ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಹಾಘಟಬಂಧನದ ವಿರಾಟರೂಪ ದರ್ಶನ?
Recommended Video

ಭೋಪಾಲ್, ಡಿಸೆಂಬರ್ 17: ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧಿ ಪಕ್ಷದ ನಾಯಕರೆಲ್ಲರೂ ಭಾಗವಹಿಸುವ ಸಾಧ್ಯತೆ ಇದೆ.
ರಾಜಸ್ಥಾನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಅವರೂ ಇಂದೇ ಪ್ರಮಾಣವಚನ ಸ್ವೀಕರಿಸಲಿದ್ದು, ಅದಕ್ಕೂ ಮುಖಂಡರು ಭಾಗವಹಿಸಲಿದ್ದಾರೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಡಿಎಂಕೆ ಮುಖಂಡ ಎಂ ಕೆ ಸ್ಟಾಲಿನ್, ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್, ಎಸ್ಪಿ ಮುಖಂಡ ಅಖಿಲೇಶ್ ಯಾದವ್, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾಘಟಬಂಧನದ ವಿರಾಟ ರೂಪ ತೋರಿಸಲಿದ್ದಾರೆ. ಕೆಲವು ಮೂಲಗಳ ಪ್ರಕಾರ ಅಖಿಲೇಶ್ ಮತ್ತು ಮಾಯಾವತಿ ಅವರು ಪ್ರಮಾಣ ವಚನ ಸಮಾರಂಭಕ್ಕೆ ಹಾಜರಿರುವುದಿಲ್ಲ ಎನ್ನಲಾಗುತ್ತಿದೆ. ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಮೇ ತಿಂಗಳಿನಲ್ಲಿ ಕರ್ನಾಟಕ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲೂ ಈ ಎಲ್ಲ ನಾಯಕರು ಭಾಗಿಯಾಗಿದ್ದರು.
ಮಧ್ಯಪ್ರದೇಶದಲ್ಲಿ ನವೆಂಬರ್ 28ರಂದು ನಡೆದ ಚುನಾವಣೆಯ ಫಲಿತಾಂಶ ಡಿಸೆಂಬರ್ 11ರಂದು ಹೊರಬಿದ್ದಿತ್ತು. ಒಟ್ಟು 230 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಪಕ್ಷೇತರರ ಬೆಂಬಲದೊಂದಿಗೆ ಬಹುಮತ ಗಳಿಸಿ ಸರ್ಕಾರ ರಚಿಸುತ್ತಿದೆ.
ರಾಜಸ್ಥಾನದಲ್ಲಿ ಡಿಸೆಂಬರ್ 07 ರಂದು ನಡೆದಿದ್ದ ವಿಧಾನಸಭಾ ಚುನಾವಣೆಲ್ಲಿ ಕಾಂಗ್ರೆಸ್ 199(200) ರಲ್ಲಿ 99 ಕ್ಷೇತ್ರಗಳನ್ನು ಗೆದ್ದು ಪಕ್ಷೇತರರೊಂದಿಗೆ ಸೇರಿ ಸರ್ಕಾರ ರಚಿಸುತ್ತಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿ ಕಮಲ್ ನಾಥ್ ಮತ್ತು ಸಂಸದ ಜ್ಯೋತಿರಾಧಿತ್ಯ ಸಿಂಧಿಯಾ ಅವರ ನಡುವೆ ಸಾಕಷ್ಟು ಪೈಪೋಟಿ ಏರ್ಪಟ್ಟಿತ್ತು. ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ಬಿರುಸಿನ ಪೈಪೋಟಿ ಇತ್ತು.
ಆದರೆ ಅನುಭವವನ್ನು ಮಾನದಂಡವನ್ನಾಗಿ ಪರಿಗಣಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಮಲ್ ನಾಥ್, ಅಶೋಕ್ ಗೆಹ್ಲೋಟ್ ಅವರನ್ನೇ ಮುಖ್ಯಮಂತ್ರಿ ಎಂದು ಅಧಿಕೃತವಾಗಿ ಗುರುವಾರ ರಾತ್ರಿ ಘೋಷಿಸಿದರು.












Click it and Unblock the Notifications