ಗುತ್ತಿಗೆದಾರ ಸಚಿನ್ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ಘೋಷಣೆ
ಬೀದರ್, ಡಿಸೆಂಬರ್ 29: ಬೀದರ್ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಪ್ರತಿಪಕ್ಷವಾದ ಬಿಜೆಪಿ ನಡುವೆ ಆರೋಪ, ಪ್ರತ್ಯಾರೋಪಗಳು ಜೋರಾಗಿದೆ. ಟೆಂಡರ್ ಕೊಡುವುದಾಗಿ ಹೇಳಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾರೆ. ಜೀವ ಬೆದರಿಕೆ ಹಾಕಿದ್ದಾರೆ ಎಂದು ಡೆತ್ನೋಟ್ ಬರೆದಿಟ್ಟು ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
ಭಾನುವಾರ ಅರಣ್ಯ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾಲ್ಕಿ ತಾಲೂಕಿನ ಕಟ್ಟಿ ತೂಗಾವ್ ಗ್ರಾಮದಲ್ಲಿರುವ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಮನೆಗೆ ಭೇಟಿ ನೀಡಿದರು. ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಸರ್ಕಾರದಿಂದ ಕುಟುಂಬಕ್ಕೆ 10 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಸಚಿವರ ಪೋಸ್ಟ್: ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಚಿವ ಈಶ್ವರ ಖಂಡ್ರೆ ಪೋಸ್ಟ್ ಹಾಕಿದ್ದಾರೆ. 'ಭಾಲ್ಕಿ ತಾಲೂಕಿನ ಕಟ್ಟಿ ತೂಗಾವ್ ಗ್ರಾಮದ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆಯಿಂದ ಸಂಭವಿಸಿದ ತೀವ್ರ ದುಃಖಕರ ಘಟನೆಗೆ ಸಂಬಂಧಿಸಿ, ಇಂದು ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ' ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.
'ಈ ದುಃಖಕರ ಘಟನೆಯ ಹಿಂದೆ ಇರುವ ಸತ್ಯವನ್ನು ಬಹಿರಂಗಪಡಿಸಲು ಮತ್ತು ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಈ ಪ್ರಕರಣವನ್ನು ಸಮಗ್ರವಾಗಿ ಪರಿಶೀಲಿಸಲು ಸಿಐಡಿ ಅಥವಾ ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಬೇಕೆಂದು ನಾನು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಸಚಿನ್ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಲು ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ' ಎಂದು ಭರವಸೆ ನೀಡಿದ್ದಾರೆ.
'ಸಚಿನ್ ಅವರ ಕುಟುಂಬದ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ರೂ. 10 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಪರಿಹಾರದಿಂದ ಕುಟುಂಬಕ್ಕೆ ಆರ್ಥಿಕ ಸಹಾಯ ಕಲ್ಪಿಸಲು ಪ್ರಯತ್ನಿಸಲಾಗುತ್ತದೆ' ಎಂದು ತಿಳಿಸಿದ್ದಾರೆ.
ಸಚಿನ್ ಪಾಂಚಾಳ್ ನಿವಾಸಕ್ಕೆ ಸಚಿವ ಈಶ್ವರ ಖಂಡ್ರೆ ಅವರ ಜೊತೆ ಪೊಲೀಸರು ಆಗಮಿಸಿದ್ದರು. ಈ ವೇಳೆ ಸಚಿನ್ ಸಹೋದರಿಯರು ಪೊಲೀಸರ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು. ಸಚಿನ್ ಕಾಣೆಯಾದಾಗ ಅವರನ್ನು ಹುಡುಕಿಕೊಡಿ ಎಂದು ಠಾಣೆಗೆ ಹೋದಾಗ ಪೊಲೀಸರು ಸ್ಪಂದಿಸಿಲ್ಲ. ಈಗ ಸಚಿವರ ಜೊತೆ ಮನೆಗೆ ಬಂದಿದ್ದಾರೆ ಎಂದು ಆಕ್ರೋಶಗೊಂಡರು.
ಸಚಿನ್ ಹುಡುಕಿಕೊಂಡುವಂತೆ ದೂರು ನೀಡಿದಾಗ ಅದನ್ನು ಸ್ವೀಕರಿಸಿದ್ದರೆ ಆತ್ಮಹತ್ಯೆ ತಡೆಯಬಹುದಾಗಿತ್ತು. ಡೆತ್ನೋಟ್ನಲ್ಲಿ ಹೆಸರು ಇರುವವರನ್ನು ಇನ್ನೂ ಬಂಧಿಸಿದ ಪೊಲೀಸರು ಈಗ ಏಕೆ ಇಲ್ಲಿಗೆ ಬಂದಿದ್ದಾರೆ? ಎಂದು ಕುಟುಂಬದವರು ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಸಚಿವರ ಸೂಚನೆಯಂತೆ ಎಸ್ಪಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಜೆ. ಎಸ್.ನ್ಯಾಮೇಗೌಡ ಸೇರಿದಂತೆ ಇತರ ಪೊಲೀಸರು ಮನೆಯಿಂದ ಹೊರ ಹೋದರು. ಬಳಿಕ ಸಚಿವರು ಕುಟುಂಬ ಸದಸ್ಯರ ಜೊತೆ ಮಾತುಕತೆ ನಡೆಸಿ, ಸಾಂತ್ವನ ಹೇಳಿದರು.
ಸಚಿನ್ ಕುಟುಂಬದವರ ಭೇಟಿ ಬಳಿಕ ಮಾತನಾಡಿದ ಸಚಿವರು, "ಕುಟುಂಬದವರು ಸ್ವತಂತ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುತ್ತೇನೆ. ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ" ಎಂದರು.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ-ಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ್ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡುತ್ತಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಂಜೆ 6 ಗಂಟೆಗೆ ಸಚಿನ್ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.












Click it and Unblock the Notifications