ಗುಂಡ್ಲುಪೇಟೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕೆ 25 ಕುಟುಂಬಗಳಿಗೆ ಬಹಿಷ್ಕಾರ
ಚಾಮರಾಜನಗರ, ಜೂನ್ 13: ಗುಂಡ್ಲುಪೇಟೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕೆ 25 ಕುಟುಂಬಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆರೋಪಿಸಿದ್ದಾರೆ.
ಚಾಮರಾಜನಗರದ ರಾಮಸಮುದ್ರದಲ್ಲಿ ಮಾತನಾಡಿದ ಅವರು, "ಗ್ರಾಮದ ಇತರರ ಜತೆ ಮಾತನಾಡದಂತೆ 25 ಕುಟುಂಬಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಬಹಿಷ್ಕಾರ ಹಾಕಿದ್ದಾರೆ. ಈ ಕುರಿತು ಯಾವುದೇ ಪಕ್ರರಣ ದಾಖಲಾಗಿಲ್ಲ. ಪ್ರಕರಣ ದಾಖಲಿಸಲು ಬಂದಾಗಲೂ ಪೊಲೀಸರು ಕೇಸು ದಾಖಲಿಸಿಕೊಂಡಿಲ್ಲ," ಎಂದು ಹೇಳಿದ್ದಾರೆ.

ಇದಕ್ಕೆ ಸಾಕ್ಷಿಯಾಗಿ ಬೊಮ್ಮಲಾಪುರದಲ್ಲಿ 25 ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಸ್ಥಳೀಯ ಪತ್ರಿಕೆಯ ವರದಿಯನ್ನು ಯಡಿಯೂರಪ್ಪ ಉಲ್ಲೇಖಿಸಿದ್ದಾರೆ.
ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ ನಂತರ ಕುಟುಂಬಗಳು ಮಾಧ್ಯಮಗಳನ್ನು ಸಂಪರ್ಕಿಸಿವೆ ಎನ್ನಲಾಗಿದೆ. ಈ ವೇಳೆ ಮಾಧ್ಯಮಗಳ ಮುಂದೆ ಗ್ರಾಮಸ್ಥರು ಬಿಜೆಪಿಯನ್ನು ಸಂಪರ್ಕಿಸಿದ್ದಕ್ಕೆ ನಮಗೆ ಬಹಿಷ್ಕಾರ ಹಾಕಿದ್ದಾರೆ ಎಂದು ದೂರಿದ್ದಾರೆ.
"ನಮ್ಮ ಅಂಗಡಿಗಳಿಗೆ ಜನ ಬರುತ್ತಿಲ್ಲ. ಯಾರ ಜತೆಗೂ ಮಾತನಾಡಲು ಬಿಡುತ್ತಿಲ್ಲ. ಮಕ್ಕಳನ್ನು ಶಾಲೆಗಳಲ್ಲಿ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಶಾಲೆಯಲ್ಲಿ ಮಕ್ಕಳ ಮೇಲೆ ಅಸ್ಪೃಷ್ಯತೆ ಆಚರಣೆ ಮಾಡುತ್ತಿದ್ದಾರೆ," ಎಂದು ಸ್ಥಳೀಯರು ದೂರಿದ್ದಾರೆ.
ಇನ್ನು, "ಪ್ರಕರಣದ ತನಿಖೆಗೆ ಸೂಚಿಸುತ್ತೇನೆ. ಯಾರೇ ಕಾಂಗ್ರೆಸ್ ಕಾರ್ಯಕರ್ತರು ಇದರಲ್ಲಿ ಪಾಲ್ಗೊಂಡಿದ್ದರೂ ಅವರ ವಿರುದ್ಧ ಕ್ರಮಕ್ಕೆ ಸೂಚಿಸುತ್ತೇನೆ ," ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.












Click it and Unblock the Notifications