ಬೀದರ್; ಮಳೆ ಹಾನಿ, 50 ಸಾವಿರ ಪರಿಹಾರ ಘೋಷಣೆಗೆ ಒತ್ತಾಯ
ಬೀದರ್, ಅಕ್ಟೋಬರ್ 01; ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಿವಿಧ ಪ್ರದೇಶದಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದಾಗಿ ಹಾನಿಗೀಡಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾಲ್ಕಿ ತಾಲೂಕಿನ ಭಾತಂಬ್ರಾ, ಇಂಚೂರು ಹಾಗೂ ಗಡಿಭಾಗದ ಸಾಯಿಗಾಂವ, ನಾರದ ಸಂಗಮ ಸೇರಿ ಮುಂತಾದ ಕಡೆಗಳಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಭಾಲ್ಕಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿದಿದೆ. ಮಹಾರಾಷ್ಟ್ರದ ಧನೇಗಾಂವ ಜಲಾಶಯದಿಂದ ಹೆಚ್ಚುವರಿ ನೀರು ಹರಿಬಿಟ್ಟಿರುವ ಪರಿಣಾಮ ತಾಲೂಕಿನಲ್ಲಿ ಶೇ 80ರಷ್ಟು ಬೆಳೆಹಾನಿ ಸಂಭವಿಸಿದೆ.

60 ಕ್ಕೂ ಅಧಿಕ ಹಳ್ಳಿಗಳ ರಸ್ತೆ ಸಂಪರ್ಕ ಕಡೆದು ಕೊಂಡಿವೆ. ಸಾಕಷ್ಟು ಕಡೆಗಳಲ್ಲಿ ರಸ್ತೆ ಮತ್ತು ಸೇತುವೆಗಳು ಕೊಚ್ಚಿ ಹೋಗಿವೆ. ರೈತರು ಬೆಳೆದ ಉದ್ದು, ಸೋಯಾ ಅವರೆ, ತೊಗರಿ ಸೇರಿ ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನೆಗಳು ಸಹ ಕುಸಿತಗೊಂಡಿವೆ.
Karnataka| Recent heavy rain damaged onion crops in Kalburgi
— ANI (@ANI) September 30, 2021
In past 2 months, we received excessive rain. Kalburgi received 980mm rainfall. We noticed onion rot, onion basal rot symptoms in low lying areas: Zaheer Ahmed, Scientist, Plant Pathology,Krishi Vigyana Kendra (30.09) pic.twitter.com/fhMM6jj2a8
ಬೀದರ್ ಗಡಿ ಭಾಗದ ಸಾಯಿಗಾಂವ ವ್ಯಾಪ್ತಿಯಲ್ಲಿ ಮಹಾರಾಷ್ಟ್ರದಿಂದ ಹೆಚ್ಚುವರಿ ನದಿ ಬಿಡುತ್ತಿರುವ ಪರಿಣಾಮ ಸಾಯಿಗಾಂವ ಹೊಸ ಸೇತುವೆ ಎತ್ತರಕ್ಕೆ ನೀರು ಹರಿಯುತ್ತಿದೆ. ಹಾಗಾಗಿ ನದಿ ದಡದಲ್ಲಿ ರೈತರು ಬೆಳೆದ ಬೆಳೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.
ನೀರು ಹರಿದ ಪರಿಣಾಮ ಹೊಲಗಳಲ್ಲಿನ ಫಲವತ್ತಾದ ಮಣ್ಣು ಕೊಚ್ಚಿಹೋಗಿದ್ದು ಆ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಚೂರು ಸೇತುವೆ ಕೆಳಮಟ್ಟದಲ್ಲಿದ್ದು ಎತ್ತರ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸುವಂತೆ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಹೆಕ್ಟೇರ್ ಬೆಳೆ ಹಾನಿ ಆಗಿದೆ. ಸರ್ಕಾರ ಈಗ ಕೊಡುವ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ. ಕೂಡಲೇ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಬೇಕು ಎಂದು ಈಶ್ವರ ಖಂಡ್ರೆ ಒತ್ತಾಯಿಸಿದರು.
ಬೀದರ್ ಜಿಲ್ಲೆಯಲ್ಲಿ ಮಳೆಯಿಂದ ಆದ ಹಾನಿಗೆ ರೈತರ ಪ್ರತಿ ಹೆಕ್ಟೇರ್ಗೆ ಕನಿಷ್ಠ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಬೇಕೆಂದು ಎಂದು ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.
ಜುಲೈ ತಿಂಗಳಿನಲ್ಲಿಯೂ ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಬಹುತೇಕ ಬೆಳೆಗಳು ನೀರು ಪಾಲಾಗಿವೆ. ಇದುವರೆಗೂ ಜಿಲ್ಲೆಯಲ್ಲಿ 1,03,092 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಹೆಸರು, ಉದ್ದು, ಸೋಯಾಬಿನ್, ತೊಗರಿ ಬೆಳೆಗಳು ಜಲಾವೃತವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜುಲೈನಲ್ಲಿ 989.16 ಹೆಕ್ಟೇರ್, ಆಗಸ್ಟ್ನಲ್ಲಿ 1728 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.
ಸೆಪ್ಟೆಂಬರ್ 21 ರಿಂದ 27 ರ ತನಕ ನಿರಂತರವಾಗಿ ಮಳೆಯಾಗಿದೆ. ಬೆಳೆಗಳ ಮೇಲೆ 3 ರಿಂದ 4 ಅಡಿ ನೀರು ನಿಂತಿದ್ದು, ಬೆಳೆಗಳು ಕೊಳೆತು ಹೋಗಿವೆ. ಭಾಲ್ಕಿ ತಾಲೂಕಿನಲ್ಲಿ ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ 151 ಮಿ. ಮೀ. ಮಳೆ ಹೆಚ್ಚಾಗಿ ಸುರಿದಿದೆ.
ಕಲಬುರಿಯಲ್ಲೂ ಹಾನಿ; ಇತ್ತೀಚೆಗೆ ಸುರಿದ ಮಳೆಯಿಂದಾಗಿ ಬೀದರ್ ಮಾತ್ರವಲ್ಲ ಕಲಬುರಗಿ ಜಿಲ್ಲೆಯಲ್ಲಿಯೂ ಅಪಾರ ಬೆಳೆಹಾನಿಯಾಗಿದೆ. ಕಳೆದ ಎರಡು ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಎರಡು ತಿಂಗಳಿನಲ್ಲಿ ಜಿಲ್ಲೆಯಲ್ಲಿ 980 ಮಿ. ಮೀ. ಮಳೆಯಾಗಿದ್ದು ಈರುಳ್ಳಿ ಬೆಳೆ ಕೊಳೆಯುತ್ತಿದೆ. ಸರ್ಕಾರ ರೈತರ ಸಂಕಷ್ಟಕ್ಕೆ ಧಾವಿಸಬೇಕು. ತಕ್ಷಣ ಪರಿಹಾರವನ್ನು ವಿತರಣೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.












Click it and Unblock the Notifications