ಅಂತರ್ಜಾತಿ ವಿವಾಹವಾದ ದಂಪತಿಗೆ ಬಹಿಷ್ಕಾರ: ಕೊಳ್ಳೇಗಾಲದ 12 ಮಂದಿ ಬಂಧನ
ಚಾಮರಾಜನಗರ, ಮಾರ್ಚ್ 10: ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡು ದಂಪತಿಗೆ ಬಹಿಷ್ಕಾರ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಗರ-ಮಾಂಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಖಂಡರುಗಳಾದ ವೆಂಕಟಶೆಟ್ಟಿ, ಮಹದೇವ, ಕಣ್ಣಪ್ಪ ಸೇರಿದಂತೆ ಒಟ್ಟು 12 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿಯಲ್ಲಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಯಜಮಾನರು 3 ಲಕ್ಷ ದಂಡ ಹಾಕಿ ಗ್ರಾಮದಿಂದ ಹೊರ ಉಳಿಯುವಂತೆ ಬಹಿಷ್ಕಾರ ಹಾಕಿದ್ದಾರೆ ಎಂದು ಕೊಳ್ಳೇಗಾಲ ಡಿ.ವೈ.ಎಸ್.ಪಿ ಕಚೇರಿಗೆ ಗೋವಿಂದರಾಜು ಹಾಗೂ ಶ್ವೇತಾ ದೂರು ಕೊಟ್ಟು ಅಳಲು ತೋಡಿಕೊಂಡಿದ್ದರು.

ಗೋವಿಂದರಾಜು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೂವಿನ ಕೊಪ್ಪಲು ಗ್ರಾಮದ ದಲಿತ ಜನಾಂಗಕ್ಕೆ ಸೇರಿದ ಪ್ರಕಾಶ್ ಎಂಬುವರ ಮಗಳಾದ ಶ್ವೇತಾ ಜೊತೆ ಪರಸ್ಪರ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ 5 ವರ್ಷಗಳ ಹಿಂದೆ ಮಳವಳ್ಳಿಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿಕೊಂಡಿದ್ದರು.
ಗೋವಿಂದರಾಜು ಮಳವಳ್ಳಿಯಲ್ಲಿ ಮನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಆಗಾಗ ಗೋವಿಂದರಾಜು ಹಾಗೂ ಶ್ವೇತಾ ಕುಣಗಳ್ಳಿ ಗ್ರಾಮಕ್ಕೆ ಬಂದು ಹೋಗುತ್ತಿದ್ದು ಐದು ವರ್ಷದಿಂದ ಜೀವನ ನಡೆಸುತ್ತಿದ್ದರು. ಆದರೆ ಗೋವಿಂದರಾಜು ಅವರ ಮನೆಯಲ್ಲಿ ಅಂತರ್ ಜಾತಿ ವಿವಾಹ ತಿಳಿದಿದ್ದರೂ ಸಹ ಮನೆಯವರು ಯಾರು ಸಹ ತೊಂದರೆ ನೀಡಲಿಲ್ಲ.
ತಿಂಗಳಿಗೆ 2 ರಿಂದ 3 ಬಾರಿ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಆದರೆ ಗೋವಿಂದರಾಜು ಅವರ ಅಕ್ಕಪಕ್ಕದ ನಿವಾಸಿಗಳು ಅಂತರ್ಜಾತಿ ವಿವಾಹದ ಬಗ್ಗೆ ಮಾಹಿತಿಯನ್ನು ಪಡೆದು ಶ್ವೇತಾ ನಮ್ಮ ಜಾತಿಯವಳಲ್ಲ, ಅವಳು ದಲಿತ ಜನಾಂಗಕ್ಕೆ ಸೇರಿದವಳು ಎಂದು ಪಕ್ಕದ ಮನೆಯವರಾದ ಜಯಲಕ್ಷ್ಮಿ, ಮಧು, ರಂಗಸ್ವಾಮಿ, ಕುಳ್ಳ, ಮಹದೇವಪ್ಪ ಮಹದೇವ ಶೆಟ್ಟಿ ಇವರುಗಳು ಗ್ರಾಮದ ಯಜಮಾನರುಗಳಿಗೆ ಮಾಹಿತಿ ನೀಡಿ ಎರಡರಿಂದ ಮೂರು ಬಾರಿ ಪಂಚಾಯಿತಿ ನಡೆಸಿ ದಂಡ ಕಟ್ಟಬೇಕು ಎಂದು ಸೂಚಿಸಿದ್ದರು.

