ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ?
ಭೋಪಾಲ್, ಜನವರಿ 26 : ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗುವ ಸುಳಿವು ಸಿಕ್ಕಿದೆ. ಒಂದು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುವ ಸೂಚನೆಯನ್ನು ಮಾಜಿ ಮುಖ್ಯಮಂತ್ರಿಗಳು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಶಿವರಾಜ್ ಸಿಂಗ್ ಚೌವ್ಹಾಣ್ ಈ ಕುರಿತು ಸುಳಿವು ನೀಡಿದ್ದಾರೆ. "ಜೌರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ" ಎಂದು ಹೇಳಿದ್ದಾರೆ.
2019ರ ಡಿಸೆಂಬರ್ 21ರಂದು ಔರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬನ್ಸಾರಿ ಲಾಲ್ ನಿಧನ ಹೊಂದಿದ್ದಾರೆ. ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಆದರೆ, ಉಪ ಚುನಾವಣೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಬಿಜೆಪಿ ನಾಯಕರು ಮಾತ್ರ ಈಗಲೇ ಗೆಲುವಿನ ಉತ್ಸಾಹದಲ್ಲಿದ್ದಾರೆ.
"ರಾಜ್ಯದಲ್ಲಿನ ಜನರ ಭಾವನೆಗಳನ್ನು ನೋಡಿದರೆ ಔರಾ ಕ್ಷೇತ್ರವಲ್ಲ ರಾಜ್ಯದಲ್ಲಿಯೇ ಬಿಜೆಪಿ ಅಧಿಕಾರಕ್ಕೆ ಬರಲಿದೆ" ಎಂದು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಅಧಿಕಾರಕ್ಕಾಗಿ ಕಾದು ಕುಳಿತಿಲ್ಲ
"ಬಿಜೆಪಿ ಅಧಿಕಾರಕ್ಕಾಗಿ ಕಾದು ಕುಳಿತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳಿಗೂ ಸೂಕ್ತ ಅವಕಾಶವಿದೆ. ಆದರೆ, ವಿರೋಧ ಪಕ್ಷದವರನ್ನು ಹತ್ತಿಕ್ಕುವ ಕಾಂಗ್ರೆಸ್ನ ನಡೆಯಿಂದಾಗಿ ಹಲವು ಬೆಳವಣಿಗೆ ನಡೆಯಲಿದೆ" ಎಂದು ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.

ಹಗಲು ಗನಸು ಎಂದು ಕಾಂಗ್ರೆಸ್ ಲೇವಡಿ
ಮಧ್ಯಪ್ರದೇಶದಲ್ಲಿ ಶೀಘ್ರದಲ್ಲಿಯೇ ಬಿಜೆಪಿ ಅಧಿಕಾರ ಪಡೆಯಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಹಗಲುಗನಸು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ಗೆ ತಿರುಗೇಟು ನೀಡಿದೆ.

ಕನಸು ಕಾಣುವುದನ್ನು ಬಿಡಿ
ಮಧ್ಯಪ್ರದೇಶದ ಕಾಂಗ್ರೆಸ್ ವಕ್ತಾರ ಪಂಕಜ್ ಚರ್ತುವೇದಿ, "ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಬಿಜೆಪಿ ನಾವು ಮತ್ತೆ ಅಧಿಕಾರ ಪಡೆಯುತ್ತೇವೆ ಎಂದು ಹೇಳುತ್ತದೆ. ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶವನ್ನು ಶಿವರಾಜ್ ಸಿಂಗ್ ಚೌವ್ಹಾಣ್ ನೋಡಲಿ. ಬಳಿಕ ಕನಸು ಕಾಣುವುದನ್ನು ನಿಲ್ಲಿಸಲಿ" ಎಂದು ಟೀಕಿಸಿದ್ದಾರೆ.

ಕಮಲನಾಥ್ ಸರ್ಕಾರ ಭದ್ರ
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವಿದೆ. ಕಾಂಗ್ರೆಸ್ 114, ಬಿಜೆಪಿ 108 ಶಾಸಕರ ಬಲವನ್ನು ಹೊಂದಿವೆ. 4 ಪಕ್ಷೇತರರು, ಇಬ್ಬರು ಬಿಎಸ್ಪಿ ಶಾಸಕರು, ಒಬ್ಬರು ಸಮಾಜವಾದಿ ಪಕ್ಷದ ಶಾಸಕರು ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.












Click it and Unblock the Notifications