ಸುಪ್ರೀಂ ಅಂಗಳ ತಲುಪಿದ ಮಧ್ಯಪ್ರದೇಶ ರಾಜಕೀಯ ಹೈಡ್ರಾಮ
ಭೋಪಾಲ್, ಮಾರ್ಚ್ 17 : ಮಧ್ಯಪ್ರದೇಶದ ರಾಜಕೀಯ ಹೈಡ್ರಾಮ ಸುಪ್ರೀಂಕೋರ್ಟ್ ಅಂಗಳಕ್ಕೆ ತಲುಪಿದೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರು, ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಪ್ರತ್ಯೇಕ ಅರ್ಜಿಗಳನ್ನು ಹಾಕಿವೆ.
ಮುಖ್ಯಮಂತ್ರಿ ಕಮಲನಾಥ್ಗೆ ಬಹುಮತ ಸಾಬೀತು ಮಾಡಲು ಸೂಚನೆ ನೀಡಬೇಕು ಎಂದು ಬಿಜೆಪಿ ಅರ್ಜಿಯನ್ನು ಸಲ್ಲಿಸಿದೆ. ಮಂಗಳವಾರ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಬುಧವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿತು.
ಇಂದಿನ ವಿಚಾರಣೆ ಸಂದರ್ಭದಲ್ಲಿ ಕಮಲನಾಥ್ ಸರ್ಕಾರದ ಪರವಾಗಿ ವಕೀಲರು ಹಾಜರಿರಲಿಲ್ಲ. ಮತ್ತೊಂದು ಕಡೆ ರಾಜೀನಾಮೆ ನೀಡಿರುವ 16 ಕಾಂಗ್ರೆಸ್ ಶಾಸಕರು ತಮ್ಮ ರಾಜೀನಾಮೆ ಅಂಗೀಕರಿಸಲು ನಿರ್ದೇಶನ ನೀಡುವಂತೆ ಅರ್ಜಿಯೊಂದನ್ನು ಹಾಕಿದ್ದಾರೆ.
ಮಧ್ಯಪ್ರದೇಶ ಕಾಂಗ್ರೆಸ್ ಸುಪ್ರೀಂಕೋರ್ಟ್ಗೆ ಅರ್ಜಿಯೊಂದನ್ನು ಸಲ್ಲಿಸಿದೆ. ಬಿಜೆಪಿ ನಮ್ಮ ಶಾಸಕರನ್ನು ಅಪಹರಣ ಮಾಡಿದೆ ಎಂದು ಅರ್ಜಿಯಲ್ಲಿ ದೂರಿದೆ. 22 ಕಾಂಗ್ರೆಸ್ ಶಾಸಕರ ರಾಜೀನಾಮೆ ಬಳಿಕ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ.

ಬಿಜೆಪಿಯ ವಾದವೇನು?
ಮುಖ್ಯಮಂತ್ರಿ ಕಮಲನಾಥ್ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಲು ಸೂಚನೆ ನೀಡಬೇಕು ಎಂಬುದು ಬಿಜೆಪಿಯ ವಾದ. 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು, 6 ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ. ಆದ್ದರಿಂದ, ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಅರ್ಜಿಯಲ್ಲಿ ಬಿಜೆಪಿ ಹೇಳಿದೆ.

ರಾಜ್ಯಪಾಲರಿಗೆ ಕಮಲನಾಥ್ ಪತ್ರ
ಮುಖ್ಯಮಂತ್ರಿ ಕಮಲನಾಥ್ ರಾಜ್ಯಪಾಲ ಲಾಲ್ಜಿ ಥಂಡನ್ಗೆ ಮಂಗಳವಾರ ಪತ್ರ ಬರೆದಿದ್ದಾರೆ. ಮಂಗಳವಾರ ಬಹುಮತ ಸಾಬೀತು ಮಾಡಲು ಸಾಧ್ಯವಿಲ್ಲ. ಬಹುಮತ ಸಾಬೀತು ಪಡಿಸದಿದ್ದರೆ ಅಲ್ಪ ಮತಕ್ಕೆ ಸರ್ಕಾರ ಕುಸಿದಿದೆ ಎಂದು ತೀರ್ಮಾನಿಸುವುದು ಸರಿಯಲ್ಲ. ಸಂವಿಧಾನದ ವಿರುದ್ಧವಾಗಿ ವಿಶ್ವಾಸಮತ ನಡೆಸಲು ಸಾಧ್ಯವಿಲ್ಲ. ರಾಜಕೀಯ ಬೆಳವಣಿಗೆಗಳಿಂದ ನೋವಾಗಿದೆ ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ
ಮಧ್ಯಪ್ರದೇಶದ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ತೊರೆದಿದ್ದರು. ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಸಿ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು. ಬಳಿಕ ಕಮಲನಾಥ್ ನೇತೃತ್ವದ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ್ದಾರೆ.

ಮಧ್ಯಪ್ರದೇಶ ರಾಜಕೀಯ ಹೈಡ್ರಾಮ
ಮಧ್ಯಪ್ರದೇಶ ವಿಧಾನಸಭೆಯ ಒಟ್ಟು ಸದಸ್ಯ ಬಲ 230. ಪ್ರಸ್ತುತ ಸದಸ್ಯ ಬಲ 222ಕ್ಕೆ ಕುಸಿದಿದೆ. ಬಹುಮತ ಸಾಬೀತು ಪಡಿಸಲು 112 ಸದಸ್ಯ ಬಲ ಬೇಕು. ಕಾಂಗ್ರೆಸ್ ಸದನದಲ್ಲಿ 108 ಶಾಸಕರ ಬಲ ಹೊಂದಿದೆ. 7 ಇತರ ಶಾಸಕರು ಕಾಂಗ್ರೆಸ್ ಬೆಂಬಲಕ್ಕಿದ್ದಾರೆ. 22 ಶಾಸಕರ ರಾಜೀನಾಮೆ ಅಂಗೀಕಾರವಾದರೆ ಕಾಂಗ್ರೆಸ್ ಬಲ ಕುಸಿಯಲಿದೆ.












Click it and Unblock the Notifications