"ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಳ್ಳಬೇಡಿ"
ಭೋಪಾಲ್, ಏಪ್ರಿಲ್ 10: ದೇಶದಲ್ಲಿ ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಇಂಥ ಸಂದರ್ಭದಲ್ಲಿ ಕೊರೊನಾ ಸೋಂಕಿತರಿಂದ ಹೆಚ್ಚಿನ ಶುಲ್ಕ ಪಡೆದುಕೊಂಡು ಪರಿಸ್ಥಿತಿಯನ್ನು ದುರುಪಯೋಗ ಮಾಡಿಕೊಳ್ಳಬೇಡಿ ಎಂದು ಮಧ್ಯಪ್ರದೇಶ ಹೈಕೋರ್ಟ್, ಭಾರತೀಯ ವೈದ್ಯಕೀಯ ಸಂಸ್ಥೆ (IMA) ಹಾಗೂ ರಾಜ್ಯ ನರ್ಸಿಂಗ್ ಹೋಂ ಅಸೋಸಿಯೇಷನ್ಗೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಮೊಹಮದ್ ರಫೀಕ್ ಹಾಗೂ ಸಂಜಯ್ ದ್ವಿವೇದಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಆದೇಶದಲ್ಲಿ ಹೀಗೆ ಉಲ್ಲೇಖಿಸಿದೆ.
ದೇಶದಲ್ಲಿ ಒಂದೇ ದಿನ 1,45,384 ಕೊರೊನಾ ಪ್ರಕರಣ; 794 ಮಂದಿ ಸಾವು
ದೇಶದಲ್ಲಿ ಕೊರೊನಾ ಎರಡನೇ ಅಲೆ ಬಿಕ್ಕಟ್ಟು ಮೂಡಿಸಿರುವ ಇಂಥ ಸಮಯದಲ್ಲಿ ಈ ಸಂಸ್ಥೆಯ ಸದಸ್ಯರು ಕೊರೊನಾ ಸೋಂಕಿತರಿಗೆ ಹೆಚ್ಚಿನ ಶುಲ್ಕ ವಿಧಿಸಿ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ಬಿಡಬೇಕು ಎಂದು ನ್ಯಾಯಾಲಯ ಹೇಳಿದೆ.
ಆರ್ಟಿಪಿಸಿಆರ್ ಪರೀಕ್ಷೆ, ಆ್ಯಂಟಿಜೆನ್ ಪರೀಕ್ಷೆ, ಕೊರೊನಾ ಸೋಂಕು ತಗುಲಿರುವ ಶಂಕೆ ಇರುವವರಿಗೆ ನಡೆಸಲಾಗುವ ಸಿಟಿ/ಎಚ್ಆರ್ಸಿಟಿ ಸ್ಕ್ಯಾನ್ಗಳಿಗೆ ಸರ್ಕಾರ ನಿಗದಿಪಡಿಸಿರುವ ದರಗಳಿಗೆ ವ್ಯಾಪಕ ಪ್ರಚಾರ ನೀಡುವಂತೆ ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ನ್ಯಾಯಾಲಯ ನಿರ್ದೇಶನ ನೀಡಿರುವುದಾಗಿ ವಕೀಲ ಸ್ವಪ್ನಿಲ್ ಗಂಗೂಲಿ ತಿಳಿಸಿದ್ದಾರೆ.
ಕೊರೊನಾ ಚಿಕಿತ್ಸಾ ಶುಲ್ಕಗಳ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆಯುಷ್ಮಾನ್ ಭಾರತ್ ಮಧ್ಯಪ್ರದೇಶ ನಿರ್ಮಯಂ ಯೋಜನೆ ಅಡಿಯಲ್ಲಿ ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಕೇಂದ್ರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳನ್ನು ಪಟ್ಟಿಮಾಡುವಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಅರ್ಹ ಜನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಫಲ ದೊರಕಿಸಿಕೊಡುವ ಗುರಿ ಹೊಂದಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಹೊರಡಿಸಿರುವ ಸೂಚನೆಗಳ ಕಟ್ಟುನಿಟ್ಟಿನ ಅನುಸರಣೆ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ನಿರ್ದೇಶನ ನೀಡಬೇಕೆಂದು ವಕೀಲ ನಮನ್ ನಾಗರತ್ ಸಲ್ಲಿಸಿದ್ದ ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯ ಈ ಹೊಸ ನಿರ್ದೇಶನಗಳನ್ನು ನೀಡಿದೆ.
ಮಧ್ಯಪ್ರದೇಶದ ಕೊರೊನಾ ಪ್ರಕರಣಗಳು: ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ಪ್ರಮುಖ ಹತ್ತು ರಾಜ್ಯಗಳಲ್ಲಿ ಮಧ್ಯಪ್ರದೇಶ ಕೂಡ ಒಂದಾಗಿದೆ. ಕಳೆದ 24 ಗಂಟೆಗಳಲ್ಲಿ ಮಧ್ಯಪ್ರದೇಶದಲ್ಲಿ 4,882 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಪ್ರಕರಣಗಳ ಸಂಖ್ಯೆ 3,27,220 ಆಗಿದೆ. ರಾಜ್ಯದಲ್ಲಿ ಸೋಂಕಿನಿಂದ ಇದುವರೆಗೂ 4000 ಜನರು ಸಾವನ್ನಪ್ಪಿದ್ದಾರೆ.