ಕೈಗಾರಿಕೋದ್ಯಮಿಗಳ ಅನುಕೂಲಕ್ಕಾಗಿ ವೆಬ್ ಸೈಟಿಗೆ ಚಾಲನೆ!
ಬೆಂಗಳೂರು ಸೆ. 13: ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುವಂತಹ ಏಕಗವಾಕ್ಷಿ ವೆಬ್ಸೈಟನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಎಫ್ಸಿಐ ವತಿಯಿಂದ ಆಯೋಜಿಸಲಾಗಿದ್ದ ಫಾರಿನ್ ಇನ್ವೆಸ್ಟರ್ಸ್ ಕೌನ್ಸಿಲ್ ಕರ್ನಾಟಕ ಚಾಪ್ಟರ್ ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯ ಸರಕಾರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳ ಸ್ಥಾಪನೆ ಆಗಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಿದೆ ಎಂದರು. ರಾಜ್ಯದಲ್ಲಿ 5 ಲಕ್ಷ ಕೋಟಿ ರೂಪಾಯಿಗಳ ಬಂಡವಾಳ ಆಕರ್ಷಣೆ, 20 ಲಕ್ಷ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಹಾಗೂ ಕೈಗಾರಿಕಾಭಿವೃದ್ದಿಯಲ್ಲಿ ಹಿಂದುಳಿದ ಜಿಲ್ಲೆಗಳ ಅಭಿವೃದ್ದಿಗೆ ಅನುವು ಮಾಡಿಕೊಡುವಂತಹ ನೂತನ ಕೈಗಾರಿಕಾ ನೀತಿ 2020-25 ರಾಜ್ಯವನ್ನು ಇನ್ನಷ್ಟು ಕೈಗಾರಿಕಾ ಸ್ನೇಹಿ ಮಾಡುವತ್ತ ಪ್ರಮುಖ ಹೆಜ್ಜೆಯಾಗಿದೆ ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.
ಕೈಗಾರಿಕಾ ಅಭಿವೃದ್ಧಿಯಲ್ಲಿ ಹಿಂದುಗಳಿದ ಜಿಲ್ಲೆಗಳಲ್ಲಿ ಬಂಡವಾಳ ಆಕರ್ಷಿಸಲು ಹೆಚ್ಚಿನ ರಿಯಾಯಿತಿಗಳನ್ನು ಒದಗಿಸುತ್ತಿದ್ದು, ಇದರಿಂದ ರಾಜ್ಯದಲ್ಲಿ ಸಮತೋಲಿತ ಕೈಗಾರಿಕಾಭಿವೃದ್ಧಿಯನ್ನು ಖಾತರಿಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.

ಹೊಸ ಕೈಗಾರಿಕಾ ನೀತಿ ಜಾರಿ
ಉದ್ಯಮ ಸ್ನೇಹಿ ಉಪಕ್ರಮಗಳನ್ನು ಅನುಷ್ಠಾನಗೊಳಿಸುವತ್ತ ಹೆಚ್ಚಿನ ಗಮನ ಹರಿಸುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹೊಸ ಕೈಗಾರಿಕಾ ನೀತಿ ಯನ್ನು ಜಾರಿಗೊಳಿಸಿದ್ದು ಹಾಗೂ ಕೈಗಾರಿಕಾ ಸೌಲಭ್ಯ ಅಧಿನಿಯಮದಲ್ಲಿ ಅಮೂಲಾಗ್ರ ಬದಲಾವಣೆಯನ್ನು ಮಾಡಿರುವ ದೇಶದ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ. ರಾಜ್ಯದಲ್ಲಿನ ಅಸ್ತಿತ್ವದಲ್ಲಿರುವ ಬೃಹತ್ ಕೈಗಾರಿಕಾ ಪ್ರದೇಶಗಳನ್ನು ಸಂಬಂಧಿಸಿದ ಕಾಯ್ದೆಗಳಡಿ ಕೈಗಾರಿಕಾ ಟೌನ್ಶಿಪ್ಗಳೆಂದು ಘೋಷಿಸಲಾಗುವುದು ಎಂದರು.

