ಸಿದ್ದರಾಮಯ್ಯಗಾಗಿ ತ್ಯಾಗಕ್ಕೆ ಮುಂದಾದ ಜಮೀರ್ ಅಹ್ಮದ್ ಖಾನ್!
ಬೆಂಗಳೂರು, ಫೆಬ್ರವರಿ 15; ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್ ಖಾನ್ ತ್ಯಾಗವೊಂದನ್ನು ಮಾಡಲಿದ್ದಾರೆ. ಇದನ್ನು ಸಹ ಸಿದ್ದರಾಮಯ್ಯ ಅವರಿಗಾಗಿಯೇ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಜಮೀರ್ ಅಹ್ಮದ್ ಖಾನ್ ಮಾತನಾಡಿ, "ನಾನು ನನ್ನ ಚಾಮರಾಜಪೇಟೆ ಕ್ಷೇತ್ರವನ್ನು ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಡುತ್ತೇನೆ. ರಾಜ್ಯದಲ್ಲಿ ಸಿದ್ದರಾಮಯ್ಯ ಪರವಾದ ಅಲೆ ಇದೆ. ಅವರು ಚಾಮರಾಜಪೇಟೆ ಕ್ಷೇತ್ರದಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸಬೇಕು" ಎಂದರು.
2023ರ ಚುನಾವಣೆ; ಸಿದ್ದರಾಮಯ್ಯ, ಮಾಧುಸ್ವಾಮಿ ಎದುರಾಳಿಗಳು?
ಕೆಲವು ದಿನಗಳ ಹಿಂದೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿಕೆ ನೀಡಿ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆಯನ್ನು ಜಮೀರ್ ಅಹ್ಮದ್ ಖಾನ್ ಹುಟ್ಟು ಹಾಕಿದ್ದರು. ಈಗ ಸಿದ್ದರಾಮಯ್ಯಗಾಗಿ ಕ್ಷೇತ್ರವನ್ನೇ ಬಿಟ್ಟುಕೊಡುವ ಮಾತುಗಳನ್ನು ಆಡಿದ್ದಾರೆ.
ಬಾದಾಮಿಯಲ್ಲಿ ಸ್ಪರ್ಧೆ; ಇಕ್ಕಟ್ಟಿಗೆ ಸಿಲುಕಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಪ್ರಸ್ತುತ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಶಾಸಕರು. ಕಳೆದ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡೂ ಕಡೆ ಕಣಕ್ಕಿಳಿದಿದ್ದ ಸಿದ್ದರಾಮಯ್ಯ ಬಾದಾಮಿಯಲ್ಲಿ ಗೆದ್ದಿದ್ದರು. ಆದರೆ 2023ರ ಚುನಾವಣೆಗೆ ಅವರು ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಕ್ಷೇತ್ರ ಬದಲಾವಣೆ; ಮತ್ತೆ ಬಳ್ಳಾರಿಗೆ ಬಿ. ಶ್ರೀರಾಮುಲು?
ಜಮೀರ್ ಅಹ್ಮದ್ ಖಾನ್ ಹೇಳಿಕೆ
ಚಾಮರಾಜಪೇಟೆ ಕ್ಷೇತ್ರದ ನಾಲ್ಕು ಬಾರಿಯ ಶಾಸಕ ಜಮೀರ್ ಅಹ್ಮದ್ ಖಾನ್ ಮಾತನಾಡಿ, "ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ನಾನು ಚುನಾವಣಾ ಕಣಕ್ಕಿಳಿಯುವುದಿಲ್ಲ. ಸಿದ್ದರಾಮಯ್ಯ, ರಾಜ್ಯಕ್ಕೆ ಅನುಕೂಲವಾಗಬೇಕು. ಜನರ ಸೇವೆ ಮಾಡಲು ನನ್ನ ಕ್ಷೇತ್ರವನ್ನು ಸಿದ್ದರಾಮಯ್ಯಗಾಗಿ ತ್ಯಾಗ ಮಾಡುತ್ತೇನೆ" ಎಂದು ಹೇಳಿದರು.
