ಕಾರಂಜಾ ನೀರಾವರಿ: ಮುಳುಗಡೆ ಸಂತ್ರಸ್ಥರಿಗೆ ಶೀಘ್ರ ಪರಿಹಾರ
ಬೆಂಗಳೂರು, ಅಕ್ಟೋಬರ್ 15: ಬೀದರ್ ಜಿಲ್ಲೆಯ ಕಾರಂಜಾ ನೀರಾವರಿ ಯೋಜನೆಯಲ್ಲಿ ಮುಳುಗಡೆ ಸಂತ್ರಸ್ಥರಿಗೆ ಸಮರ್ಪಕವಾದ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರಂಜಾ ನೀರಾವರಿ ಯೋಜನೆಯ ಸಂತ್ರಸ್ಥರ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿದ ನಂತರ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ.
ಚುನಾವಣೆ ಮುಗಿದ ಬಳಿಕ, ನೀರಾವರಿ ಇಲಾಖೆ ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಮ್ಮ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗುವುದು ಎಂದರು.

ಜನಸಾಮಾನ್ಯರ ನೋವನ್ನು ಸರ್ಕಾರ ಅರ್ಥಮಾಡಿಕೊಂಡಿದೆ. ಇನ್ನು 45 ವರ್ಷಗಳಿಂದ ಸಂತ್ರಸ್ಥರಾಗಿರುವ ನಿಮ್ಮ ನೋವು ನಮಗೆ ಅರ್ಥವಾಗಿದೆ. 2015 ರಲ್ಲಿ ಇದ್ದ ಸರ್ಕಾರ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಮರು ಪರಿಶೀಲನೆ ಮಾಡಲಾಗುವುದು.
ಉಪ ಚುನಾವಣೆ ನಂತರ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ನೀಡಲು ಸಾದ್ಯವೇ ಎಂಬ ಚಿಂತನೆಯನ್ನು ಮಾಡಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಅಲ್ಲಿ ನೆರೆದಿದ್ದ ಕಾರಂಜಾ ಮುಳಗಡೆ ಸಂತ್ರಸ್ಥರಿಗೆ ಭರವಸೆ ನೀಡಿದರು.
ನಂತರ 60 ದಿನಗಳಿಂದ ಧರಣಿ ನಡೆಸುತ್ತಿರುವ ಹೋರಾಟಗಾರರಿಗೆ ಧರಣಿಯನ್ನು ಕೈಬಿಡುವಂತೆ ಮನವಿ ಮಾಡಿದರು. ಉಪ ಚುನಾವಣೆ ನಂತರ ಸಭೆ ಕರೆಯಲಾಗುವುದು. ಆಗ ಕೆಲ ಮುಖಂಡರನ್ನು ಆಹ್ವಾನಿಸಲಾಗುವುದು.
ಸಂಬಂಧಪಟ್ಟ ಅಧಿಕಾರಿಗಳನ್ನು, ಜನಪ್ರತಿನಿಧಿಗಳನ್ನು ಒಳಗೊಂಡ ಸಭೆ ನಡೆಸಿ ಸಾಧಕ-ಭಾದಕಗಳ ಬಗ್ಗೆ ಚರ್ಚಿಸಿ, ಶಾಶ್ವತ ಪರಿಹಾರ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.












Click it and Unblock the Notifications