ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಬೆಂಕಿ: ಮೃತ 10 ಮಂದಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
ಜಬಲ್ಪುರ ಆಗಸ್ಟ್ 1: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಭಾರಿ ಅಗ್ನಿ ಅವಘಡದಿಂದಾಗಿ 10 ಮಂದಿ ಸಾವನ್ನಪ್ಪಿದ್ದಾರೆ. ಗೋಹಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಲ್ ಭಾಟಾದಲ್ಲಿರುವ ನ್ಯೂ ಲೈಫ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಬೆಂಕಿಯಲ್ಲಿ ಹತ್ತು ಜನರು ಸಾವನ್ನಪ್ಪಿದ್ದು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಜಬಲ್ಪುರ ಜಿಲ್ಲಾಧಿಕಾರಿ ಅಲ್ಲಯ್ಯ ರಾಜಾ ತಿಳಿಸಿದ್ದಾರೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಘಟನೆಯನ್ನು ದೃಢಪಡಿಸಿದ ಜಬಲ್ಪುರ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಬಹುಗುಣ, ''ತೀವ್ರ ಸುಟ್ಟಗಾಯಗಳಿಂದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೂವರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರನ್ನು ಗುರುತಿಸಲಾಗುತ್ತಿದೆ" ಎಂದು ಬಹುಗುಣ ಹೇಳಿದರು.
ವರದಿಗಳ ಪ್ರಕಾರ, ಆಸ್ಪತ್ರೆಯಿಂದ ಸ್ಥಳಾಂತರಿಸಲು ಒಂದೇ ಮಾರ್ಗವಿದ್ದ ಕಾರಣ ಹೆಚ್ಚಿನ ಜನರು ಒಳಗೆ ಸಿಲುಕಿಕೊಂಡರು. ಆರಂಭದಲ್ಲಿ ಅಗ್ನಿಶಾಮಕ ದಳದ ವಾಹನಗಳಿಗೂ ಬೆಂಕಿ ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಬಳಿಕ ವಿದ್ಯುತ್ ಇಲಾಖೆ ನೌಕರರು ವಿದ್ಯುತ್ ಸಂಪರ್ಕ ಕಡಿತಗೊಳಿಸಿದಾಗ ಒಂದು ಗಂಟೆಯ ಪ್ರಯತ್ನದ ನಂತರ ಬೆಂಕಿ ಹತೋಟಿಗೆ ತರಲಾಯಿತು.
ಸಿಎಂ ಸಂತಾಪ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಪಘಾತದಲ್ಲಿನ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಚೌಹಾಣ್, "ಈ ದುಃಖದ ಸಮಯದಲ್ಲಿ, ದುಃಖಿತ ಕುಟುಂಬಗಳು ತಮ್ಮನ್ನು ತಾವು ಒಂಟಿಯಾಗಿ ಪರಿಗಣಿಸಬಾರದು. ಇಡೀ ಮಧ್ಯಪ್ರದೇಶ ಮತ್ತು ನಾನು ಅವರೊಂದಿಗೆ ಇದ್ದೇವೆ. ರಾಜ್ಯ ಸರ್ಕಾರವು ಮೃತರ ಸಂಬಂಧಿಕರಿಗೆ ತಲಾ ಐದು ಲಕ್ಷ ರೂ. ನೆರವು ನೀಡುತ್ತದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ., ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ'' ಎಂದಿದ್ದಾರೆ.
जबलपुर के न्यू लाइफ अस्पताल में आग से हुई दुर्घटना में अमूल्य जिंदगियों के असमय निधन के समाचार से हृदय दु:ख से भरा हुआ है।
— Shivraj Singh Chouhan (@ChouhanShivraj) August 1, 2022
ईश्वर से दिवंगत आत्माओं की शांति और परिजनों को यह गहन दु:ख सहन करने की शक्ति देने एवं घायलों के शीघ्र स्वस्थ होने की प्रार्थना करता हूं।
।। ॐ शांति ।।
ಕಮಲ್ ನಾಥ್ ಟ್ವೀಟ್
ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಬೆಂಕಿಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. "ಜಬಲ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಸಾವುನೋವುಗಳು ವರದಿಯಾಗಿವೆ. ಇದು ಅತ್ಯಂತ ನೋವಿನ ಘಟನೆಯಾಗಿದೆ. ನಾನು ಅಗಲಿದ ಆತ್ಮಗಳಿಗೆ ಪ್ರಾರ್ಥಿಸುತ್ತೇನೆ ಮತ್ತು ಬೆಂಕಿಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಬಯಸುತ್ತೇನೆ " ಎಂದು ಟ್ವೀಟ್ ಮಾಡಿದ್ದಾರೆ.
जबलपुर के एक निजी अस्पताल में आग लगने से कई लोगों की मृत्यु होने और बहुत से लोगों के हताहत होने का समाचार प्राप्त हुआ। यह अत्यंत पीड़ादायक घटना है।
— Kamal Nath (@OfficeOfKNath) August 1, 2022
मैं मृतकों की आत्मा की शांति की प्रार्थना करता हूं और अग्निकांड में झुलसे लोगों के शीघ्र स्वस्थ होने की कामना करता हूं।