ಅತ್ಯಾಚಾರ ಪ್ರಕರಣ: ಚಾಮರಾಜನಗರದಲ್ಲಿ ಇಬ್ಬರು ಅಪರಾಧಿಗಳಿಗೆ 20 ವರ್ಷ ಕಠಿಣ ಶಿಕ್ಷೆ, ತಲಾ 20 ಸಾವಿರ ರೂ. ದಂಡ
ಚಾಮರಾಜನಗರ, ಆಗಸ್ಟ್, 24: ಪ್ರತ್ಯೇಕ ಅತ್ಯಾಚಾರ ಪ್ರಕರಣಗಳಲ್ಲಿ ಚಾಮರಾಜನಗರ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ನ್ಯಾಯಾಲಯವು ಇಬ್ಬರು ಅಪರಾಧಿಗಳಿಗೆ ತಲಾ 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಇನ್ನು ಪ್ರಕರಣಗಳಲ್ಲಿ ಸಂತ್ರಸ್ತರಾದ ಅಪ್ರಾಪ್ತ ಬಾಲಕಿಯರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಹಣವನ್ನು 30 ದಿನದ ಒಳಗೆ ಕೊಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾ.ಎ.ಸಿ.ನಿಶಾರಾಣಿ ಆದೇಶ ನೀಡಿದ್ದಾರೆ.
ಪ್ರಕರಣ-1
5 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರ ಬಸವರಾಜು (35) ಶಿಕ್ಷೆಗೊಳಗಾದ ಅಪರಾಧಿ. ಈತ 2019ರ ಡಿಸೆಂಬರ್ 2ರಂದು ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಸಾಕ್ಷ್ಯಾಧಾರಗಳಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಸವರಾಜನಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿಲಾಗಿದೆ.

ಪ್ರಕರಣ-2
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಚಾಮರಾಜನಗರ ತಾಲೂಕಿನ ಗ್ರಾಮವೊಂದರ ನಾಗೇಶ್(23) ಶಿಕ್ಷೆಗೆ ಗುರಿಯಾದ ವ್ಯಕ್ತಿ. 2021ರ ಸೆಪ್ಟಂಬರ್ 13ರಂದು 12ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ತನ್ನ ಜೊತೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈತನ ವಿರುದ್ಧದ ಆರೋಪ ಸಾಕ್ಷಾಧಾರಗಳಿಂದ ಸಾಬೀತಾದ ಹಿನ್ನೆಲೆಯಲ್ಲಿ ಈತನಿಗೆ 20 ವರ್ಷ ಕಠಿಣ ಶಿಕ್ಷೆ, 20 ಸಾವಿರ ದಂಡ ವಿಧಿಸಲಾಗಿದೆ. ಈ ಎರಡು ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಯುವತಿಯ ಕತ್ತು ಸೀಳಿದ ಪಾಗಲ್ ಪ್ರೇಮಿ ಬಂಧನ
ಪ್ರೇಮಿಗಳ ಗಲಾಟೆ ಯುವತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಮಧ್ಯಾಹ್ನದ ವೇಳೆಯೇ ಪ್ರೇಮಿ ಯುವತಿಯ ಕತ್ತು ಸೀಳಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಕೃತ್ಯ ನಡೆದ ಕೆಲವೇ ನಿಮಿಷದಲ್ಲಿ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪುತ್ತೂರಿನ ವಸ್ತ್ರ ಮಳಿಗೆಯೊಂದರಲ್ಲಿ ಕೆಲಸಕ್ಕಿದ್ದ ಬಂಟ್ವಾಳದ ಅಳಿಕೆ ಗ್ರಾಮದ ಗೌರಿ (25) ಕೊಲೆಯಾದ ಯುವತಿ. ಆರೋಪಿ ಪದ್ಮರಾಜ್ (30) ಮತ್ತು ಗೌರಿ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದು, ಕಳೆದ ಕೆಲ ತಿಂಗಳುಗಳಿಂದ ಗಲಾಟೆ ಮಾಡಿಕೊಂಡಿದ್ದರು. ಹಲವು ಬಾರಿ ಗಲಾಟೆ ವಿಪರೀತ ಮಟ್ಟಕ್ಕೆ ತಿರುಗಿ ವಿಟ್ಲ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.
ಇಂದು ಪುತ್ತೂರು ಬಸ್ ನಿಲ್ದಾಣದ ಬಳಿ ಗೌರಿ ಮತ್ತು ಪದ್ಮರಾಜ್ ಜಗಳವಾಡಿಕೊಂಡಿದ್ದಾರೆ. ಜಗಳ ಅತಿರೇಖಕ್ಕೆ ತಿರುಗಿ ಗೌರಿ ಮಹಿಳಾ ಠಾಣೆಗೆ ದೂರು ನೀಡಲು ಬಂದಿದ್ದಾರೆ. ಬಳಿಕವೂ ಠಾಣೆಯ ಮುಂಭಾಗವೇ ಗೌರಿ ಮತ್ತು ಪದ್ಮರಾಜ್ ಜಗಳವಾಡಿಕೊಂಡಿದ್ದಾರೆ. ಜಗಳ ಬೇರೆ ಹಂತಕ್ಕೆ ತಲುಪಿ ರೊಚ್ಚಿಗೆದ್ದ ಪದ್ಮರಾಜ್ ಯುವತಿ ಗೌರಿಯ ಕತ್ತು ಸೀಳಿದ್ದಾನೆ .ಮೂರರಿಂದ ನಾಲ್ಕು ಬಾರಿ ಯುವತಿಯ ಕತ್ತಿಗೆ ಚೂರಿಯಿಂದ ಇರಿದಿದ್ದಾನೆ. ಹೀಗೆ ಗಂಭೀರವಾಗಿ ಹಲ್ಲೆ ನಡೆಸಿ ಸ್ಥಳದಿಂದ ಪದ್ಮರಾಜ್ ಕಾಲ್ಕಿತ್ತಿದ್ದಾನೆ.
ಇತ್ತ ಗಂಭೀರವಾಗಿ ಗಾಯಗೊಂಡ ಗೌರಿಯನ್ನು ಸ್ಥಳೀಯರು ಕೂಡಲೇ ಪುತ್ತೂರು ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಗಂಭೀರ ಗಾಯಗಳಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ರವಾನಿಸುವಾಗ ಗೌರಿ ದಾರಿ ಮಧ್ಯೆ ಕೊನೆಯುಸಿರೆಳಿದಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಪುತ್ತೂರು ಎಸ್ಪಿ ರಿಷ್ಯಂತ್ ಸಿ.ಬಿ. ಭೇಟಿ ನೀಡಿದ್ದಾರೆ. ಸದ್ಯ ಪುತ್ತೂರು ನಗರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.












Click it and Unblock the Notifications