ಆರೋಗ್ಯ ಸಚಿವರಿಲ್ಲದ ಮಧ್ಯಪ್ರದೇಶದಲ್ಲಿ ಇಂದು ಸಂಪುಟ ವಿಸ್ತರಣೆ
ಭೋಪಾಲ್, ಏಪ್ರಿಲ್ 21 : ಕೊರೊನಾ ಲಾಕ್ ಡೌನ್ ನಡುವೆಯೇ ಮಧ್ಯಪ್ರದೇಶದಲ್ಲಿ ಇಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು ಒಂದು ತಿಂಗಳು ಕಳೆದಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಂಪುಟ ವಿಸ್ತರಣೆ ಮಾಡಿರಲಿಲ್ಲ.
ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಆರೋಗ್ಯ ಸಚಿವರೇ ಇಲ್ಲದೆ ರಾಜ್ಯ ಕಾರ್ಯ ನಿರ್ವಹಣೆ ಮಾಡುತ್ತಿದೆ. ಮಂಗಳವಾರ ಸಂಪುಟ ವಿಸ್ತರಣೆ ನಡೆಯಲಿದ್ದು, ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ರಾಜೀನಾಮೆ
ಮಾರ್ಚ್ 23ರಂದು ಶಿವರಾಜ್ ಸಿಂಗ್ ಚೌವ್ಹಾಣ್ 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದರು. ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡು ರಾಜ್ಯದಲ್ಲಿ ಹೈಡ್ರಾಮ ನಡೆದಿತ್ತು.
ಭೋಪಾಲ್: ಕೊರೊನಾಕ್ಕೆ ಆರೋಗ್ಯ ಇಲಾಖೆಯೇ ಹಾಟ್ ಸ್ಪಾಟ್!
2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿತ್ತು. ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ವಿವಿಧ ಪಕ್ಷಗಳ ಬೆಂಬಲ ಪಡೆದು ಸರ್ಕಾರ ರಚನೆ ಮಾಡಲಾಗಿತ್ತು. ಕಮಲನಾಥ್ ಮುಖ್ಯಮಂತ್ರಿಯಾಗಿದ್ದರು.
ಮಧ್ಯಪ್ರದೇಶ; ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಕ್ವಾರಂಟೈನ್
ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ಕಾಂಗ್ರೆಸ್ ತೊರೆದಿದ್ದರು. ಇದರಿಂದಾಗಿ ಅವರನ್ನು ಬೆಂಬಲಿಸಿ 20 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದರು. ಇದರಿಂದಾಗಿ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿಯಿತು. ಬಳಿಕ ಕಮಲನಾಥ್ ಬಹುಮತ ಸಾಬೀತು ಪಡಿಸುವ ಮೊದಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಇದಕ್ಕೂ ಮೊದಲು 13 ವರ್ಷಗಳ ಕಾಲ ಶಿವರಾಜ್ ಸಿಂಗ್ ಚೌವ್ಹಾಣ್ ರಾಜ್ಯದಲ್ಲಿ ನಿರಂತರವಾಗಿ ಆಡಳಿತ ನಡೆಸಿದ್ದರು. ಈಗ 4ನೇ ಬಾರಿಗೆ ಅವರು ಮುಖ್ಯಮಂತ್ರಿಯಾಗಿದ್ದು, ಇಂದು ಸಂಪುಟ ವಿಸ್ತರಣೆ ಮಾಡುತ್ತಿದ್ದಾರೆ.
ಮಧ್ಯಪ್ರದೇಶದಲ್ಲಿ ಇದುವರೆಗೂ 1485 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ. 76 ಜನರು ಮೃತಪಟ್ಟಿದ್ದಾರೆ. ಆರೋಗ್ಯ ಸಚಿವರೇ ಇಲ್ಲದೆ ರಾಜ್ಯದಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ರಾಜ್ಯದ ಪರಿಸ್ಥಿತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.