ಮಧ್ಯಪ್ರದೇಶದಲ್ಲಿ ಚೌಹಾಣ್ ಸರ್ಕಾರ ಸುರಕ್ಷಿತ: 17 ಸೀಟುಗಳಲ್ಲಿ ಮುನ್ನಡೆ
ಭೋಪಾಲ್, ನವೆಂಬರ್ 10: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ಉಳಿಸಿಕೊಳ್ಳುವ ಸೂಚನೆ ನೀಡಿದೆ. ಹೀಗಾಗಿ ಈಗಾಗಲೇ ಅಲ್ಲಿನ ಬಿಜೆಪಿ ಪಾಳೆಯದಲ್ಲಿ ಸಂತಸ ಮೂಡಿದ್ದು, ವಿಜಯೋತ್ಸವ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಪಕ್ಷದ ಭೋಪಾಲ್ ಕಚೇರಿಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಸಹೋದ್ಯೋಗಿಗಳಿಗೆ ಸಿಹಿ ಹಂಚಿ ಸಂಭ್ರಮಾಚರಿಸಿದ್ದಾರೆ.
ಮಧ್ಯಪ್ರದೇಶದಲ್ಲಿ 28 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ತಮ್ಮ ಸರ್ಕಾರ ಉಳಿಸಿಕೊಳ್ಳಲು ಒಂಬತ್ತು ಕ್ಷೇತ್ರಗಳಲ್ಲಿ ಗೆಲುವು ಕಂಡರೂ ಸಾಕು. ಮಧ್ಯಪ್ರದೇಶದಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಎಲ್ಲ 28 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಬೇಕಿದೆ. ಆದರೆ ಕಾಂಗ್ರೆಸ್ ಎಂಟು ಸೀಟುಗಳಲ್ಲಿ ಮಾತ್ರ ಮುನ್ನಡೆ ಪಡೆದಿದೆ. ಇನ್ನು ಎರಡು ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
28 ಕ್ಷೇತ್ರಗಳ ಪೈಕಿ ಬಿಜೆಪಿ 11ರಲ್ಲಿ ಗೆಲುವು ಸಾಧಿಸಲಿದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಹೇಳಿದ್ದವು. ಮಾಯಾವತಿ ಅವರ ಬಿಎಸ್ಪಿ ಸಹ ಒಂದು ಕ್ಷೇತ್ರದಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಇದರಿಂದ ಶಿವರಾಜ್ ಸಿಂಗ್ ಸರ್ಕಾರ ಸುರಕ್ಷಿತವಾಗಿರಲಿದೆ.

ಮಧ್ಯಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್, ಇತರೆ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸಿತ್ತು. ಆದರೆ ಕಾಂಗ್ರೆಸ್ನ 25 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದರು. ಇದರಿಂದ ಕಮಲ್ ನಾಥ್ ಸರ್ಕಾರ ಪತನಗೊಂಡಿತ್ತು. ಶಾಸಕರ ರಾಜೀನಾಮೆ ನೀಡಿದ 25 ಕ್ಷೇತ್ರಗಳಲ್ಲಿ ಹಾಗೂ ಶಾಸಕರ ನಿಧನದಿಂದ ತೆರವಾದ ಇನ್ನು ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದೆ.












Click it and Unblock the Notifications