ದಂಡ ಕಟ್ಟದಿದ್ದಲ್ಲಿ ದಂಪತಿ ಅಂಗಡಿಗಳಲ್ಲಿ ಅಕ್ಕಿ, ತರಕಾರಿ, ಹಾಲು ನೀಡುವುದಿಲ್ಲ ನೀರನ್ನು ಸಹ ತೆಗೆದುಕೊಳ್ಳುವಂತಿಲ್ಲ ಎಂದು ಮುಖಂಡರು ತೀರ್ಪು ನೀಡಿದ್ದರು. ಗ್ರಾಮದ ಯಜಮಾನರಾದ ವೆಂಕಟಶೆಟ್ಟಿ ,ಮಹದೇವ, ಮೊಂಡಶೆಟ್ಟಿ, ಕಣ್ಣಪ್ಪ, ನಂಜಶೆಟ್ಟಿ, ಮಹದೇವ ಶೆಟ್ಟಿ, ಸಿದ್ದೇಶ್, ಪಂಚಾಯಿತಿ ಮಾಡಿ ನೀವು ತಪ್ಪು ಮಾಡಿದ್ದೀರಾ ಆ ಕಾರಣ 3 ಲಕ್ಷ ದಂಡ ಕಟ್ಟಬೇಕು ಎಂದು ಯಜಮಾನರು ಮಾರ್ಚ್ 1 ರಂದು ಕೊನೆಯ ದಿನಾಂಕ ನೀಡಿದರು.
ನೀವು ದಂಡ ಕಟ್ಟಿದರು ಸಹ ನಿಮ್ಮ ಸೊಸೆ, ಮಗ ಗ್ರಾಮಕ್ಕೆ ಪ್ರವೇಶ ಮಾಡುವಂತಿಲ್ಲ ನೀವು ಅವರ ಜೊತೆ ಮಾತನಾಡುವಂತಿಲ್ಲ. ಈಗ 3 ಲಕ್ಷ ರೂಪಾಯಿ ಕಟ್ಟಿದರೆ ಗ್ರಾಮದವರು ಎಂದಿನಂತೆ ನಿಮ್ಮನ್ನು ಮಾತನಾಡಿಸುತ್ತಾರೆ ಎಂದು ಬಹಿಷ್ಕಾರ ಹಾಕಿದ್ದರು. ತಮ್ಮ ಮಾವನವರು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಅವರ ಬಳಿ 3 ಲಕ್ಷ ರೂ ಇಲ್ಲ ಹಾಗಾಗಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಡಿ.ವೈ.ಎಸ್.ಪಿ ದೂರು ನೀಡಿದ್ದರು.
ಈ ಸಂಬಂಧ ಕೊಳ್ಳೇಗಾಲ ಡಿವೈಎಸ್ಪಿ ದೂರು ಪಡೆದು ಮಾಂಬಳ್ಳಿ ಪೊಲೀಸರಿಗೆ ಎಸ್ಸಿಎಸ್ಟಿ ದೌರ್ಜನ್ಯದಡಿ ಪ್ರಕರಣ ದಾಖಲಿಸುವಂತೆ ಸೂಚಿಸಿ ತನಿಖೆ ಕೈಗೊಂಡಿದ್ದರು. ಅದರಂತೆ, ಈಗ 12 ಮಂದಿಯನ್ನು ಬಂಧಿಸಲಾಗಿದೆ.
ಅಂತರ್ಜಾತಿ ವಿವಾಹವಾದ ದಂಪತಿಗೆ 1 ಲಕ್ಷ ಪರಿಹಾರ
ಅಂತರ್ಜಾತಿ ವಿವಾಹವಾಗಿರುವ ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಗೋವಿಂದರಾಜು ಹಾಗೂ ಶ್ವೇತಾ ದಂಪತಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂತ್ರಸ್ತರ ಪರಿಹಾರದ 1 ಲಕ್ಷ ರೂಪಾಯಿ ಚೆಕ್ಅನ್ನು ತಹಶೀಲ್ದಾರ್ ಮಂಜುಳಾ ವಿತರಣೆ ಮಾಡಿದ್ದಾರೆ.
ಬಹಿಷ್ಕಾರಕ್ಕೆ ಒಳಗಾಗಿದ್ದ ಕುಟುಂಬಕ್ಕೆ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂತ್ರಸ್ತರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಲಾಗಿದ್ದು, ಮೊದಲ ಹಂತವಾಗಿ 1 ಲಕ್ಷ ರೂಪಾಯಿ ಚೆಕ್ ಅನ್ನು ವಿತರಣೆ ಮಾಡಲಾಗಿದೆ. ಯಾರು ಸಹ ಭಯಪಡುವಂತಿಲ್ಲ, ದಂಪತಿಯ ಕುಟುಂಬದ ಜೊತೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಇದೆ ಎಂದು ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಡಿ.ಡಿ ಮಲ್ಲಿಕಾರ್ಜುನ್ ಧೈರ್ಯ ತುಂಬಿದ್ದಾರೆ.












Click it and Unblock the Notifications