2ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ನೀತಿ, ನಿಯಮ
ಬೆಂಗಳೂರು ಡಿಸೆಂಬರ್ 22: ಕೈಗಾರಿಕೋದ್ಯಮಿಗಳೂ ಹಾಗೂ ಕೈಗಾರಿಕಾ ಸಂಸ್ಥೆಗಳ ಪ್ರಮುಖ ಬೇಡಿಕೆಯಾಗಿದ್ದ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಕ್ರಮದ ಬಗ್ಗೆ ರಾಜ್ಯ ಸರಕಾರ ಮಹತ್ವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ವಿವರಣೆ ನೀಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು, ನಗರಪ್ರದೇಶಗಳಿಂದ ಗ್ರಾಮಪಂಚಾಯ್ತಿಯ ವ್ಯಾಪ್ತಿಯಲ್ಲಿನ ಎಲ್ಲಾ ಕೈಗಾರಿಕೆಗಳಿಗೆ ಏಕರೂಪದ ತೆರಿಗೆ ಸಂಗ್ರಹಣೆಯ ಮಾಡುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸಲಾಗುವುದು ಎಂದು ಪ್ರಕಟಿಸಿದರು.
ಖನಿಜ ಭವನದ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ದಿ, ನಗರಾಭಿವೃದ್ದಿ, ಕೈಗಾರಿಕಾ ಇಲಾಖೆ ಹಾಗೂ ಇನ್ನಿತರೆ ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಿದ ಅವರು ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿಯನ್ನು ನೀಡಿದರು.
ಮಂಗಳೂರಿನ ಹಿಂಸಾಚಾರಕ್ಕೆ ಯು.ಟಿ. ಖಾದರ್ ನೇರ ಹೊಣೆ: ಶೆಟ್ಟರ್
ನಗರಸಭೆ, ಪುರ ಸಭೆ, ಕಾರ್ಪೋರೇಷನ್ಗಳು, ಗ್ರಾಮಪಂಚಾಯ್ತಿ ಇವುಗಳ ಮೂಲಕ ತೆರಿಗೆ ಸಂಗ್ರಹಕ್ಕೆ ಇರುವ ಕ್ರಮಗಳಲ್ಲಿ ಬಹಳಷ್ಟು ಗೊಂದಲಗಳು ಇದ್ದವು. ಇವುಗಳನ್ನು ಸರಿಪಡಿಸುವಂತೆ ಕೊರಿ ಬಹಳಷ್ಟು ಸಮಯದಲ್ಲಿ ಕೈಗಾರಿಕೋದ್ಯಮಿಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ಮನವಿಯನ್ನು ನೀಡಿದ್ದವು. ಈ ಮನವಿಯ ಹಿನ್ನಲೆಯಲ್ಲಿ ಹಾಗೂ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ದಿಗೆ ಬೇಕಾಗಿರುವ ಸವಲತ್ತುಗಳನ್ನು ನೀಡುವ ದೃಷ್ಟಿಯಿಂದ ರಾಜ್ಯಾದ್ಯಂತ ಏಕರೂಪದ ತೆರಿಗೆ ಸಂಗ್ರಹಣೆಗೆ ಅಗತ್ಯವಿರುವ ನೀತಿಯನ್ನು ರೂಪಿಸಲು ರಾಜ್ಯ ಸರಕಾರ ಮುಂದಾಗಿದೆ.
ನೂತನ ತೆರಿಗೆ ಬಗ್ಗೆ ಪ್ರಸ್ತಾಪ
ಎಷ್ಟೊ ಕಡೆ ಕೆಎಸ್ಎಸ್ಐಡಿಸಿ ಹಾಗೂ ಕೆಎಫ್ಡಿಬಿ ಮೂಲಕ ಅಭಿವೃದ್ದಿ ಪಡಿಸಿದ ಕೈಗಾರಿಕಾ ವಸಹಾತುಗಳನ್ನು ಅಧಿಕೃತವಾಗಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಆಗದೆ ಇದ್ದರೂ, ಕೈಗಾರಿಕೆ ಉದ್ದಿಮೆಗಳಿಗೆ ತೆರಿಗೆ ಅಕರಣೆ ಮಾಡುತ್ತಿರುವುದು ಸರಿಯಲ್ಲ ಎನ್ನುವ ಬಗ್ಗೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆಯನ್ನು ನಡೆಸಲಾಯಿತು.
