ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ: ಜಮೀರ್ ಬ್ಯಾಟಿಂಗ್
ಬೆಂಗಳೂರು, ಅಕ್ಟೋಬರ್ 29: ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದರೂ ಮುಖ್ಯಮಂತ್ರಿ ಹುದ್ದೆಗೆ ಯಾರು ಏರಬೇಕು ಎಂಬ ಚರ್ಚೆ ಜೋರಾಗಿ ನಡೆಯುತ್ತಿರುವುದು ಕಾಂಗ್ರೆಸ್ನಲ್ಲಿ. ಅನೇಕ ಮುಖಂಡರು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿಕೆ ನೀಡಿರುವುದು ಕಾಂಗ್ರೆಸ್ನಲ್ಲಿ ಈ ಚರ್ಚೆಯನ್ನು ಹುಟ್ಟುಹಾಕಿದೆ. ಈ ವೇಳೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎನ್ನುವುದು ರಾಜ್ಯದ ಜನರ ಅಭಿಪ್ರಾಯ, ಹಾಗೇ ನನ್ನ ಅಭಿಪ್ರಾಯ ಕೂಡ. ಮುಖ್ಯಮಂತ್ರಿ ಯಾರಾಗಬೇಕು ಎಂದು ನಮ್ಮ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತೆ. ಆದರೆ ಜನರ ಅಭಿಪ್ರಾಯವನ್ನು ಹೇಳಿದ ಮಾತ್ರಕ್ಕೆ ಅದು ಪಕ್ಷ ವಿರೋಧಿ ಚಟುವಟಿಕೆಯಾಗಲ್ಲ ಎಂದು ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಕ್ಕೆ ತಮ್ಮ ಬೆಂಬಲ ಇದೆ ಎಂದಿರುವ ಪಕ್ಷದ ಅನೇಕ ಮುಖಮಡರಿಗೆ ತಿರುಗೇಟು ನೀಡಿದ್ದಾರೆ.
ಇದರ ಜತೆಗೆ ಅವರು ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಬಿಜೆಪಿ ಪ್ರತಿಪಾದಿಸಿದ್ದರೂ, ಬಿಜೆಪಿಯೊಳಗಿನ ಬೆಳವಣಿಗೆಗಳನ್ನು ಗಮನಿಸಿದರೆ ಮತ್ತೊಮ್ಮೆ ಚುನಾವಣೆ ಎದುರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

'ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಮುಗಿದ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳು ಆಗಬಹುದು. ಬಿಜೆಪಿ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಮತ್ತೆ ವಿಧಾನಸಭಾ ಚುನಾವಣೆ ಎದುರಾದರೂ ಆಶ್ಚರ್ಯವಿಲ್ಲ ಎಂದೆನಿಸುತ್ತಿದೆ' ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ಹಾಗೂ ಶಾಸಕರು ನಿರ್ಧರಿಸುತ್ತಾರೆ. ಕೆಲವರು ಅಭಿಮಾನದಿಂದ ಇವ್ರೆ ನಮ್ಮ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ, ಅವರಿಗೆಲ್ಲ ಮಾತಾಡ್ಬೇಡಿ ಅಂತ ಹೇಳೋಕಾಗುತ್ತಾ? ಎಂದು ಸಿದ್ದರಾಮಯ್ಯ ಕೂಡ ಬುಧವಾರ ಹೇಳಿದ್ದರು.












Click it and Unblock the Notifications