Arecanut: ಅಡಿಕೆ ಬೆಳೆಗಾರರಿಗೆ ದೊಡ್ಡ ಭರವಸೆ ನೀಡಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಹಲವು ಸಮಸ್ಯೆಗಳಿಂದ ರಾಜ್ಯದ ಅಡಿಕೆ ಬೆಳೆಗಾರರು ಕಂಗೆಟ್ಟಿದ್ದಾರೆ. ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆ ಲಕ್ಷಾಂತರ ಮಂದಿಯ ಜೀವನಾಧಾರವಾಗಿದೆ. ಅಡಿಕೆ ಬೆಲೆ ಕುಸಿತ, ಮಾರಕ ರೋಗಗಳು ಅಡಿಕೆ ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸಿವೆ. ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈಗ ಭರವಸೆಯೊಂದನ್ನು ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದ ಸಾಗರ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಡಿಕೆ ಆಮದು ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳುವ ಜೊತೆಗೆ ಅಡಿಕೆಗೆ ವೈಜ್ಞಾನಿಕ ಬೆಲೆ ಸಿಗುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ರೈತರ ಬೆಳೆಗಳಿಗೆ ತಕ್ಕ ಬೆಲೆ ಸಿಗಬೇಕು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ಮಧ್ಯವರ್ತಿಗಳನ್ನು ತಪ್ಪಿಸಿ ರೈತರಿಗೆ ತಮ್ಮ ಬೆಳೆಗಳಿಗೆ ಸರಿಯಾದ ಬೆಲೆ ಸಿಗುವಂತೆ ಮಾಡಲು ನಾವು ಬದ್ದರಾಗಿದ್ದೇವೆ ಎಂದರು.

ಸಂಕಷ್ಟದಲ್ಲಿದ್ದಾರೆ ಎಂದಿದ್ದಕ್ಕೆ ಬಂದಿದ್ದೇನೆ
ಅಡಿಕೆ ಬೆಳೆಗಾರರು ಕಷ್ಟದಲ್ಲಿದ್ದಾರೆ ಎಂದಿದ್ದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ಯಾವುದೇ ಪಕ್ಷದ ನಾಯಕನಾಗಿಯೋ, ಕೇಂದ್ರದ ಸಚಿವನಾಗಿ ಬಂದಿಲ್ಲ, ನಿಮ್ಮ ಸೇವೆ ಮಾಡಲು ಬಂದಿದ್ದೇನೆ. ಕೃಷಿ ಬಗ್ಗೆ ಕಾಳಜಿ ಇಲ್ಲದವರು ಕೃಷಿ ಸಚಿವರಾಗಬಾರದು ಎಂದರು.
ಪ್ರತಿ ಮನೆಯಲ್ಲೂ ಅಡಿಕೆ ಬಳಕೆ ಮಾಡಲಾಗುತ್ತದೆ. ಪೂಜೆಯ ಸಂದರ್ಭದಲ್ಲಿ ಅಡಿಕೆಯನ್ನು ಬಳಸುತ್ತೇವೆ, ಅಡಿಕೆಗೆ ದೇವರ ಸ್ಥಾನ ನೀಡಲಾಗುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ಅಡಿಕೆಯ ಬಳಕೆಯಿದೆ. ನಾನು ಕೃಷಿ ಮಂತ್ರಿಯನ್ನು ಭೇಟಿಯಾಗಿ ಬಂದಿದ್ದೇನೆ, ಯಾವ ಸರ್ಕಾರ ಅಧಿಕಾರದಲ್ಲಿದೆ ಎನ್ನುವುದು ಮುಖ್ಯವಲ್ಲ ರೈತರ ಸಮಸ್ಯೆ ಬಗೆಹರಿಸುವುದು ನಮ್ಮ ಮೊದಲ ಆದ್ಯತೆ ಎಂದರು.
ಸಂಶೋಧನೆಗೆ ತಂಡ ರಚನೆ
ಅಡಿಕೆ ಬೆಳೆಗೆ ರೋಗಗಳ ಹಾವಳಿ ಜಾಸ್ತಿಯಾಗುತ್ತಿದ್ದು ಬೆಳೆಗಾರರನ್ನು ಸಂಕಷ್ಟಕ್ಕೆ ದೂಡಿದೆ. ಹಲವು ಅಡಿಕೆ ಬೆಳೆಗಾರರು ಈಗಾಗಲೇ ನಷ್ಟದ ಸುಳಿಗೆ ಸಿಲುಕಿದ್ದಾರೆ. ಈ ವರ್ಷ ರೋಗದಿಂದ ಅಡಿಕೆ ಬೆಳೆ ಮೇಲೆ ಹೆಚ್ಚಿನ ಹಾನಿಯಾಗಿದೆ. ಅಡಿಕೆ ಬೆಳೆಯನ್ನು ಬಾಧಿಸುವ ರೋಗಗಳನ್ನು ಸಂಶೋಧನೆ ನಡೆಸಿ ಪರಿಹಾರ ಕಂಡುಕೊಳ್ಳಲು ತಂಡ ರಚನೆ ಮಾಡಲಾಗುವುದು. ಇದಕ್ಕಾಗಿ ಈ ಬಾರಿ ಬಜೆಟ್ನಲ್ಲಿ ಹಣ ಮೀಸಲಿಡಲಾಗುವುದು ಎಂದು ಹೇಳಿದರು.
ಅಡಿಕೆಯಿಂದ ಕ್ಯಾನ್ಸರ್ ಬರಲ್ಲ
ಅಡಿಕೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎನ್ನುವ ವದಂತಿಯನ್ನು ಹಬ್ಬಿಸಲಾಗಿದೆ. ನಮ್ಮ ಪೂರ್ವಜರ ಕಾಲದಿಂದಲೂ ಜನ ಅಡಿಕೆ ತಿನ್ನುತ್ತಿದ್ದಾರೆ. ಅಡಿಕೆ ಸೇವನೆ ಪರಿಣಾಮಗಳ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಈಗಾಗಲೇ 16 ಸಂಸ್ಥೆಗಳಿಗೆ ಸೂಚಿಸಲಾಗಿದ್ದು, ಅಡಿಕೆ ಸೇವನೆಯಿಂದ ಯಾವುದೇ ಸಮಸ್ಯೆಯಿಲ್ಲ, ಈ ಬಗ್ಗೆ ಇರುವ ವದಂತಿಗಳಿಗೆ ಸ್ಪಷ್ಟನೆ ನೀಡಲಾಗುವುದು ಎಂದು ಭರವಸೆ ನೀಡಿದರು.












Click it and Unblock the Notifications