ಮಧ್ಯಪ್ರದೇಶ ರಾಜಕೀಯ ಹೈಡ್ರಾಮಾಕ್ಕೆ ಕೆ.ಸಿ.ವೇಣುಗೋಪಾಲ್ ಪ್ರತ್ಯುತ್ತರ
ಭೂಪಾಲ್, ಮಾರ್ಚ್.06: ರಾಜ್ಯಸಭಾ ಚುನಾವಣೆ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾಗೆ ಸಂಬಂಧಿಸಿದಂತೆ ಎಐಸಿಸಿ ಜನರಲ್ ಸೆಕ್ರಟರಿ ಕೆ.ಸಿ.ವೇಣುಗೋಪಾಲ್ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೆ.ಸಿ.ವೇಣುಗೋಪಾಲ್, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸರ್ಕಾರವು ಸುಲಲಿತವಾಗಿ ತನ್ನ ಅವಧಿ ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಧ್ಯಪ್ರದೇಶ ರಾಜಕಾರಣದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದು ಸರ್ಕಾರವು ಐದು ವರ್ಷಗಳ ಕಾಲ ಸುಭದ್ರ ಆಡಳಿತವನ್ನು ನೀಡುತ್ತದೆ ಎಂದು ತಿಳಿಸಿದರು. ಇಡೀ ದೇಶವೇ ಕೊರೊನಾ ವೈರಸ್ ನಿಂದ ಆತಂಕದಲ್ಲಿದ್ದಾರೆ. ಬಿಜೆಪಿ ನಾಯಕರು ಮಾತ್ರ ಕುದುರೆ ವ್ಯಾಪಾರದಲ್ಲಿ ಬ್ಯುಸಿ ಆಗಿದ್ದಾರೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಶಾಸಕರಿಗೆ ಕಂತೆ ಕಂತೆ ಕಾಸಿನ ಆಸೆ:
ಮಧ್ಯಪ್ರದೇಶದಲ್ಲಿ ಇರುವ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಶತಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಕೋಟಿ ಕೋಟಿ ರೂಪಾಯಿ ಹಣದ ಆಮಿಷವೊಡ್ಡುತ್ತಿದ್ದಾರೆ. ಆದರೆ, ಅವರ ಪ್ರಯತ್ನ ಯಾವುದೇ ಕಾರಣಕ್ಕೂ ಫಲಿಸುವುದಿಲ್ಲ ಎಂದು ಕೆ.ಸಿ.ವೇಣುಗೋಪಾಲ್ ತಿಳಿಸಿದರು.
ಇನ್ನೊಂದೆಡೆ ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಬಲೆ ಬೀಸಿದ್ದರೆ, ಇದಕ್ಕೆ ಪ್ರತಿತಂತ್ರವಾಗಿ ಬಿಜೆಪಿಯ ಶಾಸಕರಿಗೆ ಕಾಂಗ್ರೆಸ್ ಕೈ ಬೀಸಿ ಕರೆಯುತ್ತಿದೆ. ಆಪರೇಷನ್ ಕಮಲಕ್ಕೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಆಪರೇಷನ್ ಪಂಜಾ ನಡೆಸುತ್ತಿದೆ. ಆ ಮೂಲಕ ವಿರೋಧಿ ಗುಂಪಿನ ಶಾಸಕರನ್ನು ಸೆಳೆಯಲು ಸ್ಕೆಚ್ ಹಾಕಲಾಗಿದೆ.












Click it and Unblock the Notifications