ಈಸ್ ಆಫ್ ಡೂಯಿಂಗ್ ಬಿಸಿನೆಸ್
ಏಕಗವಾಕ್ಷಿ ಯೋಜನೆಯ ಮೂಲಕ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಅನೇಕ ನೀತಿಗಳನ್ನು ರೂಪಿಸಲಾಗುತ್ತಿದೆ. ಅಲ್ಲದೆ, ಈಸ್ ಆಫ್ ಡೂಯಿಂಗ್ ಬಿಸಿನೆಸ್ ನ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬಂಡವಾಳ ಹೂಡಿಕೆಗೆ ಸಮಸ್ಯೆಗಳಿಗೂ ಪರಿಹಾರ ನೀಡುವಂತಹ ವೆಬ್ಸೈಟನ್ನು ರಚಿಸಲಾಗುತ್ತಿದೆ. ಈ ವೆಬ್ ಸೈಟ್ ನಲ್ಲಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ. ಹಾಗೆಯೇ ಸಮಸ್ಯೆಗಳ ಪರಿಹಾರಕ್ಕೆ ವಿಳಂಬ ತೋರುವ ಅಧಿಕಾರಿಗಳಿಗೆ ರಿಮೈಂಡರ್ ನೀಡುವ ವ್ಯವಸ್ಥೆಯೂ ಇರಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೂಡಿಕೆಗೆ ಪ್ರಶಸ್ತವಾದ ವಾತಾವರಣ
ಕರ್ನಾಟಕವು ಭಾರತದಲ್ಲಿ ಮೊದಲ ಬಾರಿಗೆ ತೆರಿಗೆ ಆಧಾರಿತ ಪ್ರೋತ್ಸಾಹಗಳ ಬದಲಾಗಿ ಉತ್ಪಾದನಾ ಆಧಾರಿತ ಕಾರ್ಯಕ್ಷಮತೆಯನ್ನು ಉತ್ತೇಜಿಸಲು ವಾರ್ಷಿಕ ವಹಿವಾಟಿನ ಮೇಲೆ ಪ್ರೋತ್ಸಾಹಗಳನ್ನು ನೀಡಲು ಉದ್ದೇಶಿಸಿದೆ. ಒಟ್ಟಾರೆಯಾಗಿ ರಾಜ್ಯವನ್ನು ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವುದು ಹಾಗೂ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವುದು ನಮ್ಮ ಮೂಲ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಹೂಡಿಕೆಗೆ ಪ್ರಶಸ್ತವಾದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

ಉದ್ಯಮಿಗಳ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕಾರ
ಮುಂದಿನ ದಿನಗಳಲ್ಲೂ ಕೈಗಾರಿಕಾ ಸಂಘ ಸಂಸ್ಥೆಗಳು ಹಾಗೂ ಬಂಡವಾಳ ಹೂಡಿಕೆಗೆ ಒಲವು ತೋರಿಸುವ ಕೈಗಾರಿಕೋದ್ಯಮಿಗಳ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಫಾರಿನ್ ಇನ್ವೆಸ್ಟರ್ ಫೋರಂನ ಕೃಷ್ಣ ಕುಮಾರ್, ಇಂಡಿಪೆಂಡೆಂಟ್ ಅಡ್ವೈಸರಿ ಸರ್ವೀಸಸ್ ಫಾರಿನ್ ಇನ್ವೆಸ್ಟರ್ಸ್ ಕೌನ್ಸಿಲ್, ಡೆಪ್ಯೂಟಿ ಕೌನ್ಸಲ್ ಜೆನೆರಲ್ ಆಫ್ ಜಪಾನ್ ಇನ್ ಕರ್ನಾಟಕ ಹಿ ಮೌರೊ ಕತ್ಸುಮಾಸಾ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದರು.












Click it and Unblock the Notifications