ಬಸವಣ್ಣನ ಆದರ್ಶಗಳ ಮೇಲೆ ಬಿಜೆಪಿ, ಆರ್ಎಸ್ಎಸ್ ದಾಳಿ: ಭಾಲ್ಕಿಯಲ್ಲಿ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
ಭಾಲ್ಕಿ, ಏಪ್ರಿಲ್ 17: ಆಡಳಿತಾರೂಢ ಬಿಜೆಪಿ ( BJP ) ಮತ್ತು ಆರ್ಎಸ್ಎಸ್ ( RSS ) ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿವೆ. ದೇಶದಲ್ಲಿ ದ್ವೇಷ ಹಾಗೂ ಹಿಂಸಾಚಾರವನ್ನು ಹರಡುತ್ತಿವೆ ಎಂದು ಕಾಂಗ್ರೆಸ್ ( Congress ) ನಾಯಕ ರಾಹುಲ್ ಗಾಂಧಿ ( Rahul Gandhi ) ಸೋಮವಾರ ಆರೋಪಿಸಿದರು.
ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವಂತೆ ಜನರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ರಾಹುಲ್ ಮನವಿ ಮಾಡಿದರು.

ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ಬೀದರ್ ಬಸವಣ್ಣನವರ ಕರ್ಮಭೂಮಿ. ಯಾರಾದರೂ ಮೊದಲು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿ ಪ್ರಜಾಪ್ರಭುತ್ವದ ಹಾದಿ ತೋರಿಸಿದ್ದಾರೆಂದರೆ ಅದು ಬಸವಣ್ಣ. ಇಂದು ದೇಶಾದ್ಯಂತ ಆರೆಸ್ಸೆಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿರುವುದು ಬೇಸರದ ಸಂಗತಿ' ಎಂದು ರಾಹುಲ್ ಗಾಂಧಿ ಹೇಳಿದರು.
ಬಿಜೆಪಿ ಮತ್ತು ಆರ್ಎಸ್ಎಸ್ ಬಸವಣ್ಣನವರ ಆದರ್ಶಗಳಾದ ಸಮಾನ ಪಾಲುದಾರಿಕೆ, ಸಮಾನ ಅವಕಾಶಗಳ ಮೇಲೆ ದಾಳಿ ನಡೆಸುತ್ತಿದ್ದು. ಅವರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದು ಕರೆ ನೀಡಿದರು.
ಅವರು ( ಬಿಜೆಪಿ ಹಾಗೂ ಆರ್ಎಸ್ಎಸ್ ) ಹಿಂದೂಸ್ತಾನದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದ್ದಾರೆ. ಅವರು ಬಡ ಮತ್ತು ದುರ್ಬಲ ವರ್ಗದ ಜನರ ಹಣವನ್ನು ಕಿತ್ತುಕೊಂಡು ಎರಡು ಅಥವಾ ಮೂರು ಶ್ರೀಮಂತರಿಗೆ ನೀಡುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಪಕ್ಷದ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯು ಅದರ ಚುನಾವಣಾ ಖಾತರಿಗಳನ್ನು ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವು ನಾಲ್ಕು ಚುನಾವಣಾ 'ಖಾತರಿ'ಗಳನ್ನು ಘೋಷಿಸಿದೆ. ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ (ಗೃಹ ಜ್ಯೋತಿ), ಪ್ರತಿ ಕುಟುಂಬದ ಮಹಿಳೆಗೆ ಮಾಸಿಕ 2,000 ರೂ (ಗೃಹ ಲಕ್ಷ್ಮಿ), ಪ್ರತಿ ಸದಸ್ಯರಿಗೆ 10 ಕೆಜಿ ಉಚಿತ ಅಕ್ಕಿ (ಬಿಪಿಎಲ್ ಕುಟುಂಬಗಳಿಗೆ ಅನ್ನ ಭಾಗ್ಯ) ಮತ್ತು ಪದವೀಧರ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ರೂ 3,000 ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಎರಡು ವರ್ಷಗಳವರೆಗೆ (ಯುವನಿಧಿ) ಡಿಪ್ಲೊಮಾ ಹೊಂದಿರುವವರಿಗೆ ( 18-25 ವರ್ಷ ವಯಸ್ಸಿನವರು ) 1,500 ರೂ ನೀಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಜಮಾ ಮಾಡುವುದು, ಕಪ್ಪು ಹಣದ ವಿರುದ್ಧ ಸಮರ ಸೇರಿದಂತೆ ಇನ್ನಿತರ ಸುಳ್ಳು ಭರವಸೆಗಳನ್ನು ಕಾಂಗ್ರೆಸ್ ನೀಡುವುದಿಲ್ಲ ಮತ್ತು ಅಧಿಕಾರಕ್ಕೆ ಬಂದ ತಕ್ಷಣ ಭರವಸೆಗಳನ್ನು ಈಡೇರಿಸಲಿದೆ ಎಂದು ರಾಹುಲ್ ಹೇಳಿದರು.

'ಕರ್ನಾಟಕದ ಮುಖ್ಯಮಂತ್ರಿ ಯಾರೇ ಆಗಲಿ, ಅಧಿಕಾರಕ್ಕೆ ಬಂದ ಮೊದಲ ದಿನದಲ್ಲಿ ಖಾತರಿಗಳನ್ನು ಕಾನೂನಾಗಿ ಪರಿವರ್ತಿಸುತ್ತಾರೆ' ಎಂದು ಭರವಸೆ ನೀಡಿದರು.
ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ (ಕರ್ನಾಟಕ ಉಸ್ತುವಾರಿ), ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಭಾಲ್ಕಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಈಶ್ವರ ಖಂಡ್ರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.












Click it and Unblock the Notifications