ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ: ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಬೆಲ್ಲದ್ ಆರೋಪ
ಹುಬ್ಬಳ್ಳಿ, ಏಪ್ರಿಲ್ 18: ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದೇ ವಿಚಾರವಾಗಿ ರಾಜಕೀಯ ಪಕ್ಷಗಳು ಕೆಸರೆರಚಾಟ ಮುಂದುವರೆಸಿವೆ. ಇದೀಗ ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ ಸೃಷ್ಟಿ ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೃತಕ ನೀರಿನ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಸೃಷ್ಟಿಸಿರುವ ಟ್ಯಾಂಕರ್ ಲಾಬಿ ಎಂದರು.

ನೀರಿನ ಕಳ್ಳ ಸಾಗಾಣಿಕೆ?
ಬೆಂಗಳೂರಿನಲ್ಲಿ ಜನಸಾಮಾನ್ಯರಿಗೆ ನೀರು ಪೂರೈಸಲು ಸರ್ಕಾರಕ್ಕೆ ನೀರಿಲ್ಲ. ಆದರೆ ಟ್ಯಾಂಕರ್ ಮಾಲೀಕರಿಗೆ ನೀರು ಎಲ್ಲಿಂದ ಸಿಗುತ್ತಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರವೇ ಸೃಷ್ಟಿಸಿರುವ ನೀರಿನ ಕೃತಕ ಅಭಾವ ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿ ಒಂದು ಟ್ಯಾಂಕರ್ ನೀರು ಐದು ಸಾವಿರ ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಈ ಟ್ಯಾಂಕರ್ ಲಾಬಿ ಹಿಂದೆ ಸರ್ಕಾರ ನೇರವಾಗಿ ಭಾಗಿಯಾಗಿದೆ. ಅಲ್ಲಿನ ಜಲ ಮಂಡಳಿ ಅಧಿಕಾರಿಗಳ ಮೂಲಕ ನೀರಿನ ಕಳ್ಳ ಸಾಗಾಣಿಕೆ ನಡೆಸುತ್ತಿದ್ದಾರೆ ಎಂದು ಆಪಾದಿಸಿದರು.

ಶ್ರೀಗಳ ಸ್ಪರ್ಧೆಯಿಂದ ಬಿಜೆಪಿಗೆ ನಷ್ಟವಿಲ್ಲ
ಧಾರವಾಡದಲ್ಲಿ ಶಿರಹಟ್ಟಿಯ ಮಠ ಶ್ರೀ ಫಕೀರ ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆಯಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಯಸ್ಸು ಹಾಗೂ ಆರೋಗ್ಯದ ಹಿನ್ನೆಲೆಯಲ್ಲಿ ಅವರೇ ಖುಷಿಯಿಂದ ಅಧಿಕಾರ ಬಿಟ್ಟುಕೊಟ್ಟರು.
ರಾಜಕೀಯ ಕುತಂತ್ರಕ್ಕೆ ಬಲಿಯಾದರೂ ಎನ್ನುವ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಯಲ್ಲಿ ಹುರುಳಿಲ್ಲ. ಸ್ವಾಮೀಜಿ ಅವರ ಸ್ಪರ್ಧೆಯಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಧಾರವಾಡದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಅಭಿವೃದ್ಧಿ ಕಾರ್ಯಗಳು, ಎಲ್ಲಾ ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ನಾಯಕತ್ವ ಅವರ ಗೆಲುವಿಗೆ ಶ್ರೀರಕ್ಷೆ ಆಗಲಿದೆ. ಸ್ವಾಮೀಜಿಗಳು ಇದೀಗ ಚುನಾವಣೆಗೆ ಸ್ಪರ್ಧಿಸಿರುವುದರಿಂದ ಅವರ ಹೇಳಿಕೆಗಳು ರಾಜಕೀಯದಿಂದ ಕೂಡಿವೆ. ಇಂತಹ ಹೇಳಿಕೆಗಳ ಬಗ್ಗೆ ಅಷ್ಟೊಂದು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.












Click it and Unblock the Notifications