ಮೋದಿ ದೇಶದ ಚೌಕೀದಾರ ಅಲ್ಲ, ಭ್ರಷ್ಟಾಚಾರದ ಭಾಗೀದಾರ: ಸಿದ್ದರಾಮಯ್ಯ
ಬೀದರ್, ಆಗಸ್ಟ್ 13: ಪ್ರಧಾನಿ ನರೇಂದ್ರ ಮೋದಿಯವರು ದೇಶದ ರಕ್ಷಕನಲ್ಲ, ಭ್ರಷ್ಟ ಆಡಳಿತಗಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.
ಬೀದರ್ನಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೋದಿ ಚೌಕೀದಾರನಲ್ಲ, ಭ್ರಷ್ಟಾಚಾರದ ಭಾಗೀದಾರ. ನಾಲ್ಕು ವರ್ಷಗಳ ಬಳಿಕ ಕೇಂದ್ರದ ಬಿಜೆಪಿ ಸರ್ಕಾರದ ಬಂಡವಾಳ ಬಯಲಾಗಿದೆ. ಎಲ್ಲ. ರಂಗಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ವಿಫಲವಾಗಿದೆ ಎಂದರು.
ಸುಳ್ಳು ಭರವಸೆ ಮತ್ತು ಅಪ ಪ್ರಚಾರದ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಬಗ್ಗೆ ಜನ ಭ್ರಮನಿರಸನಗೊಂಡಿದ್ದಾರೆ. ನರೇಂದ್ರ ಮೋದಿ ಅವರು ಈ ದೇಶದ ಚೌಕೀದಾರ ಅಲ್ಲ.

ಭ್ರಷ್ಟಾಚಾರದ ಭಾಗೀದಾರ. ಅವರ ಕುಮ್ಮಕ್ಕಿನಿಂದಲೇ ದೇಶದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಸುಳ್ಳು ಭರವಸೆಗಳ ಮೂಲಕ ದೇಶದ ಜನರನ್ನು ಮೂರ್ಖರನ್ನಾಗಿ ಮಾಡಲು ಹೋದ ಮೋದಿ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ರಾಹುಲ್ ಗಾಂಧಿಯವರು ಪ್ರಧಾನಿ ಆಗಲಿದ್ದಾರೆ. ಬಳಿಕ ಅವರು ರೈತರ ಸಾಲ ಮನ್ನಾ ಮಾಡಲಿದ್ದಾರೆ.
ಪ್ರಧಾನಿಯವರ ಮನ್ ಕೀ ಬಾತ್ ನಿಂದ ಬಡವರ ಹೊಟ್ಟೆ ತುಂಬದು. ಅವರಿಗೆ ಬೇಕಿರುವುದು ಕಾಮ್ ಕೀ ಬಾತ್. ದಲಿತರ ಬಗ್ಗೆ ಮೋದಿಯವರಿಗೆ ಕಾಳಜಿ ಇದ್ದರೆ ಅವರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಸ್ ಸಿಪಿ, ಟಿಎಸ್ ಪಿ ಕಾಯಿದೆಯನ್ನು ದೇಶವ್ಯಾಪಿ ಜಾರಿಗೆ ತರಲಿ.
ಕೇವಲ ಮೂಗಿಗೆ ತುಪ್ಪ ಸವರುವುದರಿಂದ ದಲಿತರು, ರೈತರ ಉದ್ಧಾರ ಆಗದು. ಅವರ ಕಲ್ಯಾಣಕ್ಕೆ ಕಾರ್ಯಕ್ರಮ ಜಾರಿಗೆ ತರಬೇಕು. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಹೇಳಿದರು.











Click it and Unblock the Notifications