Budget 2025: ಅಡಿಕೆ ಬೆಳೆಗಾರರಿಗೆ ಬಜೆಟ್ನಲ್ಲಿ ಸಿಗುತ್ತಾ ಸಿಹಿ ಸುದ್ದಿ?
ಫೆಬ್ರವರಿ 1ರಂದು ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಲಿದ್ದು ಈ ಬಜೆಟ್ ಬಗ್ಗೆ ಹೆಚ್ಚಿನ ನಿರೀಕ್ಷೆಇಟ್ಟುಕೊಳ್ಳಲಾಗಿದೆ. ಮಧ್ಯಮವರ್ಗದ ನಿರೀಕ್ಷೆಗಳು ಹೆಚ್ಚಾಗಿದ್ದು, ಕೃಷಿ ವಲಯ ಕೂಡ ಬಜೆಟ್ನಲ್ಲಿ ಹಲವು ಕೊಡುಗೆಗಳು ಸಿಗುವ ನಿರೀಕ್ಷೆ ಇಟ್ಟುಕೊಂಡಿದೆ. ಅದರಲ್ಲೂ ಅಡಿಕೆ ಬೆಳೆಗಾರರು ಈ ಹಲವು ವರ್ಷಗಳ ಬೇಡಿಕೆ ಈ ವರ್ಷವಾದರೂ ಈಡೇರಬಹುದು ಎಂದು ವಿಶ್ವಾಸವಿಟ್ಟುಕೊಂಡಿದ್ದಾರೆ.
ಅಡಿಕೆ ಬೆಳೆ ಹಲವು ರೋಗಗಳಿಂದ ಬಳಲುತ್ತಿದ್ದು ಅಧ್ಯಯನ ಮಾಡಿ ಪರಿಹಾರ ಕಂಡುಹಿಡಿಯಲು ಕೇಂದ್ರ ಸರ್ಕಾರ ಹಣ ಮೀಸಲಿಡುವಂತೆ ಹಲವು ವರ್ಷಗಳಿಂದ ಒತ್ತಾಯಿಸಲಾಗುತ್ತಿದ್ದು ಕೇಂದ್ರ ಸರ್ಕಾರ ಈ ಬಾರಿ ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸವಿದೆ.

ಶಿವಮೊಗ್ಗ ಜಿಲ್ಲೆ ಸಾಗರದ ಎಪಿಎಂಸಿ ಪ್ರಾಂಗಣದಲ್ಲಿ ಸಾಗರ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ವತಿಯಿಂದ ನಡೆದಿದ್ದ ಅಡಕೆ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಾವು ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂದು ರಾಜ್ಯದ ಅಡಿಕೆ ಬೆಳೆಗಾರರು ನಂಬಿದ್ದಾರೆ.
ಅಡಿಕೆ ಬೆಳಗಾರರ ಬೇಡಿಕೆಗಳೇನು?
ಅಡಿಕೆ ಬೆಳೆಗಾರು ಇತ್ತೀಚಿನ ವರ್ಷಗಳಲ್ಲಿ ತುಂಬಾ ಸಮಸ್ಯೆ ಎದುರಿಸುತ್ತಿದ್ದಾರೆ. ಹಳದಿ ರೋಗ, ಕಾಯಿ ಕೊಳೆ ರೋಗ, ಅಣಬೆ ರೋಗಗಳು ಮಲೆನಾಡು ಮತ್ತು ಕರಾವಳಿ ಭಾಗದ ಅಡಿಕೆ ಬೆಳೆಗಾರರನ್ನು ಇನ್ನಿಲ್ಲದಂತೆ ಬಾಧಿಸುತ್ತಿದೆ. ಈ ರೋಗಗಳ ನಿಯಂತ್ರಣ ಕ್ರಮಗಳನ್ನು ತಿಳಿಯಲು ಹೆಚ್ಚಿನ ಅಧ್ಯಯನದ ಅಗತ್ಯವಿದ್ದು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಬೆಳೆಗಾರರು ಒತ್ತಾಯಿಸುತ್ತಿದ್ದಾರೆ.
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಾಗರಕ್ಕೆ ಬಂದಿದ್ದ ವೇಳೆ, ಅಡಿಕೆಯನ್ನು ಬಾಧಿಸುತ್ತಿರುವ ರೋಗಗಳನ್ನು ಅಧ್ಯಯನ ಮಾಡಲು ಮತ್ತು ಅವುಗಳ ನಿಯಂತ್ರಣ ಮಾಡುವ ಬಗ್ಗೆ ವರದಿ ನೀಡಲು ತಜ್ಞರ ತಂಡವನ್ನು ರಚನೆ ಮಾಡಲು ಬಜೆಟ್ನಲ್ಲಿ ಹಣ ಮೀಸಲಿಡುವ ಸಾಧ್ಯತೆ ಇದೆ.
ಅಡಿಕೆ ತಿಂದರೆ ಕ್ಯಾನ್ಸರ್ ಬರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ ಗುಟ್ಕಾ ತಿನ್ನುವುದರಿಂದ ಕ್ಯಾನ್ಸರ್ ಬರುವುದನ್ನೇ ಅಡಿಕೆ ತಿಂದರೆ ಬರುತ್ತದೆ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಈ ಬಗ್ಗೆ ಕೂಡ ಸಂಶೋಧನೆ ನಡೆಸಲು ಕೇಂದ್ರ ಸರ್ಕಾರ ಹಣ ಮೀಸಲಿಡುವ ಬಗ್ಗೆ ನಿರೀಕ್ಷೆ ಮಾಡಲಾಗಿದೆ.












Click it and Unblock the Notifications