ಇವುಗಳ ಪರೀಶೀಲನೆಯ ಬಗ್ಗೆ ಕೂಲಂಕುಷವಾದ ಚರ್ಚೆ ನಡೆದಿದ್ದು, ಸದ್ಯದಲ್ಲೇ ಸಚಿವ ಸಂಪುಟದ ಮುಂದೆ ನೂತನ ತೆರಿಗೆ ಬಗ್ಗೆ ಪ್ರಸ್ತಾಪವನ್ನು ಮಂಡಿಸಲಾಗುವುದು ಎಂದು ಹೇಳಿದರು.
ನೂತನ ಕೈಗಾರಿಕಾ ನೀತಿ
ರಾಜ್ಯದ ಹೊಸ ಕೈಗಾರಿಕಾ ನೀತಿಯು ಅಂತಿಮ ಹಂತದಲ್ಲಿದೆ. ಈಗಾಗಲೇ ಹಲವಾರು ಬಾರಿ ಕೈಗಾರಿಕೋದ್ಯಮಿಗಳು ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಜೊತೆ ಕೂಲಂಕುಷವಾದ ಚರ್ಚೆಯಾಗಿದೆ. ಆದಷ್ಟು ಬೇಗನೆ ಅಗತ್ಯವಿರುವ ಇಲಾಖೆಗಳ ಒಪ್ಪಿಗೆಯನ್ನು ಪಡೆದುಕೊಳ್ಳಲಾಗುವುದು. ನಂತರ ಸಚಿವ ಸಂಪುಟ ಮುಂದೆ ಇದನ್ನು ತರಲಾಗುವುದು ಎಂದು ಹೇಳಿದರು.
2ನೇ ಹಂತದ ನಗರಗಳಲ್ಲಿ ಕೈಗಾರಿಕಾ ಅಭಿವೃದ್ದಿ
ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಬಹಳಷ್ಟು ಕಾರ್ಯಕ್ರಮಗಳನ್ನು ನಾನು ಸಚಿವನಾಗಿ ಹಮ್ಮಿಕೊಂಡಿದ್ದೇನೆ. ಮೊದಲ ಹಂತವಾಗಿ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಿದ್ದೇವೆ. ಫೆಬ್ರವರಿ ಎರಡನೇ ವಾರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಮುಂದಿನ ಹಂತದಲ್ಲಿ ಬೆಳಗಾವಿ, ಗುಲ್ಬರ್ಗಾ, ಮೈಸೂರು, ದಾವಣಗೆರೆ, ಮಂಗಳೂರು, ಹಾಸನ, ಹಾಗೂ ಶಿವಮೊಗ್ಗ ಸೇರಿದಂತೆ ಎರಡನೇ ಹಂತದ ನಗರಗಳಲ್ಲಿ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ವಿಮಾನ ನಿಲ್ದಾಣಗಳು ಹೆಚ್ಚಾಗಿವೆ
ರಾಜ್ಯದಲ್ಲಿ ವಿಮಾನ ನಿಲ್ದಾಣಗಳು ಹೆಚ್ಚಾಗಿವೆ. ಇದು ಕೈಗಾರಿಕೋದ್ಯಮಿಗಳು ಬೆಂಗಳೂರು ಹೊರತುಪಡಿಸಿ ಇತರೇ ಜಿಲ್ಲೆಗಳಲ್ಲೂ ಹೂಡಿಕೆ ಮಾಡಲು ಚಿಂತಿಸುವಂತೆ ಮಾಡಿದೆ. ರಾಜ್ಯದಲ್ಲಿ ಹೂಡಿಕೆಯ ವಾತಾವರಣ ಬದಲಾಗಿದೆ. ಈಗಾಗಲೇ ಹೈದರಾಬಾದ್, ಮಹರಾಷ್ಟ್ರ ಹಾಗೂ ಇನ್ನಿತರೆ ರಾಜ್ಯಗಳ ಕೈಗಾರಿಕೋದ್ಯಮಿಗಳು ನಮ್ಮ ಜೊತೆ ಚರ್ಚೆ ನಡೆಸಿದ್ದು, ಬೆಂಗಳೂರು ಹೊರತು ಪಡಿಸಿ ಇತರೆ ಜಿಲ್ಲೆಗಳಲ್ಲಿ ಕೈಗಾರಿಕೆಯನ್ನು ಪ್ರಾರಂಭಿಸಲು ಮುಂದಾಗಿದ್ದಾರೆ. ಇವರಿಗೆ ಅಗತ್ಯವಿರುವ ಅನುಕೂಲತೆಗಳನ್ನು ರಾಜ್ಯ ಸರಕಾರ ಮಾಡಿಕೊಡುತ್ತಿದೆ ಎಂದು ಹೇಳಿದರು.
