ದಾವೊಸ್ ನಲ್ಲಿ ಬೆಂಗಳೂರು ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಧ್ಯಪ್ರದೇಶ ಸಿಎಂ
ದಾವೊಸ್, ಜನವರಿ 22: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಿಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಬೆಳಗಿನ ಉಪಾಹಾರದೊಂದಿಗೆ ಉಭಯ ರಾಜ್ಯಗಳ ಆರ್ಥಿಕ ಸ್ಥಿತಿ ಗತಿಗಳ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ರಾಜ್ಯದಲ್ಲಿರುವ ಕೈಗಾರಿಕೆಗಳಿಗೆ ಉತ್ತೇಜನಕಾರಿ ವಾತಾವರಣ ಹಾಗೂ ರಾಜ್ಯಕ್ಕೆ ಬಂಡವಾಳ ತರಲು ಕರ್ನಾಟಕ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
"ಪ್ರತಿಯೊಬ್ಬ ಹೂಡಿಕೆದಾರನೂ ಬೆಂಗಳೂರು ಕುರಿತು ಹಾಗೂ ಪೂರ್ವರಾಷ್ಟ್ರಗಳಲ್ಲಿ ಬೆಂಗಳೂರು ಜ್ಞಾನಾಧಾರಿತ ಕೇಂದ್ರವಾಗಿ ಬೆಳೆದಿರುವ ಕುರಿತು ಉಲ್ಲೇಖಿಸುತ್ತಾರೆ. ಈ ವಿಷಯದಲ್ಲಿ ನಿಮ್ಮನ್ನು ಮೀರಿಸಲು ಸಾಧ್ಯವಿಲ್ಲ" ಎಂದು ಮುಖ್ಯಮಂತ್ರಿಯವರನ್ನು ಅಭಿನಂದಿಸಿದರು ಎಂದು ಪತ್ರಿಕಾ ಹೇಳಿಕೆಯಲ್ಲಿ ಹೇಳಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಮಲ್ ನಾಥ್ ಅವರಿಗೆ ರಾಜ್ಯ ಸರ್ಕಾರವು ಕೃಷಿ ವಲಯದಲ್ಲಿ ಕೈಗೊಂಡಿರುವ ನೂತನ ಉಪಕ್ರಮಗಳ ಕುರಿತು ಮಾಹಿತಿ ನೀಡುತ್ತಾ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಭಾರತ ಸರ್ಕಾರ ನೀಡುವ 6,000/- ರೂ. ಗಳ ಜೊತೆಗೆ ಹೆಚ್ಚುವರಿಯಾಗಿ 4,000/- ರೂ. ಗಳನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಇದರಿಂದ 40 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಿದೆ ಎಂದು ವಿವರಿಸಿದರು.
ಕಮಲ್ ನಾಥ್ ಅವರು ಬೆಂಗಳೂರನ್ನು ಕೃತಕ ಬುದ್ಧಿಮತ್ತೆ ಮತ್ತು ಆತಿಥ್ಯ ವಲಯಗಳ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿ ಪಡಿಸುವ ಕುರಿತು ಅರಿತುಕೊಳ್ಳಲು ಆಸಕ್ತಿ ವಹಿಸಿದರು. ಅವರು ಕರ್ನಾಟಕ ಪೆವಿಲಿಯನ್ ಕುರಿತು ಹಾಗೂ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಹೂಡಿಕೆ ಆಕರ್ಷಿಸುವ ಕುರಿತು ಅಧಿಕಾರಿಗಳ ನಡೆಯನ್ನು ಶ್ಲಾಘಿಸಿದರು.












Click it and Unblock the Notifications