BREAKING: ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಜ್ಯೋತಿರಾದಿತ್ಯ ಸಿಂಧಿಯಾ
ಭೋಪಾಲ್, ಮಾರ್ಚ್ 10 : ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದಿದ್ದಾರೆ. ಇದರಿಂದಾಗಿ ಮಧ್ಯಪ್ರದೇಶದ ರಾಜಕೀಯ ಹೈಡ್ರಾಮಕ್ಕೆ ಮಂಗಳವಾರ ಮತ್ತೊಂದು ತಿರುವು ಸಿಕ್ಕಿದೆ.
Recommended Video
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ.
ಜ್ಯೋತಿರಾದಿತ್ಯ ಸಿಂಧಿಯಾ ಜೊತೆಗೆ ಕಾಂಗ್ರೆಸ್ನ 14 ಶಾಸಕರು ರಾಜೀನಾಮೆ ನೀಡಿದ್ದು ಕಮಲನಾಥ್ ಸರ್ಕಾರ ಬಹುಮತವನ್ನು ಕಳೆದುಕೊಂಡಿದೆ. 16 ಕಾಂಗ್ರೆಸ್ ಶಾಸಕರು ಕರ್ನಾಟಕದ ಬೆಂಗಳೂರಿನಲ್ಲಿದ್ದಾರೆ.
ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ನರೇಂದ್ರ ಮೋದಿ ಭೇಟಿ ಬಳಿಕ ಅಮಿತ್ ಶಾ ಜೊತೆ ಒಂದೇ ಕಾರಿನಲ್ಲಿ ಅವರು ಬಿಜೆಪಿ ಕಚೇರಿಗೆ ತೆರಳಿದರು.

ಬಿಜೆಪಿಗೆ ಜ್ಯೋತಿರಾದಿತ್ಯ ಸಿಂಧಿಯಾ
ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಇಂದು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಅವರು ಬಿಜೆಪಿ ಸೇರಿದರೆ ಕಾಂಗ್ರೆಸ್ಗೆ ಮುಖಭಂಗ ಉಂಟಾಗಲಿದೆ.

ಬಹುಮತ ಕಳೆದುಕೊಂಡ ಸರ್ಕಾರ
ಜ್ಯೋತಿರಾದಿತ್ಯ ಸಿಂಧಿಯಾ ಜೊತೆ 14 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಮಧ್ಯಪ್ರದೇಶದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತವಾಗಿದೆ.

230 ಸದಸ್ಯ ಬಲದ ವಿಧಾನಸಭೆ
ಮಧ್ಯಪ್ರದೇಶ ವಿಧಾನಸಭೆ 230 ಸದಸ್ಯ ಬಲವನ್ನು ಹೊಂದಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್ಪಿ 2, ಎಸ್ಪಿ 2 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಹೆಚ್ಚು ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ ಪಕ್ಷೇತರ, ಬಿಎಸ್ಪಿ, ಎಸ್ಪಿ ಶಾಸಕರ ಬೆಂಬಲ ಪಡೆದು ಸರ್ಕಾರವನ್ನು ರಚನೆ ಮಾಡಿತ್ತು.

ಬೆಂಗಳೂರಲ್ಲಿ 18 ಶಾಸಕರು
ಮಧ್ಯಪ್ರದೇಶದ 18 ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿದ್ದಾರೆ. ವೈಟ್ ಫೀಲ್ಡ್ ಬಳಿಯ ಆದರ್ಶ ಹೋಟೆಲ್ನಲ್ಲಿ ಶಾಸಕರು ಇರುವ ಮಾಹಿತಿ ಇದೆ. ಇಲ್ಲಿರುವ ಎಲ್ಲಾ ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರು. ಅವರೆಲ್ಲರೂ ಸಹ ಬಿಜೆಪಿ ಸೇರಲಿದ್ದಾರೆ.
|
ಜ್ಯೋತಿರಾದಿತ್ಯ ಸಿಂಧಿಯಾ ಉಚ್ಛಾಟನೆ
ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾರನ್ನು ಕಾಂಗ್ರೆಸ್ ಪಕ್ಷದಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಉಚ್ಛಾಟನೆ ಮಾಡಲಾಗಿದೆ.












Click it and Unblock the Notifications