ಕೈಗಾರಿಕಾಭಿವೃದ್ದಿಯಲ್ಲಿ ಹಿಂದೆ ಉಳಿದಿರುವ ಜಿಲ್ಲೆಗಳಲ್ಲಿ ಹೂಡಿಕೆ ಮಾಡಲು ಮುಂದಾಗುವ ಉದ್ಯಮಿಗಳೀಗೆ ಹಲವಾರು ರಿಯಾಯಿತಿ ನೀಡುವ ಬಗ್ಗೆಯೂ ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.
ಜಾಗತಿಕ ಹೂಡಿಕೆದಾರರ ಸಮಾವೇಶ
ಜನವರಿಯಲ್ಲಿ ನಡೆಯಬೇಕಾಗಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದ (ಜಿಮ್) ನೂತನ ದಿನಾಂಕ ನಿಗದಿಯ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆಯಲ್ಲಿ ಚರ್ಚೆ ನಡೆಸಿದ್ದೇನೆ. ಮುಖ್ಯಮಂತ್ರಿಗಳು ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ತಿಳಿಸಿದ್ದು, ಮುಂದಿನ ಹೂಡಿಕೆದಾರರ ಸಮಾವೇಶದ ದಿನಾಂಕವನ್ನ ಸದ್ಯದಲ್ಲೇ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಹೂಡಿಕೆದಾರರನ್ನು ಸೆಳೆಯುವ ನಿಟ್ಟಿನಲ್ಲಿ ಸೋಮುವಾರದಂದು ಮುಂಬಯಿಯಲ್ಲಿ ರೋಡ್ ಶೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಹೈದರಾಬಾದ್ ಹಾಗೂ ಚೆನ್ನೈ ಸೇರಿದಂತೆ ಇನ್ನಿತರೆ ನಗರಗಳಲ್ಲೂ ರೋಡ್ ಶೋವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಮಾತನಾಡಿ, ಕರ್ನಾಟಕ ರಾಜ್ಯ ಮೊದಲಿನಿಂದಲೂ ಕೈಗಾರಿಕೆಗಳಿಗೆ ಪೂರಕವಾದ ವಾತಾವರಣ ಹೊಂದಿದೆ. ರಾಜ್ಯದಲ್ಲಿ ಇನ್ನೂ ಹೆಚ್ಚಿನ ಹೂಡಿಕೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನೂತನ ಕೈಗಾರಿಕಾ ನೀತಿ, ಎರಡನೇ ಹಂತದ ಜಿಲ್ಲೆಗಳಲ್ಲಿ ಹೂಡಿಕೆಯನ್ನು ಹೆಚ್ಚಿಸಲು ರೋಡ್ ಶೋಗಳನ್ನು ನಡೆಸಲಾಗುತ್ತಿದೆ. ಮುಂಬಯಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಇಡೀ ದಿನ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮಾತನಾಡಿ, ಟಾಟಾ ಗ್ರೂಪ್, ಮಹಿಂದ್ರಾ, ಹಿಂದೂಜಾ ಗ್ರೂಫ್ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆಯನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲಿರುವ ಕೈಗಾರಿಕಾ ಅನುಕೂಲಕರ ಪರಿಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.