ಬಾದಾಮಿಯಲ್ಲಿ ಸ್ಪರ್ಧೆ ಅನುಮಾನ
2018ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಾದಾಮಿಯಲ್ಲಿ ಕಣಕ್ಕಿಳಿಯಲು ಬಯಸಿದಾಗ ಬಿ. ಬಿ. ಚಿಮ್ಮನಕಟ್ಟಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಆದರೆ ಕೆಲವು ದಿನಗಳ ಹಿಂದೆ ಮಾತನಾಡಿದ್ದ ಅವರು ಮುಂದಿನ ಚುನಾವಣೆಯಲ್ಲಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಆಹ್ವಾನಿಸುವುದಿಲ್ಲ ಎಂಬ ಮಾತನ್ನು ಆಡಿದ್ದರು. ಸಿದ್ದರಾಮಯ್ಯ ಸಹ ಕ್ಷೇತ್ರ ಬದಲಾವಣೆ ಮಾಡುವ ಚಿಂತನೆಯಲ್ಲಿದ್ದು, ಎಲ್ಲಿಂದ ಕಣಕ್ಕಿಳಿಯಲಿದ್ದಾರೆ? ಎಂದು ಬಿಜೆಪಿ, ಜೆಡಿಎಸ್ ಪಕ್ಷಗಳು ಸಹ ಕಾಯುತ್ತಿವೆ.
ಹಲವಾರು ಕ್ಷೇತ್ರದಿಂದ ಆಹ್ವಾನ
ಸಿದ್ದರಾಮಯ್ಯಗೆ ಚಾಮರಾಜಪೇಟೆ ಒಂದೇ ಅಲ್ಲ ಸುಮಾರು 10 ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ಚಾಮರಾಜಪೇಟೆ, ಚಾಮರಾಜನಗರ, ಹೆಬ್ಬಾಳ, ತುಮಕೂರು, ಕೊಪ್ಪಳ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಆಹ್ವಾನ ನೀಡಲಾಗಿದೆ. ಆದರೆ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ? ಎಂಬ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. "ನಾನು ಬಾದಾಮಿ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ. ಹೈಕಮಾಂಡ್ ಸೂಚಿಸಿದ ಕ್ಷೇತ್ರದಿಂದ ಕಣಕ್ಕಿಳಿಯುವೆ" ಎಂದು ಸಿದ್ದರಾಮಯ್ಯ ಹಲವು ಬಾರಿ ಹೇಳಿಕೆ ನೀಡಿದ್ದಾರೆ.
ಮೈಸೂರು ಜಿಲ್ಲೆಯಿಂದ ಸ್ಪರ್ಧೆ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 2023ರ ಚುನಾವಣೆಗೆ ಮೈಸೂರು ಜಿಲ್ಲೆಯ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ವರುಣಾದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಶಾಸಕರು, ಚಾಮುಂಡೇಶ್ವರಿಯಿಂದ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ ಇದೆ. ಹಾಗಾದರೆ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರ ಯಾವುದು? ಎಂಬುದು ಕುತೂಹಲ ಮೂಡಿಸಿದೆ.
ಕೆಲವು ದಿನಗಳ ಹಿಂದೆ ಮಾತನಾಡಿದ್ದ ಸಿದ್ದರಾಮಯ್ಯ, "ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೋಲಾರ, ಕೊಪ್ಪಳ, ಚಾಮರಾಜಪೇಟೆ, ಹೆಬ್ಬಾಳ, ಚಾಮುಂಡೇಶ್ವರಿ, ವರುಣಾ, ಬಾದಾಮಿ ಹೀಗೆ 10 ಕ್ಷೇತ್ರಗಳಿಂದ ಆಹ್ವಾನ ಬರುತ್ತಿದೆ. ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ" ಎಂದು ಸ್ಪಷ್ಟಪಡಿಸಿದ್ದರು.
ಹಲವು ಬಾರಿ ಚಾಮರಾಜಪೇಟೆಗೆ ಭೇಟಿ
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಜಮೀರ್ ಅಹ್ಮದ್ ಖಾನ್ ಸಿದ್ದರಾಮಯ್ಯ ಪರಮಾಪ್ತರು. ಸಿದ್ದರಾಮಯ್ಯ ಸಹ ಪದೇ ಪದೇ ಚಾಮರಾಜಪೇಟೆ ಕ್ಷೇತ್ರದಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಲವು ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯರನ್ನು ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಜಮೀರ್ ಅಹ್ಮದ್ ಖಾನ್ ಕೂಡಾ ಆಹ್ವಾನಿಸಿದ್ದಾರೆ.
Recommended Video