ಬಸವಕಲ್ಯಾಣ ಉಪ ಚುಣಾವಣೆ; ವಿಜಯೇಂದ್ರ ಸ್ಪರ್ಧೆಗೆ ಒತ್ತಾಯ
ಬೀದರ್, ನವೆಂಬರ್ 09 : ಬಸವಕಲ್ಯಾಣ ಉಪ ಚುನಾವಣೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕ್ಷೇತ್ರದ ಶಾಸಕರಾಗಿದ್ದ ಬಿ. ನಾರಾಯಣ ರಾವ್ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಒಂದು ಬಣ ಬಿ. ವೈ. ವಿಜಯೇಂದ್ರ ಅವರು ಉಪ ಚುನಾವಣೆಗೆ ಅಭ್ಯರ್ಥಿಯಾಗಬೇಕು ಎಂದು ಒತ್ತಾಯಿಸುತ್ತಿದೆ. ಆದರೆ, ವಿಜಯೇಂದ್ರ ಅವರು ಸ್ಪರ್ಧೆಗೆ ಆಸಕ್ತಿ ತೋರಿಸಿಲ್ಲ.
ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾರಾಗಬೇಕು? ಎಂದು ಸ್ಥಳೀಯವಾಗಿ ಚರ್ಚೆಗಳು ಆರಂಭವಾಗಿವೆ. ಸಂಭಾವ್ಯ ಅಭ್ಯರ್ಥಿಗಳ ಪರವಾಗಿ ಭಿನ್ನ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಒಂದು ಬಣ ಮಾತ್ರ ವಿಜಯೇಂದ್ರ ಕಣಕ್ಕಿಳಿಯಬೇಕು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತಿವೆ.
2018ರ ಚುನಾವಣೆಯಲ್ಲಿ ಬಸವಕಲ್ಯಾಣ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಬಿಜೆಪಿ ಅಭ್ಯರ್ಥಿಯಾಗಿದ್ದರು. 44,153 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ನ ಬಿ. ನಾರಾಯಣರಾವ್ 61,425 ಮತಗಳನ್ನು ಪಡೆದು ಜಯಗಳಿಸಿದ್ದರು.

ಸಂಘಟನೆಗೆ ಆದ್ಯತೆ
ಬಸವಕಲ್ಯಾಣದಿಂದ ಸ್ಪರ್ಧೆ ಕುರಿತ ಸುದ್ದಿಗಳಿಗೆ ಬಿ. ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, "ಬಸವಕಲ್ಯಾಣದಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿಲ್ಲ. ಪಕ್ಷ ನನ್ನನ್ನು ಉಪಾಧ್ಯಕ್ಷನನ್ನಾಗಿ ನೇಮಿಸಿದೆ. ಪಕ್ಷದ ಸಂಘಟನೆಗೆ ಆದ್ಯತೆ ನೀಡಿದ್ದೇನೆ" ಎಂದು ಹೇಳಿದ್ದಾರೆ.

ಸ್ಪರ್ಧಿಸುವ ಉದ್ದೇಶ ಹೊಂದಿಲ್ಲ
"ಸ್ವಂತ ಬಲದ ಮೇಲೆ ಪಕ್ಷದಲ್ಲಿ ಬೆಳೆಯಲು ಪ್ರಯತ್ನ ನಡೆಸುತ್ತೇನೆ. ತಂದೆಯ ಹೆಸರು ಮುಂದಿಟ್ಟುಕೊಂಡು ರಾಜಕೀಯದಲ್ಲಿ ಬೆಳೆಯುವ ಉದ್ದೇಶವಿಲ್ಲ. ಅವರ ಹೋರಾಟದ ಜೀವನ ನಮಗೆ ಸ್ಪೂರ್ತಿ ಮತ್ತು ಮಾರ್ಗದರ್ಶನ. ಈಗ ನಾನು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವ ಉದ್ದೇಶ ಹೊಂದಿಲ್ಲ" ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಟಿಕೆಟ್ ನಿರಾಕರಿಸಿದ್ದರು
2018ರ ಚುನಾವಣೆಯಲ್ಲಿ ಬಿ. ವೈ. ವಿಜಯೇಂದ್ರ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಕೊನೆ ಕ್ಷಣದಲ್ಲಿ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿತ್ತು. ಆದ್ದರಿಂದ, ಯಡಿಯೂರಪ್ಪ ಅವರಿಗೂ ಮುಜುಗರವಾಗಿತ್ತು.
Recommended Video

ಮೈಸೂರು ಭಾಗದ ಬಗ್ಗೆ ಆಸಕ್ತಿ
ಬಿ. ವೈ. ವಿಜಯೇಂದ್ರ ಮೈಸೂರು ಮತ್ತು ಚಾಮರಾಜನಗರ ಭಾಗದ ಕಡೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಆ ಭಾಗದಲ್ಲಿನ ಯುವಕರು ವಿಜಯೇಂದ್ರ ಬೆಂಬಲಕ್ಕಿದ್ದಾರೆ. ಆದ್ದರಿಂದ, ಚುನಾವಣೆಗೆ ಸ್ಪರ್ಧಿಸಿದರೆ ಆ ಭಾಗದಿಂದಲೇ ಕಣಕ್ಕಿಳಿಯುವ ನಿರೀಕ್ಷೆ ಇದೆ.












Click it and Unblock the Notifications