ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಸದೃಢ ಭವಿಷ್ಯ ರೂಪಿಸಲು ಬೇಕಾದ ಕಾರ್ಯಕ್ರಮಗಳನ್ನು ನೀವೇ ಸರ್ಕಾರವನ್ನು ಒತ್ತಾಯಿಸಿ ರೂಪಿಸುವಂತೆ ಮಾಡಬೇಕು ಎಂಬುದು ಸಂವಿಧಾನದ ಆಶಯ. ಉತ್ತಮ ಯೋಜನೆ, ಕಾರ್ಯಕ್ರಮಗಳಿಗಾಗಿ ನೀವು ಹೋರಾಟದ ಮೂಲಕ ಆಗ್ರಹಿಸಬೇಕು. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವ ಸರ್ಕಾರವನ್ನು ಕಿತ್ತೊಗೆಯಬೇಕು. ಸರಿಯಾದ ಶಿಕ್ಷಣ ವ್ಯವಸ್ಥೆಯಿಂದ ಮಾತ್ರ ಬದಲಾವಣೆ ಸಾಧ್ಯವಾಗಿದ್ದು, ಈ ಹೋರಾಟ ತಾರ್ಕಿಕ ಅಂತ್ಯ ತಲುಪುವವರೆಗೂ ಹೋರಾಡಿ ಎಂದು ಯುವಕರಿಗೆ, ವಿದ್ಯಾರ್ಥಿಗಳಿಗೆ ಅವರು ಕರೆ ನೀಡಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 1.40 ಕೋಟಿ ವಿದ್ಯಾರ್ಥಿಗಳ ಭವಿಷ್ಯ ಅಂಧಕಾರದಲ್ಲಿದೆ. ಅವರ ಆತ್ಮಸ್ಥೈರ್ಯ ಕುಂದಬಾರದು, ಅವರಲ್ಲಿ ಆತ್ಮವಿಶ್ವಾಸ ಪುನಃ ಮೂಡಬೇಕು ಎಂಬ ಸದುದ್ದೇಶದಿಂದ ರಾಹುಲ್ ಗಾಂಧಿಯವರು 'ಛಾತ್ರೋನ್ ಕಿ ಗೂಂಜ್' ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಅದರ ಅನುಸಾರ ಭಯದಲ್ಲಿರುವ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವ ಉದ್ದೇಶದಿಂದ ಇಂದು ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅಕ್ರಮದಿಂದ ಹಣವಂತರಿಗೆ ಉನ್ನತ ಹುದ್ದೆ?
ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಅವರು, ಭ್ರಷ್ಟ ವ್ಯವಸ್ಥೆಯ ಲೋಪಕ್ಕೆ ಯಾವುದೇ ವಿದ್ಯಾರ್ಥಿಗಳು ಜೀವವನ್ನು ಬಲಿಕೊಡಬಾರದು. ಬದಲಾವಣೆ ನಿರಂತರ ಹೋರಾಟದಿಂದ ಸಾಧ್ಯವೇ ಹೊರತು ಆತ್ಮಹತ್ಯೆಯಿಂದಲ್ಲ. ಪೋಷಕರೂ ಸಹ ಮಕ್ಕಳ ಮನಸ್ಥಿತಿಯನ್ನು ಅರ್ಥೈಸಿಕೊಂಡು ಅವರ ಬೆನ್ನಿಗೆ ನಿಲ್ಲಬೇಕಾದ ಅವಶ್ಯವಿದೆ. ಪರೀಕ್ಷಾ ಅಕ್ರಮದಿಂದ ಸಮರ್ಥರಲ್ಲದ, ಹಣ ಹೊಂದಿದ ವ್ಯಕ್ತಿಗಳು ಉನ್ನತ ಹುದ್ದೆಗಳನ್ನು ಪಡೆಯುತ್ತಿರುವುದು ದೇಶದ ದುರ್ದೈವ. ಇದನ್ನು ಒಗ್ಗಟ್ಟಿನ ಹೋರಾಟದಿಂದ ಮಾತ್ರ ತಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ಪರೀಕ್ಷಾ ವ್ಯವಸ್ಥೆ ಸುಧಾರಣೆ ಕಾಣುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂಬ ಶಪಥ ಮಾಡೋಣ ಎಂದರು.
ಪ್ರಶ್ನೆ ಪತ್ರಿಕೆ ಲೀಕ್: ಯಾರಿಗೂ ಶಿಕ್ಷೆ ಆಗಿಲ್ಲ!
ಬಿಜೆಪಿಯವರು ಮಕ್ಕಳಿಗೆ ವಿದ್ಯೆ ನೀಡಲು ತಯಾರಿಲ್ಲ. ಅವರ ಮಕ್ಕಳು ಪರೀಕ್ಷಾ ಅಕ್ರಮದಿಂದ ಉತ್ತೀರ್ಣರಾಗಿ ವಿದೇಶಗಳಲ್ಲಿ ಉತ್ತಮ ಹುದ್ದೆ ಪಡೆಯಬೇಕು ಎಂದು ಬಯಸುತ್ತಾರೆ. ಇದುವರೆಗೂ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಯಾವುದೇ ಪ್ರಕರಣದಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಚುನಾವಣೆ ಮತ್ತು ಓಟ್ ಚೋರಿಯಲ್ಲಿ ವಿದ್ಯಾವಂತರಾಗಿರುವ ಬಿಜೆಪಿಯವರು ಪರೀಕ್ಷೆ ನಡೆಸಲು ಅವಿದ್ಯಾವಂತರಾಗಿದ್ದಾರೆ. ಪರೀಕ್ಷಾ ಅಕ್ರಮದಿಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು ಕನಿಷ್ಟ ಕ್ಷಮೆ ಕೇಳದ ಅವರಿಗೆ ನಾಚಿಕೆಯಾಗಬೇಕು ಎಂದು ಕಿಡಿ ಕಾರಿದರು.
ಸೈಕಲ್ ಜಾಥಾ: ಹಕ್ಕೊತ್ತಾಯಗಳೇನು?
* ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
* ಎನ್ಟಿಎ ವ್ಯವಸ್ಥೆಯ ವಿರುದ್ಧ ಸಮಗ್ರ ತನಿಖೆ ಮತ್ತು ಸುಧಾರಣೆ ಆಗಬೇಕು.
* ಪರೀಕ್ಷೆಗಳು, ಫಲಿತಾಂಶಗಳು ಮತ್ತು ಉದ್ಯೋಗಾವಕಾಶಗಳಿಗಾಗಿ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಸಿದ್ಧಪಡಿಸಿ ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಒಕ್ಕೋರಲಿನಿಂದ ಒತ್ತಾಯಿಸಲಾಯಿತು.













Click it and Unblock the Notifications