ಬಸವಕಲ್ಯಾಣ ಉಪ ಚುನಾವಣೆ; ಬಿ. ವೈ. ವಿಜಯೇಂದ್ರ ಸಭೆ!
ಬೀದರ್, ನವೆಂಬರ್ 26 : ಬೀದರ್ ಜಿಲ್ಲೆಯ ಬಸವಕಲ್ಯಾಣ ಉಪ ಚುನಾವಣೆ ಹಿನ್ನಲೆಯಲ್ಲಿ ಬಿ. ವೈ. ವಿಜಯೇಂದ್ರ ಮಹತ್ವದ ಸಭೆ ನಡೆಸಿದರು. ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಬೇಕಿದ್ದು, ಬಿಜೆಪಿ ತಯಾರಿ ಆರಂಭಿಸಿದೆ.
ಗುರುವಾರ ಕರ್ನಾಟಕ ಬಿಜೆಪಿ ಉಪಾಧ್ಯಕ್ಷ, ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಬಸವಕಲ್ಯಾಣದ ಪಕ್ಷದ ಹಲವು ಮುಖಂಡರು, ಟಿಕೆಟ್ ಆಕಾಂಕ್ಷಿಗಳು, ಕಾರ್ಯಕರ್ತರ ಜೊತೆ ಸಭೆ ನಡೆಸಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ, ಮುಂಬರುವ ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ನಾವು ಕಾರ್ಯನಿರ್ವಹಿಸಲಿದ್ದೇವೆ ಎಂದು ಸಭೆಯಲ್ಲಿದ್ದವರು ಭರವಸೆ ನೀಡಿದರು.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. 2018ರ ಚುನಾವಣೆಯಲ್ಲಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ನ ಬಿ.ನಾರಾಯಣರಾವ್ (67) ಸೆಪ್ಟೆಂಬರ್ನಲ್ಲಿ ನಿಧನ ಹೊಂದಿದ್ದಾರೆ. ಆದ್ದರಿಂದ, ಉಪ ಚುನಾವಣೆ ಎದುರಾಗಿದೆ.
ಕಳೆದ ಚುನಾವಣೆಯಲ್ಲಿ ಬಸವಕಲ್ಯಾಣದಲ್ಲಿ ಬಿ. ನಾರಾಯಣ ರಾವ್ 61,425 ಮತ ಪಡೆದು ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ 44,153 ಮತ ಪಡೆದಿದ್ದರು. ಪಿ. ಜಿ. ಆರ್. ಸಿಂಧ್ಯಾ ಜೆಡಿಎಸ್ನಿಂದ ಕಣಕ್ಕಿಳಿದು 31,414 ಮತ ಪಡೆದಿದ್ದರು.
ಡಿ. ಕೆ. ಶಿವಕುಮಾರ್ ಭೇಟಿ; ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಂಗಳವಾರ ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದರು. ಬಿ. ನಾರಾಯಣರಾವ್ ಸಮಾಧಿಗೆ ನಮನ ಸಲ್ಲಿಸಿದ್ದರು. ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿದ್ದರು.
ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನು ಡಿ. ಕೆ. ಶಿವಕುಮಾರ್ಗೆ ಕೋರಿದ್ದರು. ಕಾಂಗ್ರೆಸ್ ಪಕ್ಷ ಸಹ ಉಪ ಚುನಾವಣೆ ಸಿದ್ಧತೆಯನ್ನು ಆರಂಭಿಸಿದೆ. ಬಿ. ನಾರಾಯಣರಾವ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತರಲ್ಲಿ ಒಬ್ಬರಾಗಿದ್ದರು.












Click it and Unblock the Notifications